ಹವಾಮಾನ ಇಲಾಖೆ ಮಳೆ ಬರುವ ಬಗ್ಗೆ ಮುನ್ಸೂಚನೆ ನೀಡಿದೆ. 5 ದಿನಗಳ ಕಾಲ ಮಳೆಯ ಬಗ್ಗೆ ಸೂಚನೆ ನೀಡಲಾಗಿದೆ. ಕೃಷಿ ಕಾರ್ಯದಲ್ಲಿ ತೊಡಗಲು ಕೃಷಿಕರಿಗೂ ಸಲಹೆ ನೀಡಲಾಗಿದೆ. 

 ಮೈಸೂರು (ಏ.17):  ಭಾರತೀಯ ಹವಾಮಾನ ಇಲಾಖೆಯ ಈ ವಾರದ ಮುನ್ಸೂಚನೆ ಪ್ರಕಾರ ಮೈಸೂರು ಜಿಲ್ಲೆಯಲ್ಲಿ ಏ.17 ರಿಂದ 21 ರವರೆಗೆ ಮೋಡ ಕವಿದ ವಾತಾವರಣ ಇರಲಿದ್ದು ಅಲ್ಲಲ್ಲಿ ಚದುರಿದಂತೆ ಹಗುರವಾದ ಮಳೆ ಬರುವ ಸಾಧ್ಯತೆ ಇದೆ ಎಂದು ನಾಗನಹಳ್ಳಿಯ ಗ್ರಾಮೀಣ ಕೃಷಿ ಹವಾಮಾನ ಸೇವಾ, ಕೃಷಿ ಹವಾಮಾನ ಕ್ಷೇತ್ರ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೃಷಿ ಸಲಹೆಗಳು- ಮಳೆ ಬಂದಿರುವ ಕಡೆ ರೈತರು ಇಳಿಜಾರಿಗೆ ಅಡ್ಡಲಾಗಿ ಮಾಗಿ ಉಳುಮೆ ಮಾಡಬೇಕು. ಇದರಿಂದ ನೀರು ಇಂಗುವಿಕೆ ಹೆಚ್ಚಾಗುತ್ತದೆ ಮತ್ತು ಮಣ್ಣಿನ ಸವಕಳಿ ಕಡಿಮೆಯಾಗುತ್ತದೆ. ರೈತರು ಇಳಿಜಾರಿಗೆ ಅಡ್ಡಲಾಗಿ ಉಳುಮೆ ಮಾಡಿ ಜಮೀನನ್ನು ಪೂರ್ವ ಮುಂಗಾರು ಬಿತ್ತನೆಗೆ ಸೂಕ್ತ ರೀತಿಯಲ್ಲಿ ತಯಾರಿಸಿಕೊಳ್ಳುವುದು. ಪೂರ್ವ ಮುಂಗಾರಿಗೆ ಬಿತ್ತನೆ ಬೀಜಗಳನ್ನು ಸಿದ್ಧತೆ ಮಾಡಿಕೊಳ್ಳಬೇಕು. ರೈತರು ಪ್ರಮಾಣಿಕರಿಸಿದ ಬಿತ್ತನೆ ಬೀಜಗಳನ್ನು ಅಧಿಕೃತ ಮಾರಾಟಗಾರರಿಂದಲೇ ಖರೀದಿಸಬೇಕಾಗಿ ಸಲಹೆ ನೀಡಲಾಗಿದೆ.

ಈ ವರ್ಷವೂ ಸಾಮಾನ್ಯ ಮುಂಗಾರು: ಸ್ಕೈಮೆಟ್‌! ...

ದ್ವಿದಳ ಧಾನ್ಯಗಳನ್ನು ಬಿತ್ತನೆ ಮಾಡುವಾಗ ರೈತರು ಬೀಜಗಳನ್ನು ರೈಜೋಬಿಯಂ ಸೂಕ್ಷ್ಮಾಣು ಜೀವಿಗಳಿಂದ ಉಪಚರಿಸಬೇಕು (20 ಗ್ರಾಂ/ ಕೆ.ಜಿ.) ಹಸಿರೆಲೆ ಗೊಬ್ಬರಗಳಾದ ಸೆಣಬು ಅಥವಾ ಡಯಾಂಚ ಮತ್ತು ದ್ವಿದಳ ಧಾನ್ಯಗಳಾದ ಅಲಸಂದೆ, ಹೆಸರು, ಅವರೆ, ಹುರುಳಿ, ಉದ್ದು ಇತ್ಯಾದಿ ಬೆಳೆಗಳನ್ನು ಸೂಕ್ತ ಪ್ರದೇಶಗಳಲ್ಲಿ ಬಿತ್ತನೆ ಮಾಡುವುದು. ನೀರು ಬರಿದಾಗಿರುವ ಕೆರೆಗಳಲ್ಲಿ ಗೋಡು ಮಣ್ಣನ್ನು ತೆಗೆದು ಭೂಮಿಗೆ ಸೇರಿಸುವುದರಿಂದ ಭೂಮಿಯ ಫಲವತ್ತತೆಯನ್ನು ಹೆಚ್ಚಿಸಬಹುದು.

ನೀರಿನ ಕೊರತೆ ಹಾಗೂ ಹೆಚ್ಚುತ್ತಿರುವ ತಾಪಮಾನದ ಕಾರಣ ನಿಮ್ಮ ಮನೆ ಹಾಗೂ ಹೊಲಗಳಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಕುಡಿಯುವ ನೀರು ಲಭ್ಯವಾಗುವಂತೆ ಮಾಡಬೇಕು ಎಂದು ಕೃಷಿ ಹವಾಮಾನ ಕ್ಷೇತ್ರ ವಿಭಾಗದ ಹಿರಿಯ ಕ್ಷೇತ್ರ ಅಧೀಕ್ಷಕ ಡಾ.ಪಿ. ಪ್ರಕಾಶ್‌, ಸಹ ಸಂಶೋಧಕ ಎನ್‌. ನರೇಂದ್ರಬಾಬು ಸಲಹೆ ನೀಡಿದ್ದಾರೆ.