* ಸ್ವಯಂ ಘೋಷಿತ ಆಸ್ತಿ ತೆರಿಗೆ; ವಲಯ ವರ್ಗೀಕರಣ ತಪ್ಪಿನಿಂದ ದಂಡ-ಬಡ್ಡಿ* ಆಸ್ತಿ ಮಾಲೀಕರಿಗೆ ವಿನಾಯಿತಿ ಸಿಎಂ ಜತೆ ಚರ್ಚಿಸುವೆ ಎಂದ ಸಚಿವ ಡಾ.ಸಿ.ಎನ್.‌ಅಶ್ವತ್ಥನಾರಾಯಣ* ಕೊರೋನಾ ಕಾರಣಕ್ಕೆ ಎಲ್ಲ ವರ್ಗದವರು ಸಂಕಷ್ಟಕ್ಕೆ ಸಿಲುಕಿದ್ದಾರೆ* ಆಸ್ತಿ ತೆರಿಗೆ ವಸೂಲಿ ಮಾಡದೇ ಬಿಬಿಎಂಪಿಯಿಂದನೂ ಲೋಪವಾಗಿದೆ

ಬೆಂಗಳೂರು(ಆ. 16) ಸ್ವಯಂ ಘೋಷಿತ ಆಸ್ತಿ ತೆರಿಗೆ ಪದ್ಧತಿಯಡಿ ವಲಯ ವರ್ಗೀಕರಣವನ್ನು ತಪ್ಪಾಗಿ ಘೋಷಿಸಿಕೊಂಡು ದಂಡ ಮತ್ತು ದಂಡದ ಬಡ್ಡಿ ಸುಳಿಗೆ ಸಿಲುಕಿರುವ ಆಸ್ತಿ ಮಾಲೀಕರಿಗೆ ವಿನಾಯಿತಿ ನೀಡುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜತೆ ಚರ್ಚಿಸುವುದಾಗಿ ಉನ್ನತ ಶಿಕ್ಷಣ, ಐಟಿ-ಬಿಟಿ, ವಿಜ್ಞಾನ-ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಖಾತೆ ಸಚಿವ ಡಾ.ಸಿ.ಎನ್.‌ಅಶ್ವತ್ಥನಾರಾಯಣ ತಿಳಿಸಿದರು. 

Add Asianetnews Kannada as a Preferred SourcegooglePreferred

ಸೋಮವಾರ ಬಿಬಿಎಂಪಿ ಅಧಿಕಾರಿಗಳ ಜತೆ ಚರ್ಚೆ ನಡೆಸಿದ ನಂತರ ಈ ವಿಷಯ ತಿಳಿಸಿದರು. ಕೋವಿಡ್‌ ಮಹಾಮಾರಿ ಹಾಗೂ ಲಾಕ್‌ಡೌನ್‌ ಕಾರಣಕ್ಕೆ ಆಸ್ತಿ ಮಾಲೀಕರು ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದು, ಇದೇ ವೇಳೆ ದಂಡ ಮತ್ತು ಬಡ್ಡಿಗೆ ಗುರಿಯಾಗಿದ್ದಾರೆ. ಹೀಗಾಗಿ ಕಷ್ಟದಲ್ಲಿರುವ ಆಸ್ತಿ ಮಾಲೀಕರಿಗೆ ರಿಯಾಯಿತಿ ನೀಡುವ ಬಗ್ಗೆ ಪರಿಶೀಲನೆ ಮಾಡುವಂತೆ ಈ ಹಿಂದೆಯೇ ಅಧಿಕಾರಿಗಳಿಗೆ ಸೂಚಿಸಿದ್ದೆ. ಆ ಬಗ್ಗೆ ಮುಖ್ಯಮಂತ್ರಿಗಳ ಒಪ್ಪಿಗೆ ಅಗತ್ಯವಿದೆ ಎಂದು ಅವರು ಹೇಳಿದರು. 

ಮೈಸೂರಿಗೆ ಇ ಆಸ್ತಿ ತೆರಿಗೆ ವೆಬ್ ಸೈಟ್

ಈಗಾಗಲೇ ಮಲ್ಲೇಶ್ವರ ಮಾತ್ರವಲ್ಲದೆ, ನಗರದ ವಿವಿಧ ವಲಯಗಳ ಜನರು ತಮಗೆ ಮನವಿ ಕೊಟ್ಟಿದ್ದು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಕಷ್ಟದಿಂದ ತಮ್ಮನ್ನು ಪಾರು ಮಾಡಬೇಕೆಂದು ಕೋರಿದ್ದಾರೆ. ಈ ಎಲ್ಲ ಅಂಶಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದು ಸಚಿವರು ತಿಳಿಸಿದರು. 

ಬಿಬಿಎಂಪಿಯು ಆರು ವರ್ಷಗಳಿಂದ ಸಮರ್ಪಕವಾಗಿ ತೆರಿಗೆ ವಸೂಲಿ ಮಾಡದೇ ಬಿಟ್ಟಿದ್ದು ಲೋಪ ಎಂದ ಅವರು, ಈಗ ನೋಡಿದರೆ ಏಕಾಏಕಿ ದಂಡ- ಬಡ್ಡಿ ಒಟ್ಟಿಗೆ ವಿಧಿಸಿದರೆ ಜನರಿಗೆ ಕಷ್ಟವಾಗುತ್ತದೆ ಎಂದು ಸಚಿವರು ಹೇಳಿದರು. ಈ ಸಭೆಯಲ್ಲಿ ಬಿಬಿಎಂಪಿ ಕಂದಾಯ ವಿಭಾಗದ ವಿಶೇಷ ಆಯುಕ್ತ ಬಸವರಾಜ ಹಾಗೂ ಕಂದಾಯ ವಿಭಾಗದ ಜಂಟಿ ಆಯುಕ್ತ ವೆಂಕಟಾಚಲಪತಿ ಮುಂತಾದ ಅಧಿಕಾರಿಗಳು ಇದ್ದರು.