ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಅಂತ್ಯಕ್ರಿಯೆಯು ಹಾಸನದ ಮಾವಿನಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಅವರು ತಮ್ಮ ಜೀವನದ ಬಹುಪಾಲು ಸಮಯವನ್ನು ಈ ಭಾಗದಲ್ಲಿ ಕಳೆದಿದ್ದರಿಂದ ಮತ್ತು ಸ್ಥಳೀಯರೊಂದಿಗೆ ಆತ್ಮೀಯ ಬಾಂಧವ್ಯ ಹೊಂದಿದ್ದರಿಂದ ಈ ಸ್ಥಳವನ್ನು ಅಂತ್ಯಸಂಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ ಎಂದು ಅವರ ಅಳಿಯ ಡಾ.ಸಿ.ಎನ್ ಮಂಜುನಾಥ್ ತಿಳಿಸಿದ್ದಾರೆ.

ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಅವರು ಎಲ್ಲರನ್ನೂ ಬಿಟ್ಟು ಅಗಲಿದ್ದಾರೆ. ಇಂದು (ಜುಲೈ 20) ಅವರ ಅಂತ್ಯಕ್ರಿಯೆ ನಡೆಯಲಿದ್ದು, ಅದಕ್ಕಾಗಿ ಎಲ್ಲ ರೀತಿಯ ಸಿದ್ಧತೆ ನಡೆಸಲಾಗಿದೆ. ಹಾಸನದ ಮಾವಿನಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಅಂತ್ಯಕ್ರಿಯೆ ನಡೆಯಲಿದೆ. ಈಗಾಗಲೇ ಅಂತ್ಯಕ್ರಿಯೆ ಸಿದ್ಧತೆಗಳು ಆರಂಭವಾಗಿದ್ದು, ಹಾಸನ ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಕೆಲವೇ ಕ್ಷಣಗಳಲ್ಲಿ ಅಂತ್ಯಕ್ರಿಯೆ

ಬೆಂಗಳೂರಿನಿಂದ ಹಾಸನ ಜಿಲ್ಲೆಯ ಹೊಳೆನರಸೀಪುರವರೆಗೆ ಚೆನ್ನಮ್ಮ ಅಂತಿಮ ಯಾತ್ರೆ ಮೆರವಣಿಗೆ ನಡೆದಿದ್ದು, ಮಾರ್ಗ ಮಧ್ಯೆ ಸುಮಾರು 10 ಸ್ಥಳಗಳಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. 11:30ಕ್ಕೆ ಕ್ಕೆ ಮಾವಿನಕೆರೆ ಶ್ರೀರಂಗನಾಥಸ್ವಾಮಿ ಬೆಟ್ಟದ ತಪ್ಪಲು ಪ್ರದೇಶದಲ್ಲಿರುವ ಕ್ಯಾತನಹಳ್ಳಿಗೆ ಮೃತದೇಹ ತಲುಪಿದ್ದು, ಮಧ್ಯಾಹ್ನ 2ರಿಂದ ಸಂಜೆ 4:15ರವರೆಗೆ ಅಂತ್ಯಕ್ರಿಯೆ ವಿಧಿವಿಧಾನಗಳು ನಡೆಯಲಿವೆ.

ಇಲ್ಲೇ ಅಂತ್ಯಕ್ರಿಯೆ ಏಕೆ?

ಆದರೆ, ಶ್ರೀರಂಗನಾಥಸ್ವಾಮಿ ಬೆಟ್ಟದ ತಪ್ಪಲು ಪ್ರದೇಶದಲ್ಲಿಯೇ ಚೆನ್ನಮ್ಮ ಅವರ ಅಂತ್ಯಕ್ರಿಯೆ ಮಾಡ್ತಿರೋ ಹಿಂದೆ ವಿಶೇಷ ಕಾರಣ ಇದ್ದು, ಆ ಕುರಿತು ಅವರ ಅಳಿಯ ಡಾ.ಸಿ.ಎನ್ ಮಂಜುನಾಥ್ ಅವರು ಕುತೂಹಲದ ವಿಷಯವನ್ನು ಶೇರ್​ ಮಾಡಿಕೊಂಡಿದ್ದಾರೆ.

ಚೆನ್ನಮ್ಮ ಅವರು ತಮ್ಮ ಜೀವನದ ಬಹುಪಾಲು ಸಮಯವನ್ನು ಈ ಭಾಗದಲ್ಲೇ ಕಳೆದಿದ್ದರು. ಸುತ್ತಮುತ್ತಲಿನ ಗ್ರಾಮಗಳ ಜನರೊಂದಿಗೆ ಅವರಿಗೆ ಆತ್ಮೀಯ ಬಾಂಧವ್ಯವಿತ್ತು. ಈ ಕಾರಣದಿಂದ ಕುಟುಂಬ ಸದಸ್ಯರು ಹಾಗೂ ಗ್ರಾಮಸ್ಥರ ಒಮ್ಮತದೊಂದಿಗೆ ಬೆಟ್ಟದ ರಂಗನಾಥಸ್ವಾಮಿ ತಪ್ಪಲಿನಲ್ಲೇ ಅಂತ್ಯಕ್ರಿಯೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇನ್ನು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ಹಿನ್ನೆಲೆಯಲ್ಲಿ, ಹಾಸನ ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಈ ಕುರಿತು ಅಧಿಕೃತ ಆದೇಶದ ಹೊರಡಿಸಿರುವ ಜಿಲ್ಲಾಧಿಕಾರಿ ಕೆ.ಎಸ್ ಲತಾಕುಮಾರಿ, ಮದ್ಯ ಮಾರಾಟಕ್ಕೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬಿಗಿ ಪೊಲೀಸ್‌ ಭದ್ರತೆಯನ್ನೂ ಕೂಡ ಒದಗಿಸಲಾಗಿದೆ.