ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದ ಸುತ್ತಮುತ್ತ ಮತ್ತೆ ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 3.6 ತೀವ್ರತೆ ದಾಖಲಾಗಿದ್ದು, ಪದೇ ಪದೇ ಭೂಮಿ ಕಂಪಿಸುತ್ತಿರುವುದರಿಂದ ಜನರು ತೀವ್ರ ಆತಂಕಕ್ಕೊಳಗಾಗಿದ್ದಾರೆ.

ವಿಜಯಪುರ (ಸೆ.17): ಜಿಲ್ಲೆಯಲ್ಲಿ ಭೂಮಿಯ ಕಂಪನ ಮುಂದುವರಿದಿದ್ದು, ಮತ್ತೊಮ್ಮೆ ಭೂಕಂಪನ ಸಂಭವಿಸಿರುವ ಬಗ್ಗೆ ವರದಿಯಾಗಿದೆ. ಬಸವನ ಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದ ಸುತ್ತಮುತ್ತ ಭೂಮಿ ಕಂಪಿಸಿದ ಅನುಭವವಾಗಿದ್ದು, ಇದರಿಂದ ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಜನತೆ ತೀವ್ರ ಆತಂಕಕ್ಕೀಳಗಾಗಿದ್ದಾರೆ.

ಭೂಕಂಪನ ಮಾಪನ ಕೇಂದ್ರದ ಮಾಹಿತಿ ಪ್ರಕಾರ, ಭೂಕಂಪನದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 3.6 ರಷ್ಟು ದಾಖಲಾಗಿದೆ. ಬಸವನ ಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದ ಕೇಂದ್ರಬಿಂದುವಿನಿಂದ 2.4 ಕಿ.ಮೀ ಅಂತರದಲ್ಲಿ ಈ ಭೂಕಂಪನದ ಕೇಂದ್ರವಿತ್ತು ಎಂದು ತಿಳಿದುಬಂದಿದೆ. ಭೂಮಿಯ ಆಳದಲ್ಲಿ ಅಂದರೆ ಸುಮಾರು 10 ಕಿ.ಮೀ ಆಳದಲ್ಲಿ ಈ ಭೂಕಂಪನ ಸಂಭವಿಸಿದೆ ಎಂದು ವರದಿಯಾಗಿದೆ.

ಆತಂಕದಲ್ಲಿ ಗ್ರಾಮಸ್ಥರು:

ವಿಜಯಪುರ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಮೇಲಿಂದ ಮೇಲೆ ಭೂಮಿ ಕಂಪಿಸುತ್ತಿರುವುದು ಜನರಲ್ಲಿ ನಿದ್ದೆಗೆಡಿಸಿದೆ. ಸತತವಾಗಿ ಭೂಮಿ ಕಂಪಿಸುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ದೊಡ್ಡ ಅಪಘಾತ ಸಂಭವಿಸುತ್ತದೆಯೋ ಎಂಬ ಭೀತಿಯಲ್ಲಿ ಜನರು ಕಾಲ ಕಳೆಯುವಂತಾಗಿದೆ. ಮನೆಯಿಂದ ಹೊರಗೆ ಓಡಿಬಂದು ಆತಂಕ ವ್ಯಕ್ತಪಡಿಸುತ್ತಿರುವ ದೃಶ್ಯಗಳು ಕಂಡುಬಂದಿವೆ. ಹಿರಿಯ ಅಧಿಕಾರಿಗಳು ಹಾಗೂ ವಿಜ್ಞಾನಿಗಳು ಈ ಪ್ರದೇಶದಲ್ಲಿ ನಿರಂತರ ಭೂಕಂಪನಕ್ಕೆ ಕಾರಣವೇನು ಎಂಬುದನ್ನು ಪತ್ತೆ ಹಚ್ಚಿ, ಜನರಲ್ಲಿರುವ ಭಯವನ್ನು ದೂರ ಮಾಡಬೇಕೆಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.

Scroll to load tweet…