ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ಸೇರಿ ಮತದ ಜತೆಗೆ ಪ್ರೀತಿಯನ್ನೂ ಕೊಟ್ಟಿದ್ದಾರೆ. ಇದರಿಂದ ಯಶಸ್ಸು ಸಾಧ್ಯವಾಗಿದೆ. ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ ಎಂದು ಸಂಸದ ಡಾ.ಸಿ.ಎನ್.ಮಂಜುನಾಥ್ ಹೇಳಿದರು. 

ಮಾಗಡಿ (ಜು.14): ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ಸೇರಿ ಮತದ ಜತೆಗೆ ಪ್ರೀತಿಯನ್ನೂ ಕೊಟ್ಟಿದ್ದಾರೆ. ಇದರಿಂದ ಯಶಸ್ಸು ಸಾಧ್ಯವಾಗಿದೆ. ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ ಎಂದು ಸಂಸದ ಡಾ.ಸಿ.ಎನ್.ಮಂಜುನಾಥ್ ಹೇಳಿದರು. ಪಟ್ಟಣದ ಸಿದ್ಧಾರೂಢ ಭವನದಲ್ಲಿ ಬಿಜೆಪಿ ವತಿಯಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿ, ಮುಂಬರುವ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಯನ್ನು ಬಿಜೆಪಿ, ಜೆಡಿಎಸ್ ಒಗ್ಗಟ್ಟಾಗಿ ಎದುರಿಸೋಣ. ನರೇಂದ್ರ ಮೋದಿ ಅವರು ಪ್ರಧಾನಿಗಳಾಗಿ ಮೊದಲ ಕಡತಕ್ಕೆ ಸಹಿ ಹಾಕುವ ಮೂಲಕ ರೈತರಿಗೆ 2 ಸಾವಿರ ರು. ಮೊದಲ ಕಂತಿನ ಹಣ ಬಿಡುಗಡೆಗೆ ಆದ್ಯತೆ ನೀಡಿದ್ದಾರೆ. 

Add Asianetnews Kannada as a Preferred SourcegooglePreferred

ಜತೆಗೆ 14 ವಿವಿಧ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ಮಾಡುವ ಮೂಲಕ ರೈತರ ಪರವಾಗಿ ನಿಂತಿದ್ದಾರೆ ಎಂದು ಹೇಳಿದರು. ಎಕ್ಸ್‌ಪ್ರೆಸ್ ಕೆನಾಲ್ ಕಾಮಗಾರಿಗೆ ತುಮಕೂರಿನಲ್ಲಿ ವಿರೋಧ ವ್ಯಕ್ತವಾಗಿದ್ದು ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸುವ ಕೆಲಸ ಆಗಬೇಕಿದೆ. ಮುಖ್ಯಮಂತ್ರಿ ಜತೆ ಎರಡು ಜಿಲ್ಲೆಯ ಮುಖಂಡರು ಸಭೆ ಮಾಡಿ ಪರಸ್ಪರ ಸೌಹಾರ್ದತೆಯಿಂದ ಒಮ್ಮತಕ್ಕೆ ಬಂದು ಕಾಮಗಾರಿ ಆರಂಭಿಸಬೇಕು. ಸುಮ್ಮನೆ ಘರ್ಷಣೆಗಳಿಗೆ ಎಡೆ ಮಾಡಿಕೊಡಬಾರದು. ನಾನು ಕೂಡ ತುಮಕೂರು ಭಾಗದ ಜನಪ್ರತಿನಿಧಿಗಳನ್ನು ಭೇಟಿಯಾಗಿ, ಈ ಬಗ್ಗೆ ಮಾತುಕತೆ ನಡೆಸುತ್ತೇನೆ ಎಂದು ತಿಳಿಸಿದರು.

ಅಭಿವೃದ್ಧಿ ಕಾರ್ಯದಲ್ಲಿ ಭ್ರಷ್ಟಾಚಾರ ಸಹಿಸಲ್ಲ: ಅಧಿಕಾರಿಗಳಿಗೆ ಶಾಸಕ ಬಸವರಾಜ ರಾಯರಡ್ಡಿ ಎಚ್ಚರಿಕೆ

