ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಬಳಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಸ್ವಿಫ್ಟ್ ಕಾರಿನ ನಡುವೆ ನಡೆದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಶೃಂಗೇರಿ ಮೂಲದ ಕುಟುಂಬವು ಪ್ರಯಾಣಿಸುತ್ತಿದ್ದ ಕಾರು ಸಂಪೂರ್ಣ ಜಖಂಗೊಂಡಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಶಿವಮೊಗ್ಗ (ಜ.14): ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಕ್ರಾಸ್ ಬಳಿ ಮಂಗಳವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್ ಹಾಗೂ ಸ್ವಿಫ್ಟ್ ಡಿಸೈರ್ ಕಾರಿನ ನಡುವೆ ನಡೆದ ಈ ಮುಖಾಮುಖಿ ಡಿಕ್ಕಿ ಹಲವು ಜೀವಗಳನ್ನು ಬಲಿ ಪಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಘಟನೆಯ ವಿವರ

ಶೃಂಗೇರಿ ಮೂಲದ ಮೆಣಸೆ ನಿವಾಸಿಗಳಾದ ಮುಸ್ಲಿಂ ಕುಟುಂಬವೊಂದು ಚೆನ್ನಗಿರಿಯಿಂದ ಶೃಂಗೇರಿಯತ್ತ ತಮ್ಮ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಮರಳುತ್ತಿತ್ತು. ಈ ವೇಳೆ ಮಂಗಳೂರಿನಿಂದ ರಾಯಚೂರು ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರಿನ ನಡುವೆ ಭಾರತೀಪುರ ಕ್ರಾಸ್ ಬಳಿ ರಭಸದ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ಜಖಂ ಆಗಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದರು. ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ಮೃತರ ವಿವರ

ಈ ದುರ್ಘಟನೆಯಲ್ಲಿ ಫಾತಿಮಾ (70), ರಿಹಾನ್ (15), ರಾಹಿಲ್ (9) ಮತ್ತು ಝಯಾನ್ (12) ಎಂಬುವವರು ಮೃತಪಟ್ಟಿದ್ದಾರೆ. ಮೃತರು ಶೃಂಗೇರಿ ತಾಲೂಕಿನ ಮೆಣಸೆ ಗ್ರಾಮದವರು ಎಂದು ಗುರುತಿಸಲಾಗಿದೆ. ಮಗುವಿನ ಅಕಾಲಿಕ ಸಾವು ಹಾಗೂ ಹಿರಿಯ ಜೀವಗಳ ಅಗಲಿಕೆ ಇಡೀ ಮೆಣಸೆ ಗ್ರಾಮದಲ್ಲಿ ಶೋಕಸಾಗರ ಮೂಡಿಸಿದೆ. ಕಾರಿನಲ್ಲಿದ್ದ ಝರೀನಾ (35), ರಿಹ್ಹಾ (12) ಹಾಗೂ ರಿಯಾಜ್ (35) ಅವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತೀರ್ಥಹಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಸದ್ಯ ಗಾಯಾಳುಗಳಿಗೆ ಹೆಚ್ಚಿನ ಚಿಕಿತ್ಸೆ ಮುಂದುವರಿದಿದೆ. ಅದೃಷ್ಟವಶಾತ್ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿದ್ದ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಬಸ್‌ನ ಮುಂಭಾಗಕ್ಕೂ ಹಾನಿಯಾಗಿದೆ.

ಪೊಲೀಸ್ ಭೇಟಿ

ಘಟನಾ ಸ್ಥಳಕ್ಕೆ ತೀರ್ಥಹಳ್ಳಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ತೀರ್ಥಹಳ್ಳಿ ಶವಾಗಾರಕ್ಕೆ ರವಾನಿಸಲಾಗಿದೆ. ರಸ್ತೆಯ ತಿರುವಿನಲ್ಲಿ ವಾಹನಗಳ ವೇಗವೇ ಈ ಅಪಘಾತಕ್ಕೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಒಂದೇ ಕುಟುಂಬದ ನಾಲ್ವರು ಸದಸ್ಯರನ್ನು ಕಳೆದುಕೊಂಡ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ರಸ್ತೆ ಸುರಕ್ಷತೆಯ ಬಗ್ಗೆ ಎಷ್ಟು ಜಾಗೃತಿ ಮೂಡಿಸಿದರೂ ಇಂತಹ ಘಟನೆಗಳು ಮರುಕಳಿಸುತ್ತಿರುವುದು ದುರದೃಷ್ಟಕರವಾಗಿದೆ.