*   ವಿದ್ಯುತ್‌ಗೆ ಅತಿ ಬೇಡಿಕೆ ಬಂದಿದ್ದರಿಂದ ಸಮಸ್ಯೆ*   ಯಾರೂ ಗಾಬರಿಯಾಗುವ ಅಗತ್ಯವಿಲ್ಲ*   ತಂತ್ರಜ್ಞಾನ ದುರುಪಯೋಗ 

ಹುಬ್ಬಳ್ಳಿ(ಮೇ.01): ದೇಶದಲ್ಲಿ(India) ಕಲ್ಲಿದ್ದಲು(Coal) ಸಮಸ್ಯೆಯಾಗಲ್ಲ. 10 ದಿನಗಳಿಗಾಗುವಷ್ಟು ಕಲ್ಲಿದ್ದಲು ದಾಸ್ತಾನಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್‌ ಜೋಶಿ(Pralhad Joshi) ಹೇಳಿದರು.

Add Asianetnews Kannada as a Preferred SourcegooglePreferred

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ದೇಶದ ಥರ್ಮಲ್‌ ಪವರ್‌ ಪ್ಲಾಂಟ್‌ಗಳಲ್ಲಿ(Thermal Power Plants) 21.55 ಮಿಲಿಯನ್‌ ಟನ್‌ ಕಲ್ಲಿದ್ದಲು ದಾಸ್ತಾನಿದೆ. ಕೋಲ್‌ ಕಂಪನಿಗಳಲ್ಲಿ 72.05 ಮಿಲಿಯನ್‌ ಟನ್‌ ಕಲ್ಲಿದ್ದಲು ಸಂಗ್ರಹವಿದೆ. ಯಾರೂ ಗಾಬರಿಯಾಗುವ ಅಗತ್ಯವಿಲ್ಲ ಎಂದರು.

ಕಲ್ಲಿದ್ದಲು ಕ್ಷಾಮ: ದೇಶಾದ್ಯಂತ ವಿದ್ಯುತ್‌ಗೆ ಬರ..!

ಈ ತಿಂಗಳು ಅನಿರೀಕ್ಷಿತವಾಗಿ ಬಿಸಿಲು ಹೆಚ್ಚಿದ್ದು, ವಿದ್ಯುತ್‌ಗೆ(Electricity) ಅತಿ ಹೆಚ್ಚು ಬೇಡಿಕೆ ಉಂಟಾಗಿದೆ. ದೇಶದ ಕೈಗಾರಿಕೆಗಳು ಸಹ ಪುಟಿದೆದ್ದಿವೆ. ಹೀಗಾಗಿ ಒಮ್ಮೇಲೆ ವಿದ್ಯುತ್‌ಗೆ ಬೇಡಿಕೆ ಹೆಚ್ಚಿದೆ. ದೂರದೂರದ ಪವರ್‌ ಪ್ಲಾಂಟ್‌ಗಳಲ್ಲಿ ಹತ್ತು ದಿನಕ್ಕಾಗುವಷ್ಟುಕಲ್ಲಿದ್ದಲು ಸಂಗ್ರಹವಿದೆ ಎಂದು ಹೇಳಿದರು.

10 ದಿನಗಳ ನಂತರ ದೇಶ ಸಂಪೂರ್ಣ ಕತ್ತಲಾಗುತ್ತದೆ ಎನ್ನುವ ರೀತಿಯಲ್ಲಿ ಕೆಲವರು ಮಾತನಾಡುತ್ತಿದ್ದಾರೆ. ಅದು ಸರಿಯಲ್ಲ. ಕೇಂದ್ರ ಸರ್ಕಾರ(Central Go\vernment) ನಿರಂತರವಾಗಿ ಪ್ರತಿದಿನ 1.07 ಮಿಲಿಯನ್‌ ಟನ್‌ ಕಲ್ಲಿದ್ದಲು ಪೂರೈಕೆ ಮಾಡುತ್ತಿದೆ. ಬೇಡಿಕೆ ಒಮ್ಮೇಲೆ ಹೆಚ್ಚಾಗಿದ್ದರಿಂದ ಸಾಗಾಟ ಮಾಡಲು ರೈಲ್ವೆ ಇಲಾಖೆ ಸಹ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಖಾಲಿಯಾದಷ್ಟುಕಲ್ಲಿದ್ದಲನ್ನು ನಿರಂತರವಾಗಿ ತುಂಬಿಸುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ಕಲ್ಲಿದ್ದಲಿನ ಸಮಸ್ಯೆಯಾಗದಂತೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಯಾರೂ ಗಾಬರಿ ಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದರು.

ತಂತ್ರಜ್ಞಾನ ದುರುಪಯೋಗ:

ರಾಜ್ಯ ಸರ್ಕಾರ ಪಿಎಸ್‌ಐ ಮರು ಪರೀಕ್ಷೆ ನಡೆಸುವ ಕುರಿತು ತೀರ್ಮಾನ ಕೈಗೊಂಡಿದೆ. ಕೆಲವು ಸಂದರ್ಭದಲ್ಲಿ ಇಂತಹ ನಿರ್ಧಾರ ಅನಿವಾರ್ಯ. ತಂತ್ರಜ್ಞಾನ ದುರುಪಯೋಗ ಪಡಿಸಿಕೊಂಡು ಕೆಲವರು ಅಪರಾಧ ಮಾಡಿದ್ದಾರೆ. ಸರ್ಕಾರ ಅದನ್ನು ಗಂಭೀರವಾಗಿ ಪರಿಗಣಿಸಿ, ಪ್ರಮುಖ ಆರೋಪಿಗಳನ್ನು ಬಂಧಿಸಿದೆ. ಮುಂದೆ ಹೀಗಾಗದಂತೆ ಮುಖ್ಯಮಂತ್ರಿ ಕೆಲವು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದಾರೆ. ಎಲ್ಲ ಆಯಾಮಗಳಿಂದ ಯೋಚಿಸಿ ಮರುಪರೀಕ್ಷೆ ನಡೆಸಲು ನಿರ್ಧರಿಸಿದೆ. ಅದಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದರು.