ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ, ಚಲಿಸುತ್ತಿದ್ದ ಟಾಟಾ ಏಸ್ ವಾಹನದ ಮೇಲೆ ಬೃಹತ್ ಮರವೊಂದು ಉರುಳಿಬಿದ್ದಿದೆ. ಈ ದುರಂತದಲ್ಲಿ ವಾಹನದೊಳಗೆ ಸಿಲುಕಿದ್ದ ಚಾಲಕ ತೌಸಿಫ್ ಅವರನ್ನು ಪೊಲೀಸರು ಮತ್ತು ಸ್ಥಳೀಯರು ಹರಸಾಹಸಪಟ್ಟು ರಕ್ಷಿಸಿದ್ದು, ಚಾಲಕ ಗಂಭೀರ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಶಿವಮೊಗ್ಗ, (ಆ.2): ಚಲಿಸುತ್ತಿದ್ದ ಟಾಟಾ ಏಸ್ (ಪಿಕಪ್) ವಾಹನದ ಮೇಲೆ ಬೃಹತ್ ಮರವೊಂದು ಏಕಾಏಕಿ ಉರುಳಿ ಬಿದ್ದು, ಚಾಲಕ ವಾಹನದಲ್ಲೇ ಸಿಲುಕಿಕೊಂಡ ದುರಂತ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬರುವೆ ಗ್ರಾಮದಲ್ಲಿ ನಡೆದಿದೆ.
ತರಕಾರಿ ಮಾರಾಟ ಮಾಡಿ ಮನೆಗೆ ಹಿಂದಿರುವಾಗ ದುರ್ಘಟನೆ
ರಿಪ್ಪನ್ ಪೇಟೆ ಸಮೀಪದ ಬರುವೆ ಗ್ರಾಮದ ಆಚಾರ್ ಕೇರಿ ಬಳಿ ಈ ಘಟನೆ ನಡೆದಿದೆ. ಮದೀನಾ ಕಾಲೋನಿ ನಿವಾಸಿ ತೌಸಿಫ್ ಎಂಬವರು ಟಾಟಾ ಏಸ್ ವಾಹನದಲ್ಲಿ ತರಕಾರಿ ಮಾರಾಟ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.
ನಿರಂತರ ಮಳೆ ಹಾಗೂ ಬಿರುಗಾಳಿಯ ಪರಿಣಾಮ ರಸ್ತೆ ಬದಿಯಲ್ಲಿದ್ದ ಬೃಹತ್ ಮರ ಏಕಾಏಕಿ ವಾಹನದ ಮೇಲೆ ಉರುಳಿ ಬಿದ್ದಿದೆ. ಮರ ಬಿದ್ದ ರಭಸಕ್ಕೆ ವಾಹನ ಸಂಪೂರ್ಣ ಜಖಂಗೊಂಡಿದ್ದು, ಚಾಲಕ ವಾಹನದೊಳಗೆ ಸಿಲುಕಿಕೊಂಡಿದ್ದರು.
ಚಾಲಕನ ರಕ್ಷಣೆ
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ರಿಪ್ಪನ್ ಪೇಟೆ ಪೊಲೀಸ್ ಠಾಣೆ ಪೊಲೀಸರು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಸಾಕಷ್ಟು ಹರಸಾಹಸದ ಬಳಿಕ ವಾಹನದಲ್ಲಿ ಸಿಲುಕಿದ್ದ ಚಾಲಕನನ್ನು ಸುರಕ್ಷಿತವಾಗಿ ಹೊರತೆಗೆದರು.
ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸದಿದ್ದರೂ ಚಾಲಕ ತೌಸಿಫ್ ಗಂಭೀರ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆಯಿಂದ ಕೆಲಕಾಲ ಸಂಚಾರಕ್ಕೂ ಅಡಚಣೆ ಉಂಟಾಗಿತ್ತು.


