ಅಪಘಾತದ ಬಳಿಕ ಚಾಲಕ ಕಾರಿನೊಂದಿಗೆ ಪರಾರಿಯಾಗಿದ್ದಾನೆ. ಈ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತ ಎಸೆಗಿದ ಕಾರು ಹಾಗೂ ಚಾಲಕನ ಪತ್ತೆಗೆ ಶೋಧ ಕಾರ್ಯ ಮುಂದುವರೆದಿದೆ. 

ಬೆಂಗಳೂರು(ಫೆ.29):  ಎಲೆಕ್ಟ್ರಾನಿಕ್ ಸಿಟಿ ಮೇಲೇತುವೆಯಲ್ಲಿ ಸಂಭವಿಸಿದ ಹಿಟ್ ಆ್ಯಂಡ್ ರನ್ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಹಾಗೂ ಹಿಂಬದಿ ಸವಾರಿಣಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ನಡೆದಿದೆ. ಮಡಿವಾಳ ಕೆರೆ ಸಮೀಪದ ನಿವಾಸಿಗಳಾದ ಸವಾರ ಅಭಿನಂದನ್ (25) ಮತ್ತು ಹಿಂಬದಿ ಸವಾರಿಣಿ ದೀಕ್ಷಾ(25) ಮೃತರು. ಮಂಗಳವಾರ ರಾತ್ರಿ 12ರ ಸುಮಾರಿಗೆ ಎಲೆಕ್ಟ್ರಾನಿಕ್ ಸಿಟಿ ಮೇಲೇತುವೆಯಲ್ಲಿ ಈ ಘಟನೆ ನಡೆದಿದೆ.

Add Asianetnews Kannada as a Preferred SourcegooglePreferred

ಮೃತಸವಾರ ಅಭಿನಂದನ್ ಮತ್ತು ಹಿಂಬದಿ ಸವಾರಿಣಿ ದೀಕ್ಷಾ ಸ್ನೇಹಿತರು. ಅಭಿನಂದನ್ ಆನ್‌ಲೈನ್‌ ವ್ಯವಹಾರದಲ್ಲಿ ತೊಡಗಿದ್ದರೆ, ದೀಕ್ಷಾ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇಬ್ಬರು ದ್ವಿಚಕ್ರ ವಾಹನದಲ್ಲಿ ಮಂಗಳವಾರ ರಾತ್ರಿ ಕೋನಪ್ಪ ಅಗ್ರಹಾರ ಕಡೆಯಿಂದ ಎಲೆಕ್ಟ್ರಾನಿಕ್ ಸಿಟಿ ಮೇಲ್ಲೇತುವೆಯಲ್ಲಿ ತಮಿಳುನಾಡು ಕಡೆಗೆ ಹೋಗುತ್ತಿದ್ದರು.

ನೈಸ್ ರಸ್ತೆಯಲ್ಲಿ ಭೀಕರ ಅಪಘಾತ; ಲಾರಿ ಚಾಲಕನ ಪಾದವೇ ತುಂಡು!

ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಸಹಿತ ರಸ್ತೆಗೆ ಬಿದ್ದ ಅಭಿನಂದನ್ ಮತ್ತು ದೀಕ್ಷಾ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಇಬ್ಬರು ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಇಬ್ಬರೂ ಮೃತಪಟ್ಟಿದ್ದಾರೆ. 

ಅಪಘಾತದ ಬಳಿಕ ಚಾಲಕ ಕಾರಿನೊಂದಿಗೆ ಪರಾರಿಯಾಗಿದ್ದಾನೆ. ಈ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತ ಎಸೆಗಿದ ಕಾರು ಹಾಗೂ ಚಾಲಕನ ಪತ್ತೆಗೆ ಶೋಧ ಕಾರ್ಯ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.