ಐದು ನಗರ ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಕಾರ್ಯಕರ್ತರು ಸಿದ್ಧರಾಗಬೇಕು. ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆಗಳೇ ಪಕ್ಷದ ಅಭ್ಯರ್ಥಿಗಳಿಗೆ ಶ್ರೀರಕ್ಷೆಯಾಗಲಿದೆ ಎಂದು ಸಲೀಂ ಅಹಮದ್‌ ತಿಳಿಸಿದರು.

ಬೆಂಗಳೂರು (ಏ.14): ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಕಾರ್ಯಕರ್ತರು ಸಿದ್ಧರಾಗಬೇಕು. ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆಗಳೇ ಪಕ್ಷದ ಅಭ್ಯರ್ಥಿಗಳಿಗೆ ಶ್ರೀರಕ್ಷೆಯಾಗಲಿದೆ ಎಂದು ವಿಧಾನಪರಿಷತ್‌ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹಮದ್‌ ತಿಳಿಸಿದರು. ಮಹಾಲಕ್ಷ್ಮೀ ಲೇಔಟ್‌ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಆಯೋಜಿಸಲಾಗಿದ್ದ ಬಿಎಲ್‌ಎ ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಲೀಂ ಅಹಮದ್‌, ಮುಂಬರುವ ಐದು ನಗರ ಪಾಲಿಕೆ ಚುನಾವಣೆಗೆ ಈಗಿನಿಂದಲೇ ಎಲ್ಲರೂ ಸಿದ್ಧರಾಗಬೇಕು.

ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನಾವು ನೀಡಿದ ಭರವಸೆಯಂತೆ ಐದು ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ. ಗ್ಯಾರಂಟಿ ಯೋಜನೆಗಳು ರಾಜ್ಯದ ಜನರಿಗೆ ನೆಮ್ಮದಿಯ ಬದುಕು ಕಟ್ಟಿಕೊಳ್ಳುವಂತಾಗಿದೆ. ಮುಂಬರುವ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವಿಗೆ ಗ್ಯಾರಂಟಿ ಯೋಜನೆಗಳೇ ಶ್ರೀರಕ್ಷೆಯಾಗಲಿದೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರ ಎಲ್ಲ ಸಮುದಾಯಗಳ ಅಭಿವೃದ್ಧಿಗೆ ಕೆಲಸ ಮಾಡುತ್ತಿದೆ. ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬುದು ನಮ್ಮ ಸರ್ಕಾರದ ಸಂಕಲ್ಪವಾಗಿದೆ ಎಂದು ಹೇಳಿದರು.

ನೈತಿಕತೆಯೇ ಇಲ್ಲದಂತಾಗಿದೆ

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು 12 ವರ್ಷಗಳಾಗಿವೆ. ಆದರೆ, ರಾಜ್ಯಕ್ಕೆ ಯಾವುದೇ ಕೊಡುಗೆ ನೀಡಿಲ್ಲ. ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬರುವಾಗ ಅಚ್ಛೆ ದಿನ್‌ ಬರುತ್ತದೆ ಎಂದು ಹೇಳಿದ್ದರು. ರೈತರ ಆದಾಯ ದ್ವಿಗುಣವಾಗುತ್ತದೆ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ, ಕಪ್ಪು ಹಣ ತಂದು ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರು. ಹಾಕುವ ಭರವಸೆ ನೀಡಿದ್ದರು. ಅದನ್ನು ನಂಬಿ ಜನರು ಬಿಜೆಪಿ ಮತ ಹಾಕಿದ್ದರು. ಆದರೆ, ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಜನರನ್ನು ಭ್ರಮನಿರಸನಗೊಳಿಸಿದೆ. ಚುನಾವಣೆಯಲ್ಲಿ ಬಿಜೆಪಿಗೆ ಮತ ಹೇಳುವ ನೈತಿಕತೆಯೇ ಇಲ್ಲದಂತಾಗಿದೆ ಎಂದು ವಾಗ್ದಾಳಿ ನಡೆಸಿದರು.

ನಗರ ಪಾಲಿಕೆ ಚುನಾವಣೆಯಲ್ಲಿ ಮಹಾಲಕ್ಷ್ಮೀ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷದ ಅತಿಹೆಚ್ಚಿನ ಸ್ಥಾನ ಗೆಲ್ಲಲು ಕಾರ್ಯಕರ್ತರು, ನಾಯಕರು ಶ್ರಮಿಸಬೇಕು. ಪ್ರತಿ ಮನೆಗಳಲ್ಲೂ ಗ್ಯಾರಂಟಿ ಫಲಾನುಭವಿಗಳಿದ್ದು, ಅವರಿಗೆ ನಮ್ಮ ಸರ್ಕಾರದ ಸಾಧನೆಯನ್ನು ತಿಳಿಸಬೇಕು. ಕಾರ್ಯಕರ್ತರು ಪ್ರತಿ ಮನೆಗೆ ತೆರಳು ನಮ್ಮ ಸಾಧನೆ ಪ್ರಚಾರ ಮಾಡಬೇಕು ಹಾಗೂ ಬೆಂಗಳೂರು ನಗರದಲ್ಲಿ ಕೈಗೊಂಡಿರುವ ಪ್ರಮುಖ ಯೋಜನೆಗಳ ಕುರಿತು ಮಾಹಿತಿ ನೀಡಬೇಕು ಎಂದು ಕರೆ ನೀಡಿದರು.