2025ರ ಗಣರಾಜ್ಯೋತ್ಸವವನ್ನು ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಆಚರಿಸಲಾಗುತ್ತಿದೆ. ರಾಜ್ಯಪಾಲರು ಧ್ವಜಾರೋಹಣ ನೆರವೇರಿಸಲಿದ್ದು, ವಿವಿಧ ಕಾರ್ಯಕ್ರಮಗಳು ನಡೆಯಲಿವೆ.
ಬೆಂಗಳೂರು (ಜ.24): ಈ ಬಾರಿ 2025ನೇ ಸಾಲಿನ ಗಣರಾಜ್ಯೋತ್ಸವ ದಿನಾಚರಣೆಯನ್ನು ಆದ್ದೂರಿಯಾಗಿ ಆಚರಿಸಲಾಗುತ್ತಿದೆ. ಗಣರಾಜ್ಯೋತ್ಸವ ದಿನಾಚರಣೆಯ ರಾಜ್ಯಮಟ್ಟದ ಸಮಾರಂಭಕ್ಕೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜಾಗಿದ್ದು ಗಣರಾಜ್ಯೋತ್ಸವ ದಿನಾಚರಣೆಗೆ ಸಕಲ ಸಿದ್ಧೆತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು.
ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವ ದಿನಾಚರಣೆಯ ರಾಜ್ಯಮಟ್ಟದ ಸಮಾರಂಭದ ಸಿದ್ಧತೆಗಳ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜನವರಿ 26 ರಂದು ಬೆಳಗ್ಗೆ 8.58ಕ್ಕೆ ರಾಜ್ಯಪಾಲರು 9.00 ಗಂಟೆಗೆ ರಾಷ್ಟ್ರ ಧ್ವಜಾರೋಹಣ ಮಾಡಲಿದ್ದಾರೆ. ಧ್ವಜಾರೋಣದ ನಂತರ ತೆರೆದ ಜೀಪಿನಲ್ಲಿ ಪೆರೇಡ್ ಪರಿವೀಕ್ಷಣೆ ಮತ್ತು ಗೌರವ ರಕ್ಷೆ ಸ್ವೀಕರಿಸಿ ನಾಡಿನ ಜನತೆಗೆ ಗಣರಾಜ್ಯೋತ್ಸವದ ಸಂದೇಶವನ್ನು ನೀಡಲಿದ್ದಾರೆ ಎಂದು ತಿಳಿಸಿದರು.
ಪಂಥಸಂಚಲನದಲ್ಲಿ ಪೊಲೀಸ್/ ಕೇರಳ, ಸ್ಕೌಟ್ಸ್, ಗೈಡ್ಸ್, ಎನ್.ಸಿ.ಸಿ, ಸೇವಾದಳ ಹಾಗೂ ವಿವಿಧ ಶಾಲೆಗಳ ಮಕ್ಕಳನ್ನೊಳಗೊಂಡಂತೆ ಕವಾಯತು ಮತ್ತು ಬ್ಯಾಂಡ್ ನ ಒಟ್ಟು 38 ತುಕಡಿಗಳಲ್ಲಿ ಸುಮಾರು 1,150 ಮಂದಿ ಭಾಗವಹಿಸಲಿದ್ದಾರೆ ಹಾಗೂ ಶಾಲಾ ಮಕ್ಕಳಿಂದ ಒಟ್ಟು 2 ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸುಮಾರು 1500 ಮಕ್ಕಳು ಭಾಗವಹಿಸಲಿದ್ದಾರೆ. ಪೊಲೀಸ್ ಇಲಾಖಾ ವತಿಯಿಂದ 2 ಹಾಗೂ ಮಿಲಿಟರಿ ಇಲಾಖಾ ವತಿಯಿಂದ 3 ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳ ನಂತರ ರಾಜ್ಯಪಾಲರಿಂದ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ.
