ಕೈ ನಾಯಕರಲ್ಲಿ ಅಸಮಾಧಾನ : ನಮ್ಮ ದಾರಿ ನೋಡಿಕೊಳ್ಳುತ್ತೇವೆಂದು ಎಚ್ಚರಿಕೆ
- ಮೂಲ ಹಿರಿಯ ಕಾಂಗ್ರೆಸ್ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಏಕ ಪಕ್ಷೀಯವಾಗಿ ಕಾರ್ಯಕ್ರಮ ಆಯೋಜಿಸುತ್ತಿರೊ ಆರೋಪ
- ಅಸಮಾಧಾನ ವ್ಯಕ್ತಪಡಿಸಿದ ಹಲವು ಕಾಂಗ್ರೆಸ್ ಮುಖಂಡರು
ಶ್ರೀರಂಗಪಟ್ಟಣ (ಜು.21): ಮಾಜಿ ಶಾಸಕ ರಮೇಶ್ ಬಂಡಿಸಿದ್ದೇಗೌಡ ಮೂಲ ಹಿರಿಯ ಕಾಂಗ್ರೆಸ್ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಏಕ ಪಕ್ಷೀಯವಾಗಿ ಕಾರ್ಯಕ್ರಮ ಆಯೋಜಿಸುತ್ತಿದ್ದಾರೆ ಎಂದು ಹಲವು ಕಾಂಗ್ರೆಸ್ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು.
ಪಟ್ಟಣದ ವಸತಿ ಗೃಹ ಒಂದರಲ್ಲಿ ಮಂಗಳವಾರ ಮುಖಂಡ ಪಾಲಹಳ್ಳಿ ಚಂದ್ರಶೇಖರ್ ಕರೆದಿದ್ದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಮಾಜಿ ಶಾಸಕರ ನಡೆಯನ್ನು ತೀವ್ರವಾಗಿ ಖಂಡಿಸಿದರು.
ನಂತರ ಮುಖಂಡ ಪಾಲಹಳ್ಳಿ ಚಂದ್ರಶೇಖರ್ ಮಾತನಾಡಿ ಮಾಜಿ ಶಾಸಕ ರಮೇಶ್ ಬಂಡಿಸಿದ್ದೇಗೌಡ ಈ ಹಿಂದೆ ನಡೆದ ಗ್ರಾಪಂ, ಪುರಸಭೆ, ಟೆಪಿಸಿಎಂಎಸ್ ಸೇರಿದಂತೆ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮೂಲ ಕಾಂಗ್ರೆಸಿಗರನ್ನು ಕಡೆಗಣಿಸಿ ತಮಗೆ ಬೇಕಾದವರಿಗೆ ಬಿ ಫಾರಂ ನೀಡಿ ಅನ್ಯಾಯ ಮಾಡಿದ್ದಾರೆ ಎಂದು ಕಿಡಿಕಾರಿದರು.
ನಮ್ಮವರೇ ನಮ್ಮ ಕಾಲು ಎಳೀತಾರೆ: ಕಾಂಗ್ರೆಸ್ ನಾಯಕ
ಮುಂಬರುವ ತಾಪಂ, ಜಿಪಂ ಚುನಾವಣೆಗಳಲ್ಲಿ ಮೂಲ ಕಾಂಗ್ರೆಸ್ ಮುಖಂಡರನ್ನು ಇದೇ ರೀತಿ ಕಡೆಗಣಿಸಿದರೆ ತಕ್ಕ ಪ್ರತ್ಯುತ್ತರ ನೀಡಲಿದ್ದಾರೆ. ಚುನಾವಣೆಯಲ್ಲಿ ಹಿರಿಯ ಕಾಂಗ್ರೆಸ್ಸಿಗರಿಗೆ ಆದ್ಯತೆ ನೀಡಬೇಕು. ಇಲ್ಲದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕಾಂಗ್ರೆಸಿಗರಿಂದಲೇ ಎಚ್ಚರಿಕೆ ಮಾತು ಕೇಳಿ ಬಂದವು.
ಶ್ರೀರಂಗಪಟ್ಟಣ ಕ್ಷೇತ್ರದಿಂದ ಮುಂದಿನ ವಿಧಾನಸಭಾ ಚುನಾವಣೆಗೆ ನಾನು ಸಹ ಅಕಾಂಕ್ಷಿತವಾಗಿದ್ದೇನೆ. ಈ ಹಿಂದೆ ರಮೇಶ ಬಂಡಿಸಿದ್ದೇಗೌಡ ತಾವು ಶಾಸಕರಾಗಿದ್ದ ವೇಳೆ ನಮ್ಮ ಪಕ್ಷದ ಎಂಎಲ್ಸಿ ಅಭ್ಯರ್ಥಿಗಳ ಗೆಲುವಿಗೆ ಕಾರಣರಾಗಿದ್ದರು ಎಂಬ ಒಂದೇ ಒಂದು ಕಾರಣಕ್ಕೆ ಅವರಿಗೆ ಟಿಕೆಟ್ ನೀಡಿತ್ತು. ಮುಂದಿನ ಬಾರಿ ಈ ರೀತಿ ಆಗಲು ಬಿಡುವುದಿಲ್ಲ ಎಂದು ಖಾರವಾಗಿ ಹೇಳಿದರು.
ಸಭೆಯಲ್ಲಿದ್ದ ಹಿರಿಯ ಕಾಂಗ್ರೆಸ್ ಮುಖಂಡರು ಸಹ ಮಾಜಿ ಶಾಸಕರ ನಡೆ ವಿರುದ್ಧ ಬೇಸರ ವ್ಯಕ್ತಪಡಿಸಿ ಪಕ್ಷ ಬಲವರ್ಧನೆಗೆ ಮೂಲ ಕಾಂಗ್ರೆಸಿಗರನ್ನು ಕರೆದೊಯ್ಯಬೇಕು. ಇಲ್ಲದಿದ್ದರೆ ನಮ್ಮ ದಾರಿ ನಾವು ಹಿಡಿದುಕೊಳ್ಳುವುದಾಗಿ ಹೇಳಿದರು.