ಚಿಕ್ಕಬಳ್ಳಾಪುರ, ಹಾವೇರಿ, ಚಿಕ್ಕಮಗಳೂರು, ಯಾದಗಿರಿ ಮೆಡಿಕಲ್‌ ಕಾಲೇಜು ಕಟ್ಟಡ ಕಾಮಗಾರಿಗಳ ತನಿಖೆಗೆ ಆದೇಶ: ಡಾ. ಶರಣಪ್ರಕಾಶ ಪಾಟೀಲ್‌

ಕಲಬುರಗಿ(ಆ.26): ರಾಜ್ಯದ ಚಿಕ್ಕಬಳ್ಳಾಪುರ, ಹಾವೇರಿ, ಚಿಕ್ಕಮಗಳೂರು ಹಾಗೂ ಯಾದಗಿರಿಯಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ಬಹುಕೋಟಿ ಅವ್ಯವಹಾರದ ಶಂಕೆ ಮೂಡಿದ್ದರಿಂದ ಇವೆಲ್ಲ ಕಟ್ಟಡ ಕಾಮಗಾರಿಗಳನ್ನು ತನಿಖೆಗೆ ವಹಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್‌ ಹೇಳಿದ್ದಾರೆ.

Add Asianetnews Kannada as a Preferred SourcegooglePreferred

ಶುಕ್ರವಾರ ಜಿಮ್ಸ್‌ ಹಾಗೂ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ವೈದ್ಯಕೀಯ ಕಾಲೇಜು ನಿರ್ಮಾಣ ಟೆಂಡರ್‌ ಮೊತ್ತ 500 ಕೋಟಿ ರು. ಇರುವುದನ್ನು ಪರಿಷ್ಕರಿಸಿ 800 ಕೋಟಿ ರು.ಗೆ ಹೆಚ್ಚಿಸಲಾಗಿದೆ. ಒಮ್ಮೆಲೆ 300 ಕೋಟಿ ರು. ಹೆಚ್ಚಳ ಮಾಡಲಾಗಿದೆ. ಇಂತಹ ಕಸರತ್ತುಗಳೇ ಅವ್ಯವಹಾರದ ಶಂಕೆ ಮೂಡುವಂತೆ ಮಾಡಿವೆ ಎಂದರು.

ಕೈಕೊಟ್ಟ ಮಳೆ: ಬೆಳೆ ಉಳಿಸಿಕೊಳ್ಳಲು ರೈತರ ಪರದಾಟ..!

ಇದೇ ತೆರನಾಗಿ ಇತರ ಕಾಲೇಜುಗಳ ಕಟ್ಟಡ ನಿರ್ಮಾಣ ಮೊತ್ತದಲ್ಲೂ ಹೆಚ್ಚಳ ಮಾಡಲಾಗಿದೆ. ಹೀಗಾಗಿ ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿದೆ. ವರದಿ ಬಂದ ನಂತರ ಮುಂದಿನ ಹೆಜ್ಜೆ ಇಡಲಾಗುವುದು ಎಂದು ಸಚಿವ ಡಾ. ಶರಣಪ್ರಕಾಶ ತಿಳಿಸಿದರು.

ರಾಯಚೂರಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಏಮ್ಸ್‌) ಸ್ಥಾಪನೆಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಹೇಳಿದ ಸಚಿವರು ಬುಧವಾರ ನವದೆಹಲಿಯಲ್ಲಿ ಕೇಂದ್ರದ ಆರೋಗ್ಯ ಸಚಿವ ಮನ್ಸುಖ್‌ ಮಾಂಡವಿಯಾ ಅವರನ್ನು ಕಲ್ಯಾಣ ಕರ್ನಾಟಕ ಭಾಗದ ಶಾಸಕರು ಹಾಗೂ ಮುಖಂಡರೊಂದಿಗೆ ಭೇಟಿಯಾಗಿ ರಾಯಚೂರಲ್ಲಿ ಏಮ್ಸ್‌ ಸ್ಥಾಪಿಸುವಂತೆ ಪ್ರಸ್ತಾಪವನೆ ಸಲ್ಲಿಸಲಾಗಿದೆ ಎಂದರು.