ಕಿಕ್ಕೇರಿ ಕೃಷ್ಣಮೂರ್ತಿ ಮತ್ತು ತಂಡದಿಂದ ನಾಡಗೀತೆ ಮತ್ತು ರೈತಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ. ಬೆಂಗಳೂರು ದಕ್ಷಿಣ ವಲಯ-3 ಅಗರದ ಕರ್ನಾಟಕ ಪಬ್ಲಿಕ್ ಶಾಲೆಯ 800 ಮಕ್ಕಳು 'ನಾವೆಲ್ಲರೂ ಒಂದೇ ನಾವು ಭಾರತೀಯರು' ಹಾಗೂ ಹೇರೋಹಳ್ಳಿಯ ಬಿಬಿಎಂಪಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಒಟ್ಟು 650 ಮಕ್ಕಳು 'ಅರಿವೇ ಅಂಬೇಡ್ಕರ್' ಕುರಿತು ನೃತ್ಯ ಪ್ರದರ್ಶಿಸಲಿದ್ದಾರೆ. ಗೂರ್ಖಾ ರೈಫಲ್ಸ್ ತಂಡದಿಂದ ಖುಕ್ರಿ ನೃತ್ಯ ಹಾಗೂ ಪಂಜಾಬ್ನ ಸೈನಿಕರಿಂದ ಭಾಂಗ್ರಾ ಪಂಜಾಬಿ ಜಾನಪದ ನೃತ್ಯ ಮತ್ತು ಗ್ಯಾಟ್ಕಾ ಟೀಮ್, ಮೈಸೂರಿನ ಕೆ.ಐ.ಆರ್.ಪಿ ಮೌಂಟೆಡ್ ಪೊಲೀಸ್ ತಂಡದಿಂದ ಟೆಂಟ್ ಪೆಗ್ಗಿಂಗ್ ಹಾಗೂ ಆಂತರಿಕ ಭದ್ರತಾ ವಿಭಾಗದ ಭದ್ರತಾ ಬಯೋತ್ಪಾದನ ನಿಗ್ರಹ ಕೇಂದ್ರದಿಂದ ಬಸ್ ಹಸ್ತಕ್ಷೇಪ ಪ್ರದರ್ಶನ ನೀಡಲಿದ್ದಾರೆ ಎಂದರು.
ಇದನ್ನೂ ಓದಿ: ಮೈಕ್ರೋಫೈನಾನ್ಸ್ ಕಾಟ ಸಹಿಸದೆ ಸಿಎಂಗೆ ಮಾಂಗಲ್ಯ ಸರ ರವಾನೆ!
ಗಣರಾಜ್ಯೋತ್ಸವ ದಿನಾಚರಣೆಯ ಕಾರ್ಯಕ್ರಮದ ವೀಕ್ಷಿಸಲು ಆಗಮಿಸುವ ಅತಿಗಣ್ಯ, ಗಣ್ಯ, ಇತರೆ ಸಾರ್ವಜನಿಕರಿಗೆ ಆಸನದ ವ್ಯವಸ್ಥೆ ಕಲ್ಪಿಸಲಾಗಿದೆ. ಯಾವುದೇ ಆಕಸ್ಮಿಕ ವಿಪತ್ತು ಸಂಭವಿಸಿದಲ್ಲಿ ಅಗತ್ಯವಿರುವಷ್ಟು ಆಂಬುಲೆನ್ಸ್, ವೈದ್ಯಕೀಯ ಹಾಗೂ ವೈದ್ಯಕೀಯೇತರ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಹಾಗೂ ನಗರದ ಹಲವು ಆಸ್ಪತ್ರೆಗಳನ್ನು ಗುರುತಿಸಿ ಸಾಕಷ್ಟು ಸಂಖ್ಯೆಯಲ್ಲಿ ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ ಎಂದು ಮಾಹಿತಿ ನೀಡಿದರು.
