ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪ|ಕಾಶ್ಮೀರ ಮೂಲದ ಮೂವರು ವಿದ್ಯಾರ್ಥಿಗಳು|ಜಾಮೀನು ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್‌ ಅಭಿಪ್ರಾಯ| ಪ್ರಕರಣವನ್ನು ವಿಶಾಲ ದೃಷ್ಟಿಕೋನದಿಂದ ಪ್ರಾಸಿಕ್ಯೂಷನ್‌ ನೋಡಬೇಕಿದೆ|

ಬೆಂಗಳೂರು(ಏ.19): ಹುಬ್ಬಳ್ಳಿಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಮೂವರು ಕಾಶ್ಮೀರಿ ವಿದ್ಯಾರ್ಥಿಗಳ ವಿರುದ್ಧದ ದೂರಿನಲ್ಲಿ ಆರೋಪಿಗಳು ದೇಶ ದ್ರೋಹ ಅಪರಾಧ ಎಸಗಿದ್ದಾರೆ ಎಂಬುದಾಗಿ ಪರಿಗಣಿಸುವಂತಹ ಯಾವುದೇ ಅಂಶ ಮೇಲ್ನೋಟಕ್ಕೆ ಕಂಡುಬರುತ್ತಿಲ್ಲ ಎಂದು ಹೈಕೋರ್ಟ್‌ ಅಭಿಪ್ರಾಯ ವ್ಯಕ್ತಪಡಿಸಿದೆ.

Add Asianetnews Kannada as a Preferred SourcegooglePreferred

ಪ್ರಕರಣ ಸಂಬಂಧ ಜಾಮೀನು ಕೋರಿ ಆರೋಪಿಗಳಾದ ಬಸಿತ್‌ ಆಶಿಕ್‌ ಸೋಫಿ, ತಾಲೀಬ್‌ ಮಜೀದ್‌ ಮತ್ತು ಅಮೀರ್‌ ಮೊಹೀದ್ದೀನ್‌ವಾನಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ.ನರೇಂದರ್‌ ಅವರಿದ್ದ ವಿಭಾಗೀಯ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

'ಪಾಕಿಸ್ತಾನ್ ಜಿಂದಾಬಾದ್'ಎಂದ ಹುಬ್ಬಳ್ಳಿಯ KLE ವಿದ್ಯಾರ್ಥಿಗಳು ಅರೆಸ್ಟ್

ಪ್ರಕರಣದ ದಾಖಲೆ ಪರಿಶೀಲಿಸಿದಾಗ, ಅರ್ಜಿದಾರರು ದೇಶದ್ರೋಹ ಅಪರಾಧ ಎಸಗಿದ್ದಾರೆ ಎಂಬುದಾಗಿ ಪರಿಗಣಿಸುವಂತಹ ಯಾವುದೇ ಅಂಶ ದೂರಿನಲ್ಲಿ ಮೇಲ್ನೋಟಕ್ಕೆ ಕಾಣಿಸುತ್ತಿಲ್ಲ. ಆರೋಪಿ ವಿದ್ಯಾರ್ಥಿಗಳು ಕೇಂದ್ರ ಸರ್ಕಾರದಿಂದ ವಿದ್ಯಾರ್ಥಿ ವೇತನ ಪಡೆದಿದ್ದಾರೆ ಎಂಬುದಾಗಿ ಸರ್ಕಾರಿ ವಕೀಲರು ತಿಳಿಸಿದ್ದಾರೆ. ಹಾಗಾದರೆ ಈ ಅಂಶವನ್ನು ವಿಚಾರಣಾ ನ್ಯಾಯಾಲಯವು ಪರಿಗಣಿಸದಿರುವುದು ಆಶ್ವರ್ಯಕರ ಎಂದು ಅಭಿಪ್ರಾಯಪಟ್ಟಿತು.