ರಾಜ್ಯ ಸರಕಾರ ಸೂಚಿಸುವ ಸ್ಥಳದಲ್ಲೇ ಏಮ್ಸ್‌ ಸ್ಥಾಪನೆಗೆ ಮುಂದಾಗುವುದಾಗಿ ತಿಳಿಸಲಾಗಿದೆ. ವಿಧಾನಸಭಾ ಚುನಾವಣೆ ವೇಳೆಯಲ್ಲಿ ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್‌ ಪಕ್ಷವು ಕಲ್ಯಾಣ ಕರ್ನಾಟಕ ಭಾಗದಲ್ಲಿ ಏಮ್ಸ್‌ ಸ್ಥಾಪಿಸುವುದಾಗಿ ಘೋಷಿಸಲಾಗಿತ್ತು. ಅದರಂತೆ ನಡೆದುಕೊಳ್ಳಲಾಗುತ್ತಿದೆ ಎಂದರು.

ಡಿಸೆಂಬರ್‌ನಲ್ಲಿ ಯುವ ನಿಧಿ:

2022-23ರಲ್ಲಿ ವ್ಯಾಸಂಗ ಮಾಡಿ ಉತ್ತೀರ್ಣರಾದ ಪದವೀಧರರಿಗೆ ಮುಂದಿನ 24 ತಿಂಗಳ ಕಾಲ ನೀಡಲಾಗುವ ನಿರುದ್ಯೋಗ ಭತ್ಯೆಯ ಯುವನಿಧಿ ಯೋಜನೆ ಡಿಸೆಂಬರ್‌ನಲ್ಲಿ ಕಾರ್ಯಾನುಷ್ಠಾನಗೊಳಿಸಲು ಸಿದ್ದತೆಗಳು ನಡೆದಿವೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ ಡಾ. ಶರಣಪ್ರಕಾಶ ಪಾಟೀಲ್‌ ತಿಳಿಸಿದರು.

ಕಾಂಗ್ರೆಸ್‌ ಹೈಕಮಾಂಡ್‌ ತವರಲ್ಲೇ ಇಂದಿರಾ ಕ್ಯಾಂಟೀನ್‌ಗೆ ಗ್ರಹಣ!

ಯುವನಿಧಿ ಯೋಜನೆಯು ತಮ್ಮ ಕೌಶಲ್ಯಾಭಿವೃದ್ಧಿ ಇಲಾಖೆಯಡಿಯೇ ಜಾರಿಗೊಳ್ಳುತ್ತಿದೆ. ಪದವೀಧರರು ಹಾಗೂ ಡಿಪ್ಲೊಮಾ ಮಾಡಿ ಹೊರಬರುವರು 5 ಲಕ್ಷ ಎಂದು ಅಂದಾಜಿಸಲಾಗಿದೆ. ಸೇವಾ ಸಿಂಧು ಆ್ಯಪ್‌ ರೂಪಿಸಲಾಗುತ್ತಿದೆ. ಇಲಾಖೆ ಈಗಾಗಲೇ ಮಾಹಿತಿ ಸಂಗ್ರಹಿಸಲಾಗಿದೆ. ಒಟ್ಟಾರೆ ಡಿಸೆಂಬರ್‌ ತಿಂಗಳಲ್ಲಿ ಯೋಜನೆ ಜಾರಿಗೆ ತರುವ ಸಿದ್ಧತೆಗಳು ನಡೆದಿವೆ ಎಂದು ವಿವರಣೆ ನೀಡಿದರು.

ಒಮ್ಮೆಲೆ ಪದವೀದರರು ಹೊರ ಬರುವುದಿಲ್ಲ. ಕೆಲವೊಂದು ಪದವಿಗಳ ಶೈಕ್ಷಣಿಕ ವೇಳೆ ಬದಲು ಇದೆ. ಹೀಗಾಗಿ ಏಕಕಾಲಕ್ಕೆ ಎಲ್ಲ ವಿದ್ಯಾರ್ಥಿಗಳಿಗೆ ಸೌಲಭ್ಯ ದೊರಕಲು ಸಾಧ್ಯವಿಲ್ಲ. ಪದವಿ ಪಡೆದ ಆರು ತಿಂಗಳ ಕಾಲ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ ಎಂದರು.