ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆಯು ಉತ್ತರ ಕನ್ನಡ ಜಿಲ್ಲೆಯ ಕಾಳಿ ಹುಲಿ ಸಂರಕ್ಷಿತ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸಿ ಕರಡು ಅಧಿಸೂಚನೆ ಹೊರಡಿಸಿದೆ. ಈ ಅಧಿಸೂಚನೆಯ ಪ್ರಕಾರ, 663 ಚದರ ಕಿಲೋಮೀಟರ್ ವ್ಯಾಪ್ತಿಯ ಪ್ರದೇಶವನ್ನು ಸೂಕ್ಷ್ಮ ವಲಯವೆಂದು ಪರಿಗಣಿಸಲಾಗಿದೆ.

ನವದೆಹಲಿ (ಏ.8) ಉತ್ತರ ಕನ್ನಡ ಜಿಲ್ಲೆಯ ಕಾಳಿ ಹುಲಿ ಸಂರಕ್ಷಿತ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆ ಘೋಷಿಸಿದ್ದು, ಈ ಸಂಬಂಧ ಕರಡು ಅಧಿಸೂಚನೆ ಹೊರಡಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

663 ಚದರ ಕಿಲೋಮೀಟರ್ ವ್ಯಾಪ್ತಿಯ ಪ್ರದೇಶವನ್ನು ಸೂಕ್ಷ್ಮ ವಲಯ, ಅರಣ್ಯದ ಅಂಚಿನಿಂದ 10 ಕಿಲೋಮೀಟರ್ ವ್ಯಾಪ್ತಿಯ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ ಹಾಗೂ ಸೂಕ್ಷ್ಮ ಪ್ರದೇಶದ ವ್ಯಾಪ್ತಿಗೆ ಬರುವ 75 ಚ.ಕಿಲೋಮೀಟರ್ ಪ್ರದೇಶವನ್ನು ಕಂದಾಯ ಪ್ರದೇಶ ಎಂದು ಘೋಷಿಸಲಾಗಿದೆ. 84 ಚ.ಕಿಲೋಮೀಟರ್ ಪ್ರದೇಶವ್ಯಾಪ್ತಿಯ ಕಂದಾಯ ಗ್ರಾಮಗಳು, 503 ಕಿಲೋಮೀಟರ್ ಪ್ರದೇಶವ್ಯಾಪ್ತಿಯ ಅರಣ್ಯ ಇದರಲ್ಲಿ ಸೇರಿದೆ.

ಈ ಸಂಬಂಧ ಆಕ್ಷೇಪಣೆಗಳಿದ್ದರೆ ಸಲ್ಲಿಸಲು 60 ದಿನಗಳ ಕಾಲಾವಕಾಶ ನೀಡಲಾಗಿದೆ. ಅಲ್ಲದೆ, ಅಧಿಸೂಚನೆಯ ಬಳಿಕ ಎರಡು ವರ್ಷಗಳ ಅವಧಿಯಲ್ಲಿ ರಾಜ್ಯ ಸರ್ಕಾರ ಈ ಸಂಬಂಧ ಮಾಸ್ಟರ್ ಪ್ಲ್ಯಾನ್ ಸಿದ್ದಪಡಿಸಬೇಕು. ಈ ಸಂಬಂಧ ಸ್ಥಳೀಯರೊಂದಿಗೆ ಸಮಾಲೋಚನೆ ನಡೆಸಿ, ಯೋಜನೆ ರೂಪಿಸಬೇಕು ಎಂದು ತಿಳಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಕಾಳಿ ಹುಲಿ ಸಂರಕ್ಷಿತ ಪ್ರದೇಶ (ಹಿಂದೆ ದಾಂಡೇಲಿ-ಅಣಶಿ ಹುಲಿ ಸಂರಕ್ಷಿತ ಪ್ರದೇಶ) ಪಶ್ಚಿಮ ಘಟ್ಟಗಳ ದಟ್ಟ ಅರಣ್ಯದಲ್ಲಿದ್ದು, ಹುಲಿಗಳು, ಆನೆಗಳು ಮತ್ತು ವೈವಿಧ್ಯಮಯ ವನ್ಯಜೀವಿಗಳಿಗೆ ನೆಲೆಯಾಗಿದೆ. ಇದು ಹಳಿಯಾಳ, ಕಾರವಾರ ಮತ್ತು ಜೋಯಿಡಾ ತಾಲೂಕುಗಳ ವ್ಯಾಪ್ತಿಯಲ್ಲಿ ವಿಸ್ತರಿಸಿದೆ. ಕಾಳಿ ನದಿಯ ತೀರದಲ್ಲಿರುವ ಈ ಪ್ರದೇಶ, ಸಾಹಸ ಪ್ರವಾಸೋದ್ಯಮ ಮತ್ತು ವನ್ಯಜೀವಿ ವೀಕ್ಷಣೆಗೆ ಪ್ರಸಿದ್ಧವಾಗಿದೆ.