ಅಲ್ಲದೆ, ಆರೋಪಿ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆದಿರುವಾಗ ಅವರ ಮೂಲ ಹಾಗೂ ಹಿನ್ನೆಲೆಯನ್ನು ಕೇಂದ್ರ ಸರ್ಕಾರ ಪರಿಶೀಲನೆ ಮಾಡಿರುತ್ತದೆ. ಕೇವಲ ಗುಂಪೊಂದು ಅಪರಾಧ ಎಸಗಿದೆ ಎಂಬ ಕಲ್ಪನೆ ಮೇರೆಗೆ ಕೇಂದ್ರ ಸರ್ಕಾರದ ಪ್ರಯತ್ನಗಳನ್ನು ನಿರಾಕರಿಸುವುದಕ್ಕೆ ಆಗುವುದಿಲ್ಲ. ಪ್ರಕರಣವನ್ನು ವಿಶಾಲ ದೃಷ್ಟಿಕೋನದಿಂದ ಪ್ರಾಸಿಕ್ಯೂಷನ್‌ ನೋಡಬೇಕಿದೆ. ಕಿರುನೋಟದ ಕ್ರಿಯೆಗಳ ಕಾರಣದಿಂದ ವಿಶಾಲ ದೃಷ್ಟಿಕೋನ ಕಳೆದುಕೊಂಡಿರುವುದನ್ನು ನೋಡುತ್ತಿರುವುದಕ್ಕೆ ದುಃಖಕರವಾಗಿದೆ ಎಂದು ಕೋರ್ಟ್‌ ಅಭಿಪ್ರಾಯಪಟ್ಟಿದೆ.

'ಪಾಕ್ ಪರ ಘೋಷಣೆ ಕೂಗುವ ದೇಶದ್ರೋಹಿಗಳನ್ನ ಬಾರ್ಡರ್‌ನಲ್ಲಿ ಬಿಡಿ'

ಈ ಮಧ್ಯೆ ರಾಜ್ಯ ಸರ್ಕಾರಿ ಅಭಿಯೋಜಕರು, ಧಾರವಾಡ ಜಿಲ್ಲಾ ನ್ಯಾಯಾಲಯದಿಂದ ಪ್ರಕರಣದ ದಾಖಲೆ ತರಿಸಿಕೊಳ್ಳಲು ಸ್ವಲ್ಪ ಕಾಲಾವಕಾಶ ನೀಡಬೇಕು ಎಂದು ಕೋರಿದರು. ಆ ಮನವಿ ಪರಿಗಣಿಸಿದ ನ್ಯಾಯಪೀಠ, ಅರ್ಜಿಯನ್ನು ಏ.24ಕ್ಕೆ ಮುಂದೂಡಿತು. ಜತೆಗೆ, ಅರ್ಜಿಗೆ ಆಕ್ಷೇಪಣೆ ಸಲ್ಲಿಸಬೇಕು ಎಂದು ಅಭಿಯೋಜಕರಿಗೆ ನಿರ್ದೇಶಿಸಿದ ನ್ಯಾಯಪೀಠ, ಅವರಿಗೆ ಅರ್ಜಿ ಪ್ರತಿ ಹಾಗೂ ಇತರೆ ದಾಖಲೆಗಳನ್ನು ಒದಗಿಸುವಂತೆ ರಿಜಿಸ್ಟ್ರಾರ್‌ಗೆ ಸೂಚಿಸಿತು.

ಅರ್ಜಿ ವಿಚಾರಣೆಗೆ ಬಂದಾಗ ರಾಜ್ಯ ಸರ್ಕಾರಿ ಅಭಿಯೋಜಕರು, ಧಾರವಾಡ ಜಿಲ್ಲಾ ನ್ಯಾಯಾಲಯದಿಂದ ಪ್ರಕರಣದ ದಾಖಲೆ ತರಿಸಿಕೊಳ್ಳಲು ಸ್ವಲ್ಪ ಕಾಲಾವಕಾಶ ನೀಡಬೇಕು ಎಂದು ಕೋರಿದರು. ಆ ಮನವಿ ಪರಿಗಣಿಸಿದ ನ್ಯಾಯಪೀಠ, ಅರ್ಜಿಯನ್ನು ಏ.24ಕ್ಕೆ ಮುಂದೂಡಿತು. ಅಲ್ಲದೆ, ಅರ್ಜಿಗೆ ಆಕ್ಷೇಪಣೆ ಸಲ್ಲಿಸಬೇಕು ಎಂದು ಅಭಿಯೋಜಕರಿಗೆ ನಿರ್ದೇಶಿಸಿದ ನ್ಯಾಯಪೀಠ, ಅರ್ಜಿ ಪ್ರತಿ ಹಾಗೂ ಇತರೆ ದಾಖಲೆಗಳನ್ನು ಅವರಿಗೆ ಒದಗಿಸುವಂತೆ ರಿಜಿಸ್ಟ್ರಾರ್‌ಗೆ ಸೂಚಿಸಿ ವಿಚಾರಣೆಯನ್ನು ಮುಂದೂಡಿತು.