ಬೆಂಗಳೂರಿನಲ್ಲಿ ಭಾನುವಾರ ನಡೆಯುವ ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಘೇರಾವ್ ಹಾಕಿ, ಕರಾಳ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಸ್ಥಳೀಯ ರೈತ ಮುಖಂಡ ಲೋಕನಾಥ್ ಹೆಬಸೂರ್ ಸೇರಿ ನೂರಾರು ರೈತರನ್ನು ನಗರದಲ್ಲಿ ಶನಿವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹುಬ್ಬಳ್ಳಿ : ಬೆಂಗಳೂರಿನಲ್ಲಿ ಭಾನುವಾರ ನಡೆಯುವ ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಘೇರಾವ್ ಹಾಕಿ, ಕರಾಳ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಸ್ಥಳೀಯ ರೈತ ಮುಖಂಡ ಲೋಕನಾಥ್ ಹೆಬಸೂರ್ ಸೇರಿ ನೂರಾರು ರೈತರನ್ನು ನಗರದಲ್ಲಿ ಶನಿವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Add Asianetnews Kannada as a Preferred SourcegooglePreferred

ರೈಲಿನ ಮೂಲಕ ಬೆಂಗಳೂರಿಗೆ ತೆರಳಲು ಹುಬ್ಬಳ್ಳಿ ಹಾಗೂ ನವಲಗುಂದ ತಾಲೂಕಿನ 130 ರೈತರು ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದರು. ಶನಿವಾರ ಸಂಜೆ ನವಲಗುಂದದಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ವೇಳೆ ಗೊಬ್ಬರಗುಂಪಿ, ಹೆಬಸೂರು ಗ್ರಾಮಗಳ ಬಳಿ ಅವರನ್ನು ತಡೆದು 80-100 ರೈತರನ್ನು ವಶಕ್ಕೆ ಪಡೆದರು. ಬಳಿಕ ಅವರೆಲ್ಲರನ್ನೂ ಎರಡು ಬಸ್ ಗಳಲ್ಲಿ ಧಾರವಾಡದ ಪ್ರಧಾನ ಪೊಲೀಸ್ ಕಚೇರಿಗೆ ಕರೆದುಕೊಂಡು ಹೋದರು.

ಅಲ್ಲಿಗೆ ತೆರಳಿದ ಬಳಿಕ ಪೊಲೀಸರು ವಶಕ್ಕೆ ಪಡೆದಿರುವುದನ್ನು ಖಂಡಿಸಿದ ರೈತರು ಬಸ್‌ನಿಂದ ಕೆಳಗಿಳಿಯುವುದಿಲ್ಲ ಎಂದು ಪಟ್ಟುಹಿಡಿದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಧಾರವಾಡ ಎಸಿಪಿ ಸಂಗೀತಾ ಜಿ. ಅವರು, ಯಾವುದೇ ರೈತರನ್ನು ಬಂಧಿಸಿಲ್ಲ. ಮುಂಜಾಗ್ರತಾ ಕ್ರಮವಾಗಿ ತಡೆಹಿಡಿಯಲಾಗಿದೆ. ಎಲ್ಲರನ್ನೂ ಬಿಡುಗಡೆ ಮಾಡಿ ಮನೆಗೆ ಬಿಡುವ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ನೂರಾರು ರೈತರನ್ನು ಪೊಲೀಸರು ವಶಕ್ಕೆ ಪಡೆದರೂ, 19 ರೈತರು ಪೊಲೀಸರ ಕಣ್ತಪ್ಪಿಸಿ ರೈಲು ನಿಲ್ದಾಣ ತಲುಪಿ ಬೆಂಗಳೂರಿನೆಡೆಗೆ ತೆರಳಿದ್ದಾರೆ ಎಂದು ಪ್ರತಿಭಟನೆ ನೇತೃತ್ವ ವಹಿಸಿದ್ದ ಕೆಲವು ಮುಖಂಡರು ತಿಳಿಸಿದ್ದಾರೆ.