* ವಿಶ್ವ ತಂಬಾಕು ರಹಿತ ದಿನಾಚರಣೆ * ತಂಬಾಕು ಸೇವನೆ ಅಪಾಯದ ಕುರಿತು ಕಲಾವಿದನಿಂದ ವಿಶಿಷ್ಟ ಜಾಗೃತಿ* ಹಿರಿಯ ಕಲಾವಿದ ರಮೇಶ್ ರಾವ್ ಕಲಾಕೃತಿಗೆ ಚಾಲನೆ 

ಉಡುಪಿ, (ಜೂನ್.13): ವಿಶ್ವ ತಂಬಾಕು ರಹಿತ ದಿನಾಚರಣೆ ಪ್ರಯುಕ್ತ ತಂಬಾಕು ಸೇವನೆ ಅಪಾಯದ ಕುರಿತು ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಲಾವಿದ ಶ್ರೀನಾಥ್ ಮಣಿಪಾಲ್ ಉಡುಪಿಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಪರಿಸರ ಸ್ನೇಹಿ ವಿಶಿಷ್ಟ ಕಲಾಕೃತಿಯನ್ನುರಚಿಸಿದ್ದಾರೆ.ಮಣಿಪಾಲ ಕೆಎಂಸಿಯ ಸಮುದಾಯ ವೈದ್ಯಕೀಯ ವಿಭಾಗದ ವತಿಯಿಂದ ಈ ಕಲಾಕೃತಿ ರಚಿಸಲಾಗಿದೆ. ಹಿರಿಯ ಕಲಾವಿದ ರಮೇಶ್ ರಾವ್ ಕಲಾಕೃತಿಗೆ ಚಾಲನೆ ನೀಡಿದರು.

Add Asianetnews Kannada as a Preferred SourcegooglePreferred

ಬಸ್ ನಿಲ್ದಾಣ ಪರಿಸರದಲ್ಲಿ ಸಾವಿರಾರು ಮಂದಿ ಪ್ರಯಾಣಿಕರು ಬರುವುದರಿಂದ, ಜಾಗೃತಿ ಕಲಾಕೃತಿಯನ್ನು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸಲು ಸಾಧ್ಯವಾಗಿದೆ. ಅದರಲ್ಲೂ ಬಸ್ ನಿಲ್ದಾಣ ಪರಿಸರದಲ್ಲಿ ತಂಬಾಕು ಬಳಸಿ ಉಗುಳಿ ಹೋಗುವ ಕೆಟ್ಟಚಾಳಿ ಜನರಲ್ಲಿ ಹೆಚ್ಚಾಗಿರುವುದರಿಂದ, ಅಂತಹಾ ಸ್ಥಳದಲ್ಲಿ ಈ ಅಪೂರ್ವ ಕಲಾಕೃತಿ ರಚಿಸಿ ಇಟ್ಟ ಕಾರಣ ಜನರ ಗಮನ ಸೆಳೆದಿದೆ. 

World No Tobacco Day: ತಂಬಾಕು ವ್ಯಸನಿಗಳಿಗೆ ಬಹುಕಾಲ ಕಾಡಲಿರುವ ಚಿತ್ರ ರಚಿಸಿದ ಸುದರ್ಶನ್ ಪಟ್ನಾಯಕ್!

ಈ ಸಂದರ್ಭ ಮಾತನಾಡಿದ ಕಲಾವಿದ ಶ್ರೀನಾಥ್ ಮಣಿಪಾಲ್ ‘ನಮ್ಮ ಪರಿಸರವನ್ನು ತಂಬಾಕಿನ ಅಪಾಯದಿಂದ ರಕ್ಷಿಸಿ ಎಂಬ ಧ್ಯೇಯ ವಾಕ್ಯದೊಂದಿಗೆ ತಂಬಾಕಿನಿಂದ ಉಂಟಾಗುವ ಕಾಯಿಲೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಕಲಾಕೃತಿಯನ್ನು ಪ್ರದರ್ಶಿಸಲಾಗಿದೆ. ಇದನ್ನು ಪರಿಸರ ಸ್ನೇಹಿ ವಸ್ತುಗಳನ್ನು ಬಳಸಿ ರಚಿಸಲಾಗಿದೆ. ಮುಖ್ಯವಾಗಿ ಕಾರ್ಡ್ ಬೋರ್ಡ್ಗಳನ್ನು ಉಪಯೋಗಿಸ ಲಾಗಿದೆ ಎಂದು ಹೇಳಿದರು. ಈ ಕಲಾಕೃತಿಯಲ್ಲಿನ ಏಡಿಯು ಕ್ಯಾನ್ಸರ್ ನ್ನು ಪ್ರತಿಬಿಂಬಿಸುತ್ತದೆ. ಕೊಡೆಯನ್ನು ಇರಿಸಿ, ಕ್ಯಾನ್ಸರ್‌ ನ ನೆರಳು ನಮ್ಮ ಪರಿಸರದ ಮೇಲೆ ಬಿದ್ದಿರುವುದನ್ನು ಇದರಲ್ಲಿ ತೋರಿಸಲಾಗಿದೆ. ಆ ಮೂಲಕ ನಮ್ಮ ಪರಿಸರವನ್ನು ರಕ್ಷಿಸುವ ಸಂದೇಶವನ್ನು ಸಾರಲಾಗಿದೆ ಎಂದರು.

ಅದೇ ರೀತಿ ತಂಬಾಕಿನ ಮೂಲಕ ಪಂಜರವನ್ನು ನಿರ್ಮಿಸಿದ್ದು, ಆ ಪಂಜರದಲ್ಲಿ ಸಿಲುಕಿರುವ ನಮ್ಮ ಪರಿಸರವನ್ನು ಹೊರ ತರಬೇಕೆಂಬ ಸಂದೇಶ ಕೂಡ ಕಲಾಕೃತಿಯಲ್ಲಿ ಅಡಕವಾಗಿದೆ. ಈ ಕಲಾಕೃತಿಯನ್ನು ಮುಂದೆ ಜನ ಸೇರುವ ಸ್ಥಳಗಳಲ್ಲಿ ಇರಿಸಿ ಜನಜಾಗೃತಿ ಮೂಡಿಸಲಾಗುವುದು ಎಂದು ಅವರು ತಿಳಿಸಿದರು.

ಈ ಮೊದಲು ಮಣಿಪಾಲದ ಮಾಹೆ ವಿಶ್ವವಿದ್ಯಾಲಯದ ಆವರಣದಲ್ಲಿ ಕಲಾಕೃತಿಯನ್ನು ಇರಿಸಲಾಗಿತ್ತು. ಅಲ್ಲಿ ಬರುವ ವೈದ್ಯಕೀಯ ವಿದ್ಯಾರ್ಥಿಗಳ ಗಮನ ಸೆಳೆದು ತಂಬಾಕಿನ ದುಷ್ಪರಿಣಾಮಗಳ ಕುರಿತು ಎಚ್ಚರಿಸಲಾಗಿತ್ತು. ಇದೀಗ ಜನಸಾಮಾನ್ಯರ ನಡುವೆ ಕಲಾಕೃತಿಯೊಂದು ಜಾಗೃತಗೊಳಿಸುವ ಕೆಲಸ ಮಾಡುತ್ತಿದೆ. ಕಲಾವಿದ ಶ್ರೀನಾಥ್ ಅವರ ಈ ಪರಿಶ್ರಮಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.