ಬಿಜೆಪಿ ಮುಖಂಡ ಪ್ರಸಾದ್‌ಗೌಡ ಮಾತನಾಡಿ, ಮಾಗಡಿ ತಾಲೂಕು ಸಾಕಷ್ಟು ಹಿಂದುಳಿದ ತಾಲೂಕಾಗಿರುವುದರಿಂದ ಹೇಮಾವತಿ ಯೋಜನೆ, ಕೈಗಾರಿಕಾ ಸ್ಥಾಪನೆ ಮಾಡುವ ಮೂಲಕ ನೂತನ ಸಂಸದರು ನಮ್ಮ ತಾಲೂಕಿಗೆ ಹೆಚ್ಚಿನ ಒತ್ತನ್ನು ಕೊಡಬೇಕು. ಶಾಸಕ ಬಾಲಕೃಷ್ಣರವರು ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚು ಒತ್ತನ್ನು ಕೊಡಬೇಕು. ಮಂಚನಬೆಲೆ ಸೇತುವೆ ನಿರ್ಮಾಣಕ್ಕೆ ಕೂಡಲೇ ಕಾಮಗಾರಿ ಆರಂಭಿಸುವ ಕೆಲಸ ಆಗಬೇಕಿದೆ. ತಾಲೂಕು ಅಭಿವೃದ್ಧಿಗೆ ಬಿಜೆಪಿ ಪಕ್ಷ ಯಾವತ್ತೂ ಬೆಂಬಲ ನೀಡುತ್ತದೆ ಎಂದು ತಿಳಿಸಿದರು.

ಮಾಜಿ ವಿಧಾನ ಪರಿಷತ್‌ ಸದಸ್ಯ ಅ.ದೇವೇಗೌಡ ಮಾತನಾಡಿ, ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೇಲೆ ಸಾಕಷ್ಟು ಹಗರಣಗಳು ನಡೆಯುತ್ತಿದೆ. ಸ್ವತಃ ಮುಖ್ಯಮಂತ್ರಿಯವರೆ ಮುಡಾ ಪ್ರಕರಣದಲ್ಲಿ ಸಿಲುಕಿಕೊಂಡಿದ್ದಾರೆ. ವಾಲ್ಮೀಕಿ ಹಗರಣ ಬೆಳಕಿಗೆ ಬಂದಿದ್ದು 7ನೇ ವೇತನ ಆರೋಗ ವರದಿ ಜಾರಿ ಮಾಡದೆ ಸರ್ಕಾರಿ ನೌಕರರಿಗೆ ಸಂಬಳ ಕೊಡದ ಸ್ಥಿತಿಯಲ್ಲಿ ರಾಜ್ಯ ಸರ್ಕಾರ ದಿವಾಳಿ ಎದ್ದಿದೆ. ಇದು ಪಂಚ ಗ್ಯಾರಂಟಿಗಳ ಫಲ ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆ: ಮನೆ ಕುಸಿತ, ಮರ, ವಿದ್ಯುತ್ ಕಂಬಗಳು ಧರೆಗೆ

ಸಭೆಗೆ ಜೆಡಿಎಸ್ ಮುಖಂಡರು ಗೈರು: ಮಾಗಡಿಯಲ್ಲಿ ನೂತನ ಸಂಸದ ಡಾ.ಸಿ.ಎನ್.ಮಂಜುನಾಥ್ ಅವರ ಅಭಿನಂದನಾ ಸಮಾರಂಭದಲ್ಲಿ ಮಾಜಿ ಶಾಸಕ ಎ.ಮಂಜುನಾಥ್ ವೈಯಕ್ತಿಕ ಕಾರಣದಿಂದ ಪ್ರವಾಸದಲ್ಲಿದ್ದ ಹಿನ್ನೆಲೆಯಲ್ಲಿ ಜೆಡಿಎಸ್‌ನ ಯಾವ ಮುಖಂಡರೂ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿರಲಿಲ್ಲ. ಬಿಜೆಪಿ ಕಾರ್ಯಕರ್ತರು ಮಾತ್ರ ಸಭೆಯಲ್ಲಿ ಭಾಗವಹಿಸಿದ್ದು ಬೆರಳೆಣಿಕೆಯಷ್ಟು ಕಾರ್ಯಕರ್ತರು ಇದ್ದು ಕುರ್ಚಿಗಳು ಖಾಲಿಯಾಗಿದ್ದವು. ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ, ತಾಲೂಕು ಅಧ್ಯಕ್ಷ ವೀರಭದ್ರ, ಮುಖಂಡರಾದ ಕಣ್ಣೂರು, ನಾಗರಾಜು, ಚಕ್ರಬಾವಿ ಯೋಗಣ್ಣ, ಹನುಮಗೌಡ, ಶಶಿ, ಭಾಸ್ಕರ್, ಬಾಲಾಜಿ, ಎನ್ಇಎಸ್ ಆನಂದ್ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.