ಆಗಸ್ಟ್ 2ಕ್ಕೆ ಬಂದ್
ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಚೊಚ್ಚಲ ಬಜೆಟ್ನಲ್ಲಿ ಉತ್ತರ ಕರ್ನಾಟಕವನ್ನು ನಿರ್ಲಕ್ಷಿಸಲಾಗಿದೆ ಎಂದು ಆರೋಪ ಕೇಳಿ ಬಂದ ಬೆನ್ನಲ್ಲೇ ಇದೀಗ ಆಗಸ್ಟ್ 2 ರಂದು ಉತ್ತರ ಕರ್ನಾಟಕ ಬಂದ್ ಮಾಡಲು ನಿರ್ಧರಿಸಲಾಗಿದೆ.
ಹುಬ್ಬಳ್ಳಿ : ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಚೊಚ್ಚಲ ಬಜೆಟ್ನಲ್ಲಿ ಉತ್ತರ ಕರ್ನಾಟಕವನ್ನು ನಿರ್ಲಕ್ಷಿಸಲಾಗಿದೆ ಎಂದು ಆರೋಪ ಕೇಳಿ ಬಂದ ಬೆನ್ನಲ್ಲೇ ಈಗ ಉತ್ತರ ಕರ್ನಾಟಕದಲ್ಲಿ ಮತ್ತೆ ಪ್ರತ್ಯೇಕ ರಾಜ್ಯದ ಕೂಗು ಕೇಳಿ ಬಂದಿದೆ. ಈ ಸಂಬಂಧ ಆಗಸ್ಟ್ 2ರಂದು ಉತ್ತರ ಕರ್ನಾಟಕ ಬಂದ್ಗೆ ಉತ್ತರ ಕರ್ನಾಟಕ ರೈತ ಸಂಘ ಕರೆ ನೀಡಿದೆ.
ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಂಘದ ಅಧ್ಯಕ್ಷ ಬಸವರಾಜ ಕರಿಗಾರ, ರಾಜ್ಯ ಸರ್ಕಾರಗಳು ಪದೇ ಪದೆ ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿವೆ. ಕರ್ನಾಟಕ ಎಂದರೆ ಬರೀ ದಕ್ಷಿಣ ಕರ್ನಾಟಕ ಎಂಬಂತೆ ಭಾವಿಸಿದಂತಾಗಿದೆ. ಈ ಭಾಗದ ಅಭಿವೃದ್ಧಿ ಪ್ರತ್ಯೇಕ ರಾಜ್ಯವಾದರೆ ಮಾತ್ರ ಸಾಧ್ಯ. ಆದ ಕಾರಣ ಪ್ರತ್ಯೇಕ ರಾಜ್ಯಕ್ಕೆ ಮತ್ತೆ ಹೋರಾಟ ಆರಂಭಿಸಲಾಗುವುದು ಎಂದು ತಿಳಿಸಿದರು.
ಪ್ರತ್ಯೇಕ ರಾಜ್ಯವೇ ನಮ್ಮ ಪ್ರಮುಖ ಬೇಡಿಕೆಯಾಗಿದ್ದು, ಈ ಸಂಬಂಧ ಆ.2ರಂದು ಉತ್ತರ ಕರ್ನಾಟಕದ 13 ಜಿಲ್ಲೆಗಳನ್ನು ಬಂದ್ ಮಾಡಿ ಪ್ರತಿಭಟಿಸಲಾಗುವುದು ಎಂದರು.
ಮುಖ್ಯಮಂತ್ರಿ ಕುಮಾರಸ್ವಾಮಿ ಮಂಡಿಸಿರುವ ಬಜೆಟ್ ಬರೀ ಹಳೇ ಮೈಸೂರು ಭಾಗಕ್ಕೆ ಸೀಮಿತವಾಗಿದೆ. ಉತ್ತರ ಕರ್ನಾಟಕ ಅಭಿವೃದ್ಧಿಗೆ ಯಾವುದೇ ಪ್ರಮುಖ ಯೋಜನೆಗಳನ್ನು ಬಿಡುಗಡೆ ಮಾಡಿಲ್ಲ. ಮೂರು ವರ್ಷಗಳಿಂದ ಮಹದಾಯಿಗಾಗಿ ಹೋರಾಟ ಮಾಡುತ್ತಿದ್ದೇವೆ. ಸರಿಯಾಗಿ ಸ್ಪಂದಿಸುತ್ತಿಲ್ಲ. ಆದರೆ ಕಾವೇರಿ ವಿಷಯ ಬಂದಾಗ ಕೂಡಲೇ ಸರ್ವ ಪಕ್ಷದ ಸಭೆ ಕರೆದು ಸಮಸ್ಯೆಗೆ ಸ್ಪಂದಿಸಲಾಗುತ್ತಿದೆ. ನಾವೇನು ಮಲತಾಯಿ ಮಕ್ಕಳಾ ಎಂದು ಪ್ರಶ್ನಿಸಿದರು.