'ಉತ್ತರ ಭಾರತದಲ್ಲಿ ಸಿಲುಕಿದ ಕನ್ನಡಿಗರನ್ನ ಕರೆತರಲು ವಿಶೇಷ ರೈಲು'
ದಿಲ್ಲಿ, ಉತ್ತರದ ರಾಜ್ಯಗಳ ಕನ್ನಡಿಗರಿಗೆ ಒಂದೆರಡು ದಿನಗಳಲ್ಲಿ ವಿಶೇಷ ರೈಲು| ಹರಿಯಾಣ, ಪಂಜಾಬ್ ಮತ್ತಿತರ ಸ್ಥಳಗಳಿಂದಲೂ ರಾಜ್ಯಕ್ಕೆ ವಾಪಸ್ ಬರಲು ಅಲ್ಲಿರುವ ಕನ್ನಡಿಗರು ಕಾತುರ| ಆ ರಾಜ್ಯಗಳ ಅಧಿಕಾರಿಗಳ ಜತೆ ಮಾತನಾಡಿ ಅಲ್ಲಿರುವ ಕನ್ನಡಿಗರನ್ನು ಕೂಡಲೇ ದೆಹಲಿಗೆ ಕರೆಸಿಕೊಂಡು ಅವರನ್ನು ಸಹ ರಾಜ್ಯಕ್ಕೆ ಕಳುಹಿಸಿಕೊಡುವ ವ್ಯವಸ್ಥೆ ಮಾಡುವಂತೆ ರಾಜ್ಯದ ಅಧಿಕಾರಿಗಳಿಗೆ ಸೂಚನೆ|
ಬೆಂಗಳೂರು(ಮೇ.08): ಲಾಕ್ಡೌನ್ನಿಂದಾಗಿ ಉತ್ತರ ಭಾರತದಲ್ಲಿ ಸಿಕ್ಕಿಹಾಕಿಕೊಂಡಿರುವ ಕನ್ನಡಿಗರು ತಮ್ಮ ರಾಜ್ಯಕ್ಕೆ ಮರಳಲು ವಿಶೇಷ ರೈಲನ್ನು ಬಿಡಲು ರೈಲ್ವೆ ಇಲಾಖೆ ಒಪ್ಪಿಗೆ ನೀಡಿದ್ದು, ಒಂದೆರಡು ದಿನದಲ್ಲಿ ದೆಹಲಿಯಿಂದ ಬೆಂಗಳೂರಿಗೆ ವಿಶೇಷ ರೈಲು ಸಂಚರಿಸಲಿದೆ ಎಂದು ಕೇಂದ್ರ ರಾಸಾಯನಿಕ ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ.
ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರೊಂದಿಗೆ ಮಾತುಕತೆ ನಡೆಸಿದ್ದು, ಒಂದೆರಡು ದಿನದಲ್ಲಿ ದೆಹಲಿಯಿಂದ ರೈಲು ಸಂಚರಿಸಲಿದೆ ಎಂದಿದ್ದಾರೆ. ದೆಹಲಿ ಮಾತ್ರವಲ್ಲದೇ, ಹರಿಯಾಣ, ಪಂಜಾಬ್ ಮತ್ತಿತರ ಸಮೀಪದ ಸ್ಥಳಗಳಿಂದಲೂ ರಾಜ್ಯಕ್ಕೆ ವಾಪಸ್ ಬರಲು ಅಲ್ಲಿರುವ ಕನ್ನಡಿಗರು ಕಾತರರಾಗಿದ್ದಾರೆ. ಆ ರಾಜ್ಯಗಳ ಅಧಿಕಾರಿಗಳ ಜತೆ ಮಾತನಾಡಿ ಅಲ್ಲಿರುವ ಕನ್ನಡಿಗರನ್ನು ಕೂಡಲೇ ದೆಹಲಿಗೆ ಕರೆಸಿಕೊಂಡು ಅವರನ್ನು ಸಹ ರಾಜ್ಯಕ್ಕೆ ಕಳುಹಿಸಿಕೊಡುವ ವ್ಯವಸ್ಥೆ ಮಾಡುವಂತೆ ರಾಜ್ಯದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.
ಲಾಕ್ಡೌನ್ ಎಫೆಕ್ಟ್: ಇಂದಿನಿಂದ ವಲಸೆ ಕಾರ್ಮಿಕರಿಗೆ ವಿಶೇಷ ರೈಲು..!
ಅರಬ್ ದೇಶದಲ್ಲಿರುವ ಕನ್ನಡಿಗರು ಸ್ವದೇಶಕ್ಕೆ ಮರಳಲು ಎರಡು ವಿಮಾನಗಳ ವ್ಯವಸ್ಥೆಯಾಗಿದೆ. ಇದೇ ತಿಂಗಳು 12ರಂದು ಯುಎಇನಿಂದ ಮಂಗಳೂರಿಗೆ ವಿಮಾನ ಸಂಚರಿಸುವುದನ್ನು ವಿದೇಶಾಂಗ ಸಚಿವರು ತಮಗೆ ಖಚಿತಪಡಿಸಿದ್ದಾರೆ. ಮತ್ತೊಂದು ವಿಮಾನ ಬೆಂಗಳೂರಿಗೆ ಬರಲಿದ್ದು, ಅದರ ವೇಳಾಪಟ್ಟಿಯನ್ನು ಪ್ರಕಟವಾಗಲಿದೆ ಎಂದಿದ್ದಾರೆ.