ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಬೋಸರಾಜು ತಿಳಿಸಿದರು. 

ರಾಯಚೂರು (ಸೆ.28): ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಬೋಸರಾಜು ತಿಳಿಸಿದರು. ಸ್ಥಳೀಯ ಕೇಂದ್ರ ಬಸ್ ನಿಲ್ದಾಣದ ಹತ್ತಿರವಿರುವ ಐತಿಹಾಸಿಕ ಕೋಟೆ ಮೆಕ್ಕಾ ದರವಾಜಾದಲ್ಲಿ ಜಿಲ್ಲಾಡಳಿತ, ಜಿಪಂ, ಪ್ರವಾಸೋದ್ಯಮ ಇಲಾಖೆ, ನಗರಾಭಿವೃದ್ಧಿ ಪ್ರಾಧಿಕಾರ, ಶಿಕ್ಷಣ ಇಲಾಖೆ, ಪುರಾತತ್ವ ಸಂಗ್ರಹಾಲಯಗಳ ಮತ್ತು ಪರಂಪರೆ ಇಲಾಖೆ ಹಾಗೂ ನಗರಸಭೆ ರಾಯಚೂರು ಇವರುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. 

Add Asianetnews Kannada as a Preferred SourcegooglePreferred

ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಇನ್ನಷ್ಟು ಆಕರ್ಷಣೀಯ ಮತ್ತು ಮೂಲ ಸೌಲಭ್ಯ ಕಲ್ಪಿಸುವುದರ ಜೊತೆಗೆ ಉತ್ತಮ ಪರಿಸರ ಹಾಗೂ ಸ್ವಚ್ಛತೆ ಬಗ್ಗೆ ವಿಶೇಷ ಆದ್ಯತೆ ನೀಡುವುದು ಅತ್ಯಗತ್ಯವಾಗಿದೆ. ಪ್ರವಾಸೋದ್ಯಮ ಅಭಿವೃದ್ಧಿಯಾದರೆ ಪರೋಕ್ಷವಾಗಿ ಉದ್ಯೋಗಗಳು ಸೃಷ್ಟಿಯಾಗುತ್ತವೆ. ಇದರಿಂದ ಮಧ್ಯಮ ವರ್ಗದ ಆದಾಯವು ಹೆಚ್ಚಲಿದೆ ಎಂದರು.

ರಾಯಚೂರಿನ ಮಲಿಯಬಾದ್ ಸೇರಿದಂತೆ ಕಲ್ಯಾಣ ಕರ್ನಾಟಕದ ಪ್ರಮುಖ ಪ್ರವಾಸಿ ತಾಣಗಳ ತಾಣಗಳ ಅಭಿವೃದ್ಧಿಗೆ ಇಲ್ಲಿಯ ಅಧಿಕಾರಿಗಳು ಶ್ರಮಿಸಬೇಕು. ಜಿಲ್ಲೆಯ ಪ್ರವಾಸಿ ತಾಣಗಳ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಮಾಹಿತಿ ನೀಡಬೇಕು. ರಾಜ್ಯ ಸರ್ಕಾರವು ಪ್ರವಾಸಿ ತಾಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಈ ಭಾಗದ ಪ್ರವಾಸಿ ತಾಣಗಳ ಕುರಿತು ಪ್ರಾಧಿಕಾರ ರಚನೆ ಮಾಡುವಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಅದಕ್ಕೆ ಬೇಕಾಗುವ ಎಲ್ಲಾ ನೆರವು ನೀಡುವುದಾಗಿ ಹೇಳಿದರು.

ರಾಮನಗರವನ್ನು ಬರಪೀಡಿತ ತಾಲೂಕಾಗಿ ಘೋಷಿಸಲು ಒತ್ತಾಯಿಸುವೆ: ಶಾಸಕ ಇಕ್ಬಾಲ್ ಹುಸೇನ್

ಪ್ರವಾಸೋದ್ಯಮವು ದೇಶದ ಪ್ರಗತಿಗೆ ಮತ್ತು ಆರ್ಥಿಕತೆಗೆ ಬಹಳ ದೊಡ್ಡ ಕೊಡುಗೆ ನೀಡುವುದರೊಂದಿಗೆ, ಪ್ರವಾಸಿಗರ ಮತ್ತು ಸ್ಥಳೀಯರ ನಡುವೆ ಕಲೆ ಮತ್ತು ಸಂಸ್ಕೃತಿ ಪೋಷಿಸುತ್ತದೆ ಎಂದರು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ನರಸಮ್ಮ ಮಾಡಗಿರಿ, ಉಪಾಧ್ಯಕ್ಷ ಜಹಾನಿಯ ಸಾಜೀದ ಸಮೀರ್, ಹಿರಿಯ ಸದಸ್ಯ ಜಯಣ್ಣ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಾಂಡ್ವೆ ರಾಹುಲ್ ತುಕರಾಮ, ಅಪರ ಜಿಲ್ಲಾಧಿಕಾರಿ ಶಿವಾನಂದ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಂದ್ರ ಜಲ್ದಾರ್ ಸೇರಿ ವಿವಿಧ ಇಲಾಖೆ ಅಧಿಕಾರಿ, ಸಿಬ್ಬಂದಿ, ಕಾಲೇಜು ವಿದ್ಯಾರ್ಥಿಗಳು ಇದ್ದರು.