ರಾಜ್ಯದಲ್ಲಿ ವರುಣನ ಆರ್ಭಟ: 8 ಬಲಿ
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಬುಧವಾರವೂ ವರುಣನ ಆರ್ಭಟ ಮುಂದುವರಿದಿದ್ದು, ಮಳೆ ಸಂಬಂಧಿ ಅನಾಹುತಕ್ಕೆ ಒಟ್ಟು ಎಂಟು ಮಂದಿ ಬಲಿಯಾಗಿದ್ದಾರೆ.
ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಬುಧವಾರವೂ ವರುಣನ ಆರ್ಭಟ ಮುಂದುವರಿದಿದ್ದು, ಮಳೆ ಸಂಬಂಧಿ ಅನಾಹುತಕ್ಕೆ ಒಟ್ಟು ಎಂಟು ಮಂದಿ ಬಲಿಯಾಗಿದ್ದಾರೆ. ಬಳ್ಳಾರಿ, ಕೊಪ್ಪಳದಲ್ಲಿ ತಲಾ ಇಬ್ಬರು ಹಾಗೂ ಹಾವೇರಿ, ರಾಯಚೂರು, ತುಮಕೂರು ಜಿಲ್ಲೆಯಲ್ಲಿ ತಲಾ ಒಬ್ಬರು ಸೇರಿ ಸಿಡಿಲಬ್ಬರಕ್ಕೆ ಏಳು ಮಂದಿ ಬಲಿಯಾಗಿದ್ದಾರೆ. ಇನ್ನು ಕೋಲಾರ ಜಿಲ್ಲೆಯಲ್ಲಿ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಹೊಸಹಳ್ಳಿ ಗ್ರಾಮದ ಶಿವಬಸಪ್ಪ ಕುರುಬರ(32), ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಗುತ್ತೂರು ಗ್ರಾಮದ ವಿರುಪಾಕ್ಷಪ್ಪ ಮಾಸರ(25) ಕರಿಯಮ್ಮ(18), ರಾಯಚೂರು ಜಿಲ್ಲೆಯ ರಮಾ ಕ್ಯಾಂಪಿನ ಶರಣಮ್ಮ ದಾನಗೌಡರ್(28), ಬಳ್ಳಾರಿ ಜಿಲ್ಲೆ ಹೊಸಪೇಟೆ ತಾಲೂಕಿನ ಧರ್ಮಸಾಗರದ ಮಂಜಮ್ಮ(35), ಸಂಡೂರು ತಾಲೂಕಿನ ಕುರೇಕೊಪ್ಪ ಗ್ರಾಮದ ಸೋಮಶೇಖರ್(25) ಹಾಗೂ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಮರಡಿಪಾಳ್ಯದ ರಾಮಕೃಷ್ಣಪ್ಪ(45) ಸಿಡಿಲಿನಿಂದ ಮೃತಪಟ್ಟಿದ್ದಾರೆ. ಇದೇ ವೇಳೆ ಸಿಡಿಲಿಗೆ ಇಬ್ಬರು ಗಾಯಗೊಂಡಿದ್ದು, 15ಕ್ಕೂ ಹೆಚ್ಚು ಕುರಿ, ಜಾನುವಾರುಗಳು ಮೃತಪಟ್ಟಿವೆ.
ವಿದ್ಯುತ್ ಸ್ಪರ್ಶ: ಕೋಲಾರ ಜಿಲ್ಲೆ ಕೆಜಿಎಫ್ನಲ್ಲಿ ಮಂಗಳವಾರ ರಾತ್ರಿ ಸುರಿದ ಗಾಳಿ, ಮಳೆಗೆ ಅಂಗಡಿಯೊಂದರ ಮುಂದೆ ವಿದ್ಯುತ್ ತಂತಿ ಕಡಿದು ಬಿದ್ದಿತ್ತು. ಇದು ತಿಳಿಯದೆ ಅಂಗಡಿಯ ಶೆಟರ್ ಎಳೆಯಲು ಹೋದ ಕೃಷ್ಣಾರೆಡ್ಡಿ(65) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕೊಪ್ಪಳ ಜಿಲ್ಲೆ ಗಂಗಾವತಿ ಹಾಗೂ ಹೊಸಪೇಟೆಯಲ್ಲಿ ಮಂಗಳವಾರ ರಾತ್ರಿಯಿಂದಿಚೆಗೆ ಭಾರೀ ಗಾಳಿ ಸಹಿತ ಉತ್ತಮ ಮಳೆಯಾಗಿದೆ. ಭಾರೀ ಗಾಳಿಗೆ ಈ ಭಾಗದಲ್ಲಿ ನೂರಾರು ಎಕರೆ ಪ್ರದೇಶದಲ್ಲಿ ಬೆಳೆದು ನಿಂತಿದ್ದ ಬಾಳೆ ಸೇರಿ ಮತ್ತಿತರ ಬೆಳೆಗಳು ನಾಶವಾಗಿವೆ. ಜೊತೆಗೆ ಹತ್ತಾರು ವಿದ್ಯುತ್ ಕಂಬ ಹಾಗೂ ಮರಗಳು ಧರೆಗುರುಳಿವೆ.
ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ 20 ನಿಮಿಷಗಳ ಕಾಲ ಆಲಿಕಲ್ಲು ಮಳೆ ಸುರಿದರೆ, ಹುಬ್ಬಳ್ಳಿ- ಧಾರವಾಡ, ಹಾವೇರಿಗಳಲ್ಲಿ ಕೆಲ ನಿಮಿಷಗಳ ಕಾಲ ಮಳೆಯಾಗಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣದಲ್ಲಿ ಅರ್ಧ ಗಂಟೆಗಳ ಕಾಲ ಸುರಿದ ಮಳೆಯಿಂದಾಗಿ ಹಲವು ಮನೆಗಳಿಗೆ ನೀರು ನುಗ್ಗಿದೆ. ಜೊತೆಗೆ ಹಲವು ವಿದ್ಯುತ್ ತಂತಿಗಳು ಕಡಿದು ಬಿದ್ದು ವಿದ್ಯುತ್ ವ್ಯತ್ಯಯವಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಹಾಗೂ ದಾವಣಗೆರೆಯಲ್ಲೂ ಸಂಜೆ ಧಾರಾಕಾರ ಮಳೆ ಸುರಿದಿದೆ. ಬೆಳಗಾವಿಯಲ್ಲಿ ಸಾಧಾರಣ ಮಳೆ ಸುರಿದಿದೆ.