ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ವಿರುದ್ಧ 309 ಪ್ರಕರಣ ದಾಖಲು
ಪೊಲೀಸ್ ಠಾಣೆ ಎದುರೇ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಚಿತ್ರದುರ್ಗ : ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಗೂಳಿಹಟ್ಟಿ ಡಿ.ಶೇಖರ್ ವಿರುದ್ದ 309 ಪ್ರಕರಣ ದಾಖಲಾಗಿದೆ.
ಚಿತ್ರದುರ್ಗ ಜಿಲ್ಲೆ ಹೊಸದುರ್ಗ ಶಾಸಕ ಗೂಳಿಹಟ್ಟಿ ಡಿ ಶೇಖರ್ ಪೊಲೀಸ್ ಠಾಣೆ ಎದುರೇ ಆತ್ಮಹತ್ಯೆಗೆ ಯತ್ನಿಸಿದ್ದರು. ಶಾಸಕರ ವಿರುದ್ಧದ ಆರೋಪ ಸಾಬೀತಾದರೆ ತಪ್ಪಿತಸ್ಥರು ಹಾಗೂ ಪೊಲೀಸ್ ಅಧಿಕಾರಿ ವಿರುದ್ದ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ ಅರುಣ್ ಹೇಳಿದ್ದಾರೆ.
ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಶಾಸಕ ಗೂಳಿಹಟ್ಟಿ ಶೇಖರ್
ಈ ಪ್ರಕರಣದ ಹಿನ್ನೆಲೆಯಲ್ಲಿ ಪಿಎಸ್ಐ ಸಸ್ಪೆಂಡ್ ಮಾಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರೂ ಕೂಡ ಒತ್ತಾಯಿಸಿದ್ದು, ಬಿಜೆಪಿ ಕಾರ್ಯಕರ್ತರು ದೂರು ನೀಡಿದಲ್ಲಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಸ್ ಪಿ ಅರುಣ್ ಹೇಳಿದ್ದಾರೆ.
ಬಂದ್ : ಆತ್ಮಹತ್ಯೆ ಯತ್ನ ಹಿನ್ನೆಲೆಯಲ್ಲಿ ಹೊಸದುರ್ಗ ಬಂದ್ ಗೆ ಬಿಜೆಪಿ ಕರೆ ನೀಡಿದ್ದು, ಸ್ವಯಂ ಪ್ರೇರಿತರಾಗಿ ಬಂದ್ ಮಾಡಲು ಅವಕಾಶ ನೀಡಲಾಗುತ್ತದೆ.
ಒತ್ತಾಯ ಪೂರ್ವಕವಾಗಿ ಬಂದ್ ಮಾಡಿಸಲು ಮುಂದಾದರೆ ಅಂತವರ ವಿರುದ್ದ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಚಿತ್ರದುರ್ಗ ಪೊಲೀಸ್ ವರಿಷ್ಠಾಧಿಕಾರಿ ಕೆ. ಅರುಣ್ ಹೇಳಿದ್ದಾರೆ.