ಕೆ.ಆರ್‌. ಪುರ ತಹಸೀಲ್ದಾರ್‌ ಅಜಿತ್‌ ಕುಮಾರ್‌ ರೈ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ ಕಂದಾಯ ಇಲಾಖೆ 

ಬೆಂಗಳೂರು(ನ.25): ನಗರದ ಮಹದೇವಪುರ ವ್ಯಾಪ್ತಿಯಲ್ಲಿನ ರಾಜಕಾಲುವೆ ಒತ್ತುವರಿ ತೆರವು ತೆರವಿಗೆ ನಿರ್ಲಕ್ಷ್ಯ ಮಾಡಿದ ಹಿನ್ನೆಲೆಯಲ್ಲಿ ಕೆ.ಆರ್‌. ಪುರ (ಪೂರ್ವ ತಾಲ್ಲೂಕು) ತಹಸೀಲ್ದಾರ್‌ ಅಜಿತ್‌ ಕುಮಾರ್‌ ರೈ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.

Add Asianetnews Kannada as a Preferred SourcegooglePreferred

ಮಹದೇವಪುರ ವ್ಯಾಪ್ತಿಯ ರೈನ್‌ಬೋ ಬಡಾವಣೆಯಲ್ಲಿ ರಾಜಕಾಲುವೆ ಒತ್ತುವರಿ ಮಾಡಿ ಅನಧಿಕೃತ ಕಟ್ಟಡ ನಿರ್ಮಾಣ ಮಾಡಲಾಗಿತ್ತು. ಈ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತರು ಸೆ.21 ರಂದು ಪತ್ರ ಬರೆದು ಮಹದೇವಪುರದಲ್ಲಿನ ರಾಜಕಾಲುವೆ ಮೇಲಿರುವ ಅಕ್ರಮ ಒತ್ತುವರಿ ಕಟ್ಟಡ ಹಾಗೂ ಇತರ ನಿರ್ಮಾಣಗಳನ್ನು ತೆರವುಗೊಳಿಸಲು ನೋಟಿಸ್‌ ನೀಡಿ ಅಗತ್ಯ ಕ್ರಮ ಕೈಗೊಳ್ಳಿ ಎಂದು ಹೇಳಿದ್ದರು. ಆದರೆ, ಈ ಬಗ್ಗೆ ತ್ವರಿತಗತಿಯಲ್ಲಿ ಕ್ರಮ ಕೈಗೊಳ್ಳದೆ ನ್ಯಾಯಾಲಯದಲ್ಲಿ ತಡೆಯಾಜ್ಞೆ ತರಲು ನೆರವಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ ಎಂದು ಮೂಲಗಳು ತಿಳಿಸಿವೆ.

Rajakaluve Encroachment: ಒತ್ತುವರಿ ತೆರವು ವಿರೋಧಿಸಿ ದಂಪತಿ ಆತ್ಮಹತ್ಯೆಗೆ ಪ್ರಯತ್ನ

ಈ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯು, ‘ಒಬ್ಬ ಜವಾಬ್ದಾರಿಯುತ ಅಧಿಕಾರಿಯಾಗಿ ಅಜಿತ್‌ ಕುಮಾರ್‌ ರೈ ಅವರು ಸರ್ಕಾರಿ ನೌಕರರಿಗೆ ತಕ್ಕದಲ್ಲದ ರೀತಿಯಲ್ಲಿ ವರ್ತಿಸಿ ಕರ್ತವ್ಯ ಲೋಪ ಎಸಗಿದ್ದಾರೆ. ದುರ್ನಡತೆ, ಕರ್ತವ್ಯ ಲೋಪಗಳಿಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಇಲಾಖಾ ವಿಚಾರಣೆ ಬಾಕಿ ಇರಿಸಿ ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿಲಾಗಿದೆ’ ಎಂದು ತನ್ನ ಆದೇಶದಲ್ಲಿ ತಿಳಿಸಿದೆ. ಜತೆಗೆ ಹುದ್ದೆಯ ಜವಾಬ್ದಾರಿಯನ್ನು ತಾತ್ಕಾಲಿಕವಾಗಿ ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯ ಸಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯದ ಸಹಾಯಕ ನಿರ್ದೇಶಕರಿಗೆ ವಹಿಸಲಾಗಿದೆ.