ಮಕ್ಕಳು ವಾರದಲ್ಲಿ 2 ರಿಂದ 3 ಬಾರಿ ಸೊಪ್ಪು, ತರಕಾರಿ ಸೇವಿಸುವುದರಿಂದ ರಕ್ತಹೀನತೆ ತಡೆಯಬಹುದು. ಇದರಿಂದ ಮಕ್ಕಳಲ್ಲಿ ಕಲಿಕಾಸಕ್ತಿ ಹೆಚ್ಚುತ್ತದೆ. ಆದ್ದರಿಂದ ಎಲ್ಲರೂ ಪೌಷ್ಟಿಕಾಂಶವುಳ್ಳ ಆಹಾರ ಸೇವಿಸಬೇಕೆಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಮಕ್ಕಳಲ್ಲಿ ಅರಿವು ಮೂಡಿಸಿದರು.

 ತುಮಕೂರು : ಮಕ್ಕಳು ವಾರದಲ್ಲಿ 2 ರಿಂದ 3 ಬಾರಿ ಸೊಪ್ಪು, ತರಕಾರಿ ಸೇವಿಸುವುದರಿಂದ ರಕ್ತಹೀನತೆ ತಡೆಯಬಹುದು. ಇದರಿಂದ ಮಕ್ಕಳಲ್ಲಿ ಕಲಿಕಾಸಕ್ತಿ ಹೆಚ್ಚುತ್ತದೆ. ಆದ್ದರಿಂದ ಎಲ್ಲರೂ ಪೌಷ್ಟಿಕಾಂಶವುಳ್ಳ ಆಹಾರ ಸೇವಿಸಬೇಕೆಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಮಕ್ಕಳಲ್ಲಿ ಅರಿವು ಮೂಡಿಸಿದರು.

Add Asianetnews Kannada as a Preferred SourcegooglePreferred

ನಗರದ ಎಂಪ್ರೆಸ್ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿಂದು ಜಿಲ್ಲಾಡಳಿತ, ಜಿ.ಪಂ., ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಶಾಲಾ ಮತ್ತು ಸಾಕ್ಷರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ರಕ್ತಹೀನತೆ ಮುಕ್ತ ಪೌಷ್ಟಿಕ ಕರ್ನಾಟಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಕ್ಕಳು ಸರಿಯಾಗಿ ಊಟ ಸೇವಿಸ ಕಾರಣ ರಕ್ತ ಹೀನತೆ ಉಂಟಾಗುತ್ತದೆ. ಉಪಹಾರ ಸೇವಿಸದ ಮಕ್ಕಳಲ್ಲಿ ಅಸಿಡಿಟಿ ಉಂಟಾಗಿ ಆರೋಗ್ಯ ಹದಗೆಡುತ್ತದೆ. ಎಲ್ಲರೂ ಪೌಷ್ಟಿಕ ಆಹಾರ ಸೇವಿಸಬೇಕೆಂದು ಹೇಳಿದರು.

ಜಿಲ್ಲೆಯಾದ್ಯಂತ ಅನಿಮಿಯ ಇರುವ ಮಕ್ಕಳನ್ನು ಗುರುತಿಸಿ ಕಬ್ಬಿಣಾಂಶದ ಮಾತ್ರೆ, ಸಿರಫ್, ಫಾಲಿಕ್ ಆಸಿಡ್ ಮಾತ್ರೆ ವಿತರಿಸಲಾಗುವುದು ಎಂದರು.

ಹೆಣ್ಣು ಮಕ್ಕಳು ಮಾಸಿಕ ಋತು ಸ್ರಾವದಿಂದ ರಕ್ತ ಹೀನತೆಯಿಂದ ಬಳಲುತ್ತಾರೆ. ಕೆಂಪು ರಕ್ತ ಕಣಗಳು ಹೆಚ್ಚಿದ್ದಷ್ಟು ದೇಹ ಲವಲವಿಕೆಯಿಂದ ಇರುತ್ತದೆ. ಆದುದರಿಂದ ಮಕ್ಕಳು ಬೆಳಿಗ್ಗೆ, ಮಧ್ಯಾಹ್ನ, ರಾತ್ರಿ ಸರಿಯಾದ ಸಮಯಕ್ಕೆ ಊಟ, ತಿಂಡಿ ಸೇವಿಸಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಂಜುನಾಥ್, ದೇಹದಲ್ಲಿ ಹಿಮೋಗ್ಲೋಬಿನ್ ಎಷ್ಟಿದೆ ಎಂದು ಕಂಡು ಹಿಡಿದು ಅದಕ್ಕೆ ಚಿಕಿತ್ಸೆ ನೀಡಲು ಇಡೀ ದೇಶದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.

ಆರ್‌ಸಿಹೆಚ್ ಅಧಿಕಾರಿ ಡಾ. ಮೋಹನ್ ಮಾತನಾಡಿ, ಅನಿಮಿಯ ಪೌಷ್ಟಿಕ ಕರ್ನಾಟಕ ಕಾರ್ಯಕ್ರಮವನ್ನು 22 ರಂದು ರಾಜ್ಯ ಮಟ್ಟದಲ್ಲಿ ಮುಖ್ಯಮಂತ್ರಿ ಚಾಲನೆ ನೀಡಿದ್ದಾರೆ. ಈ ದಿನ ತುಮಕೂರಿನಲ್ಲಿ ವಿದ್ಯುಕ್ತವಾಗಿ ಚಾಲನೆ ನೀಡಲಾಗಿದೆ. ಪ್ರತಿ ತಾಲೂಕಿನಲ್ಲಿಯೂ ರಕ್ತ ಪರೀಕ್ಷೆ ಕಾರ್ಯಕ್ರಮ ಆಯೋಜಿಸಲಾಗುವುದು. ಈ ಕಾರ್ಯಕ್ರಮದ ಅಂಗವಾಗಿ ಎಲ್ಲಾ ಮಕ್ಕಳಿಗೂ ಹಿಮೋಗ್ಲೋಬಿನ್ ಪ್ರಮಾಣ ಎಷ್ಟಿದೆ ಎಂಬುದನ್ನು ಪರೀಕ್ಷಿಸಿ ಇದಕ್ಕೆ ಸಂಬಂಧಿಸಿದ ಚಿಕಿತ್ಸೆ ನೀಡಲಾಗುವುದು.

ರಕ್ತಹೀನತೆ ಮಾತ್ರೆಗಳನ್ನು ಸಂಬಂಧಿಸಿದ ಶಾಲಾ ಕಾಲೇಜುಗಳಿಗೆ ತಲುಪಿಸಲಾಗಿದೆ. ಪ್ರತಿ ಮಕ್ಕಳಿಗೂ ಒಂದು ತಿಂಗಳವರೆಗಿನ ಮಾತ್ರೆಗಳನ್ನು ನೀಡಲಾಗುವುದು. ಮಾತ್ರೆ ಸೇವಿಸುತ್ತಿರುವ ಬಗ್ಗೆ ಶಾಲಾ ಕಾಲೇಜು ಮುಖ್ಯಸ್ಥರು ನಿಗಾ ವಹಿಸಬೇಕೆಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಜಿ.ಪಂ. ಸಿಇಒ ಜಿ.ಪ್ರಭು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀಧರ್, ಪ.ಪೂ.ಇಲಾಖೆ ಉಪನಿರ್ದೇಶಕ ಗಂಗಾಧರ್ ಶಾಲಾ-ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.