ಇಂಧನ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಲೈನ್‌ ಮೆನ್ ಗಳು ರೈತರೊಂದಿಗೆ ಸೌಜನ್ಯಯುತವಾಗಿ ವರ್ತಿಸಿ ವಿದ್ಯುತ್ ಸಮಸ್ಯೆಗಳನ್ನು ನಿಗದಿತ ಅವಧಿಯೊಳಗೆ ಬಗೆಹರಿಸಬೇಕು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಸೂಚಿಸಿದರು.

ಮೈಸೂರು (ಜೂ.05): ಇಂಧನ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಲೈನ್‌ ಮೆನ್ ಗಳು ರೈತರೊಂದಿಗೆ ಸೌಜನ್ಯಯುತವಾಗಿ ವರ್ತಿಸಿ ವಿದ್ಯುತ್ ಸಮಸ್ಯೆಗಳನ್ನು ನಿಗದಿತ ಅವಧಿಯೊಳಗೆ ಬಗೆಹರಿಸಬೇಕು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಸೂಚಿಸಿದರು. ನಗರದ ಜಿಪಂ ಸಭಾಂಗಣದಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ ಮತ್ತು ಪ್ರಗತಿ ಪರಿಶೀಲನೆಯಲ್ಲಿ ಕೆ.ಆರ್. ನಗರ ಕ್ಷೇತ್ರದ ಶಾಸಕ ಡಿ. ರವಿಶಂಕರ್‌ ಅವರು, ಸೆಸ್ಕ್‌ ಸಿಬ್ಬಂದಿ ಹಾಗೂ ಲೈನ್‌ ಮನ್‌ ಗಳು ರೈತರೊಂದಿಗೆ ಸೌಜನ್ಯದಿಂದ ವರ್ತನೆ ಮಾಡದೆ, ಅವರ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸುವುದಿಲ್ಲ ಎಂದು ಆರೋಪಿಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಕೆ.ಜೆ. ಜಾರ್ಜ್‌, ರೈತರು ವಿದ್ಯುತ್ ಸಮಸ್ಯೆಗಳ ಕುರಿತು ಮಾಹಿತಿ ನೀಡಿದಾಗ ಯಾವುದೇ ಸಿಬ್ಬಂದಿ ರೈತರೊಂದಿಗೆ ಸೌಜನ್ಯದಿಂದ ವರ್ತಿಸದಿದ್ದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು. ಶಾಸಕ ತನ್ವೀರ್ ಸೇಠ್ ಮಾತನಾಡಿ, ಮೈಸೂರು ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ಸೆಸ್ಕ್ ಸಂಪನ್ಮೂಲ ಸಂಗ್ರಹಣೆಯ ಕಡೆ ಗಮನ ಹರಿಸಬೇಕು. ಗಂಗಾ ಕಲ್ಯಾಣ ಯೋಜನೆಯಡಿ ಬೋರ್ ವೆಲ್ ಕೊರೆದ ತಕ್ಷಣ ಅಲ್ಲಿಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ಕುಡಿಯುವ ನೀರಿನ ಯೋಜನೆಗಳ ವಿದ್ಯುತ್ ಸಂಪರ್ಕಕ್ಕೆ ಪಂಪ್ ಹೌಸ್ ಗಳಲ್ಲಿ ಓವರ್ ಲೋಡ್ ಆಗಿ ಟ್ರಿಪ್ ಆಗುತ್ತಿವೆ. ಇವುಗಳನ್ನು ಸರಿಪಡಿಸಬೇಕು ಎಂದರು.

ಶಾಸಕ ಟಿ.ಎಸ್.ಶ್ರೀವತ್ಸ ಮಾತನಾಡಿ, ಕುಡಿಯುವ ನೀರಿನ ಪೂರೈಕೆಗೆ ಅಡಚಣೆಯಾಗುತ್ತಿರುವ ವಿದ್ಯುತ್‌ ಪೂರೈಕೆಯ ಬಗ್ಗೆ ಹೆಚ್ಚು ಗಮನ ಹರಿಸುವಂತೆ ಕೋರಿದರು. ಅಲ್ಲದೆ, ನಗರದಲ್ಲಿ ಭೂಗತ ವಿದ್ಯುತ್ ಕೇಬಲ್ ಅಳವಡಿಕೆ ಸಂಬಂಧ ಅಧಿಕಾರಿಗಳಿಂದ ಮಾಹಿತಿ ಪಡೆದರು. ಇದಕ್ಕೆ ಸಚಿವ ಕೆ.ಜೆ.ಜಾರ್ಜ್ ಪ್ರತಿಕ್ರಿಯಿಸಿ, ಮೈಸೂರು ನಗರ ಮಾತ್ರವಲ್ಲದೆ, ಜಿಲ್ಲಾದ್ಯಂತ ಸಮರ್ಕಪ ವಿದ್ಯುತ್ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಪಂಪ್ ಹೌಸ್ ಗಳಿಗೂ ವಿದ್ಯುತ್ ಸಮಸ್ಯೆಯಾಗದಂತೆ ಗಮನ ಹರಿಸಲಾಗುವುದು. ಸೆಸ್ಕ್ ಅಧಿಕಾರಿಗಳು ಜನಪ್ರತಿನಿಧಿಗಳನ್ನು ಭೇಟಿಯಾಗಿ ಅವರ ಸಲಹೆ ಪಡೆದು ಕೆಲಸ ಮಾಡಬೇಕು ಎಂದರು.

ಶಾಸಕರಾದ ಜಿ.ಟಿ. ದೇವೇಗೌಡ, ಕೆ. ಹರೀಶ್‌ ಗೌಡ, ಡಿ. ರವಿಶಂಕರ್‌, ಕೆ. ವಿವೇಕಾನಂದ, ಡಾ.ಡಿ. ತಿಮ್ಮಯ್ಯ, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್, ಜಿಲ್ಲಾಧ್ಯಕ್ಷ ಅರುಣ್‌ ಕುಮಾರ್‌, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಜಿಪಂ ಸಿಇಒ ಯುಕೇಶ್‌ ಕುಮಾರ್‌, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲರಾಜು ಮೊದಲಾದವರು ಇದ್ದರು.

ಸೆಸ್ಕ್ ವ್ಯಾಪ್ತಿಯಲ್ಲಿ ಇಂಧನ ಇಲಾಖೆ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲಾಗಿದೆ. ಮಳೆಯಿಂದಾಗಿ ಸೆಸ್ಕ್‌ ವ್ಯಾಪ್ತಿಯ ಹಲವು ಕಡೆಗಳಲ್ಲಿ ಸಾಕಷ್ಟು ಹಾನಿಯಾಗಿತ್ತು. ಅಪಾಯಕಾರಿ ಸ್ಥಳಗಳನ್ನು ಗುರುತಿಸಿ, ತುರ್ತಾಗಿ ಕಾಮಗಾರಿ ಕೈಗೊಳ್ಳಲಾಗಿದೆ. ಮೈಸೂರು ನಗರದಲ್ಲಿ ಭೂಗತ ಕೇಬಲ್‌ ಅಳವಡಿಸುವ ಕಾರ್ಯ ಪ್ರಗತಿಯಲ್ಲಿದ್ದು, ಮುಂದಿನ 2 ವರ್ಷದಲ್ಲಿ ಪೂರ್ಣಗೊಳ್ಳಲಿದೆ.
- ಕೆ.ಎಂ. ಮುನಿಗೋಪಾಲರಾಜು, ವ್ಯವಸ್ಥಾಪಕ ನಿರ್ದೇಶಕ, ಸೆಸ್ಕ್‌