ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕು ರಾಜನಹಳ್ಳಿ ಗ್ರಾಮದಲ್ಲಿರುವ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ‘ಮಹರ್ಷಿ ವಾಲ್ಮೀಕಿ ಜಾತ್ರೆ’ ಹಮ್ಮಿಕೊಳ್ಳಲಾಗಿದೆ. ಈ ವೇಳೆ ನಟ ಕಿಚ್ಚ ಸುದೀಪ್‌ ಅವರಿಗೆ ‘ವಾಲ್ಮೀಕಿ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುವುದು

ಬೆಂಗಳೂರು (ಫೆ.07): ವಾಲ್ಮೀಕಿ ಸಮಾಜದ ಸಾಮಾಜಿಕ ಹಾಗೂ ಸಾಂಸ್ಕೃತಿಕ ಮೌಲ್ಯಗಳನ್ನು ಎತ್ತಿ ಹಿಡಿಯಲು ಫೆ.8 ಮತ್ತು 9ರಂದು ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕು ರಾಜನಹಳ್ಳಿ ಗ್ರಾಮದಲ್ಲಿರುವ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ‘ಮಹರ್ಷಿ ವಾಲ್ಮೀಕಿ ಜಾತ್ರೆ’ ಹಮ್ಮಿಕೊಳ್ಳಲಾಗಿದೆ. ಈ ವೇಳೆ ನಟ ಕಿಚ್ಚ ಸುದೀಪ್‌ ಅವರಿಗೆ ‘ವಾಲ್ಮೀಕಿ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಹರ್ಷಿ ವಾಲ್ಮೀಕಿ ಜಾತ್ರಾ ಸಮಿತಿ ಅಧ್ಯಕ್ಷರೂ ಆದ ಅವರು, ಭಾರತೀಯ ಪರಂಪರೆಯಲ್ಲಿ ಧಾರ್ಮಿಕ ಮಠ ಮತ್ತು ಪೀಠಗಳು ಸಾಮಾಜಿಕ ಜಾಗೃತಿ ಉಂಟು ಮಾಡುತ್ತಿವೆ. ಹೀಗಾಗಿ ಜನ ಜಾಗೃತಿಗಾಗಿಯೇ ವಾಲ್ಮೀಕಿ ಗುರುಪೀಠದ ಆವರಣದಲ್ಲಿ ಮಹರ್ಷಿ ವಾಲ್ಮೀಕಿ ಜಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸುದೀಪ್‌ಗೆ ಮಗಳ ಬಗ್ಗೆ ಭಯವಂತೆ, ಯಾಕೆ ಗೊತ್ತಾ! ..

ವಾಲ್ಮೀಕಿ ಜಾತ್ರೆಯ ವೇಳೆ ಮಠದ 23ನೇ ವಾರ್ಷಿಕೋತ್ಸವ, ಲಿಂಗೈಕ್ಯ ಜಗದ್ಗುರು ಪುಣ್ಯಾನಂದಪುರಿ ಸ್ವಾಮಿಗಳ 14ನೇ ಪುಣ್ಯಸ್ಮರಣೆ, ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮಿಗಳ 13ನೇ ಪಟ್ಟಾಧಿಕಾರ ಮಹೋತ್ಸವ ಕಾರ್ಯಕ್ರಮಗಳು ನಡೆಯಲಿವೆ.

9ರಂದು ಸಮಾವೇಶ, ಸಿಎಂ ಭಾಗಿ: ಇನ್ನು ಎರಡು ದಿನ ಸಹ ವೈಚಾರಿಕ ಚಿಂತನೆಯ ತಳಹದಿಯಲ್ಲಿ ಚರ್ಚೆಗಳು ನಡೆಯಲಿವೆ. ಬುಡಕಟ್ಟು ಜನಾಂಗ ಎದುರಿಸುತ್ತಿರುವ ಸವಾಲುಗಳ ಕುರಿತು ವಿಚಾರಗೋಷ್ಠಿ ನಡೆಯಲಿದೆ.

ಫೆ.9ರಂದು ನಡೆಯುವ ಜನಜಾಗೃತಿ ಸಮಾವೇಶವನ್ನು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ. ಇದೇ ವೇಳೆ ಅಭಿನಯ ಚಕ್ರವರ್ತಿ ಎಂದೇ ಹೆಸರಾಗಿರುವ ಕಿಚ್ಚ ಸುದೀಪ್‌ ಅವರಿಗೆ ವಾಲ್ಮೀಕಿ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಹೇಳಿದ್ದಾರೆ.

ಸಮಾರಂಭದಲ್ಲಿ ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿಗಳು, ಸಚಿವರು, ಶಾಸಕರು, ಸಂಸದರೂ ಸೇರಿದಂತೆ ಬಹುತೇಕ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ವಿವಿಧ ಮಠಗಳ ಸ್ವಾಮೀಜಿಗಳು ಭಾಗವಹಿಸಲಿದ್ದು, ವಾಲ್ಮೀಕಿ ಗುರುಪೀಠದ ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮೀಜಿ ಅವರು ಕಾರ್ಯಕ್ರಮಗಳ ದಿವ್ಯ ಸಾನಿಧ್ಯ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.