ವರ್ಷದಲ್ಲಿ 5 ಕೋಟಿ ಜನ ಬಡತನದಿಂದ ಮುಕ್ತ: ಮೋದಿ | ಅಭಿವೃದ್ಧಿಯಿಂದ ಹಿಂದುಳಿದವರನ್ನು ಮುಖ್ಯ ವಾಹಿನಿಗೆ ತರಲು ಕೇಂದ್ರ ಸರ್ಕಾರ ಹೆಚ್ಚು ಒತ್ತು 

ನವದೆಹಲಿ (ಆ. 29): ಕಳೆದ ನಾಲ್ಕು ವರ್ಷಗಳ ಎನ್‌ಡಿಎ ಆಡಳಿತಾವಧಿಯಲ್ಲಿ 5 ಕೋಟಿ ಜನರನ್ನು ಬಡತನದಿಂದ ಮುಕ್ತಗೊಳಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಅಲ್ಲದೆ, ಅಭಿವೃದ್ಧಿಯಿಂದ ಹಿಂದುಳಿದವರನ್ನು ಮುಖ್ಯ ವಾಹಿನಿಗೆ ತರಲು ಕೇಂದ್ರ ಸರ್ಕಾರ ಹೆಚ್ಚು ಒತ್ತು ನೀಡಿದೆ ಎಂದು ಅವರು ತಿಳಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಂಗಳವಾರ ಸ್ವಕ್ಷೇತ್ರ ವಾರಣಾಸಿಯಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಮೋದಿ, ‘ಕಳೆದ ನಾಲ್ಕು ವರ್ಷಗಳ ಆಡಳಿತಾವಧಿಯಲ್ಲಿ 5 ಕೋಟಿ ಮಂದಿ ಬಡತನದಿಂದ ಹೊರ ಬಂದಿದ್ದಾರೆ. ಕಳೆದ 67 ವರ್ಷಗಳಲ್ಲಿ ಯಾವ ಸರ್ಕಾರವೂ ಮಾಡದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೊಳಿಸಿದೆ,’ ಎಂದು ಹೇಳಿದರು.

ಮುಂದುವರಿದ ಅವರು, ‘ಈ ನಗರದಲ್ಲಿ ಪ್ರತಿಯೊಬ್ಬರೂ ಇದೀಗ ಅಭಿವೃದ್ಧಿ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಕೇಂದ್ರ ಸರ್ಕಾರದ ಎಲ್ಲ ಕಲ್ಯಾಣ ಯೋಜನೆಗಳು ಸಾರ್ವಜನಿಕರಿಗೆ ತಲುಪಿಸುವುದು ಕಾರ್ಯಕರ್ತರ ಜವಾಬ್ದಾರಿಯಾಗಿದೆ. 2019ರ ಜನವರಿಯಲ್ಲಿ ವಾರಣಾಸಿಯಲ್ಲಿ ಆಯೋಜನೆಯಾಗುವ ಪ್ರವಾಸಿ ಭಾರತೀಯ ದಿವಸದ ಸಿದ್ಧತೆ ಹಾಗೂ ಈ ಪವಿತ್ರ ಕಾರ್ಯಕ್ರಮದ ಯಶಸ್ಸಿಗೆ ಪ್ರತಿಯೊಬ್ಬರೂ ಸಹಕಾರ ನೀಡಬೇಕು,’ ಎಂದು ಕೋರಿದರು.