ಬೆಂಗಳೂರು ನಗರದ ಪೊಲೀಸ್ ಆಯುಕ್ತ ಬಿ.ದಯಾನಂದ ಮಾತನಾಡಿ, ಗಣರಾಜ್ಯೋತ್ಸವ ದಿನಾಚರಣೆ ವೇಳೆ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಬೆಂಗಳೂರು ನಗರದ ಎಲ್ಲಾ ವಿಭಾಗಗಳಿಂದ 8 ಡಿಸಿಪಿ, 17-ಎಸಿಪಿ, 44-ಪಿಐ, 114-ಪಿ.ಎಸ್.ಐ/ಮಪಿಎಸ್ಐ, 58-ಎ.ಎಸ್.ಐ, 551-ಹೆಚ್.ಸಿ/ಪಿಸಿ, 80-ಮಹಿಳಾ ಸಿಬ್ಬಂದಿಗಳೊಂದಿಗೆ 149-ಸಾದಾ ಉಡುಪಿನ ಅಧಿಕಾರಿ ಮತ್ತು ಸಿಬ್ಬಂದಿಗಳು ಮತ್ತು 30 ಜನ ಕ್ಯಾಮರಾ ಸಿಬ್ಬಂದಿಗಳು ಸೇರಿ ಒಟ್ಟು 1,051 ಜನ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ತಿಳಿಸಿದರು.
ಮೈದಾನ ಬಂದೋಬಸ್ತ್ ಕರ್ತವ್ಯಕ್ಕಾಗಿ 10 ಕೆ.ಎಸ್.ಆರ್.ಪಿ/ಸಿ.ಎ.ಆರ್ ತುಕಡಿಗಳು, 2 ಅಗ್ನಿ ಶಾಮಕ ವಾಹನಗಳು, 2 ಅಂಬುಲೆನ್ಸ್, 4- ಖಾಲಿ ವಾಹನಗಳು, 1 ಕ್ಷಿಪ್ರ ಕಾರ್ಯಾಚರಣೆ ಪಡೆ, 1 ಡಿ ಸ್ವಾಟ್, 1 ಆರ್.ಐ.ಪಿ ಗಳನ್ನು ಭದ್ರತಾ ವ್ಯವಸ್ಥೆಗೆ ನಿಯೋಜಿಸಲಾಗಿದೆ. ಮೈದಾನದ ಸುತ್ತ ಭದ್ರತೆ ಮತ್ತು ಸುರಕ್ಷತೆಗಾಗಿ 103 ಸಿಸಿ ಕ್ಯಾಮರ್ ವ್ಯವಸ್ಥೆ ಹಾಗೂ 3 ಬ್ಯಾಗೇಜ್ ಸ್ಕ್ಯಾನರ್, 20-ಡಿಎಫ್ಎಂಡಿ ಮತ್ತು 40-ಹೆಚ್.ಹೆಚ್.ಎಂ.ಡಿಗಳನ್ನು ಅಳವಡಿಸಲಾಗಿದೆ.
ಇದನ್ನೂ ಓದಿ: ಮೈಕ್ರೋಫೈನಾನ್ಸ್ಗೆ ಶೀಘ್ರ ಮೂಗುದಾರ: ಕಂಪನಿಗಳ ಕಿರುಕುಳ ತಡೆಯಲು ಸಿಎಂ ಸಿದ್ದು ಮಹತ್ವದ ಸಭೆ
ಈ ಕಾರ್ಯಕ್ರಮಕ್ಕೆ ಆಗಮಿಸುವ ಪ್ರತಿಯೊಬ್ಬರು ಪಾಸು ಮತ್ತು ಗುರುತಿನ ಚೀಟಿಯನ್ನು ಹೊಂದಿರಬೇಕು. ಪರ್ಸ್ ಮತ್ತು ಮೊಬೈಲ್ ಹೊರೆತುಪಡಿಸಿ ಬೇರೆ ಯಾವುದೇ ವಸ್ತುಗಳನ್ನು ಕಾರ್ಯಕ್ರಮಕ್ಕೆ ತರದಂತೆ ನಿಷೇಧಿಸಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಜನರು ಪೊಲೀಸರ ಭದ್ರತಾ ತಪಾಸಣೆಗೆ ಸಹಕರಿಸಬೇಕೆಂದು ಮನವಿ ಮಾಡಿದರು. ಈ ಸಭೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಜಗದೀಶ್.ಜಿ, ಸಂಚಾರಿ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಅನುಚೇತ್ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
