ಕೊನೆಗೂ ಸಂಪುಟ ವಿಸ್ತರಣೆ, ನಿಗಮ ಮಂಡಳಿಗೆ ಸಿಕ್ತು ಗ್ರೀನ್ ಸಿಗ್ನಲ್
ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆಗೆ ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. ಯಾವಾಗ? ಏನು? ಎನ್ನುವ ವಿವರ ಇಲ್ಲಿದೆ.
ಬೆಂಗಳೂರು, [ಅ. 14]: ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆಗೆ ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ.
ನಿಗಮ ಮಂಡಳಿ ನೇಮಕಾತಿ ಹಾಗೂ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆಯನ್ನು ಉಪ ಚುನಾವಣೆ ನಂತರ ನಡೆಸುವಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಎಚ್ಎಎಲ್ ನಿವೃತ್ತ ಉದ್ಯೋಗಿಗಳೊಂದಿಗೆ ಸಂವಾದ ನಡೆಸಲು ಶನಿವಾರ ನಗರಕ್ಕೆ ಆಗಮಿಸಿದ್ದ ರಾಹುಲ್ ಗಾಂಧಿ ಅವರನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕುಮಾರಕೃಪ ಅತಿಥಿ ಗೃಹದಲ್ಲಿ ಭೇಟಿ ಮಾಡಿದರು.
ಈ ವೇಳೆ ನಿಗಮ -ಮಂಡಳಿ ಹಾಗೂ ಸಂಪುಟ ವಿಸ್ತರಣೆ ವಿಚಾರವನ್ನು ಅವರು ರಾಹುಲ್ ಗಾಂಧಿ ಬಳಿ ಪ್ರಸ್ತಾಪಿಸಿದರು ಎನ್ನಲಾಗಿದೆ. ಇದಕ್ಕೆ ರಾಹುಲ್ ಗಾಂಧಿ ಅವರು ಉಪ ಚುನಾವಣೆ ಮುಗಿಯುತ್ತಿದ್ದಂತೆಯೇ ಈ ಪ್ರಕ್ರಿಯೆಯನ್ನು ಕೈಗೊಳ್ಳಿ ಎಂದು ಸೂಚಿಸಿದರು ಎನ್ನಲಾಗಿದೆ.
ಇದೇ ವೇಳೆ ಉಪ ಚುನಾವಣೆಯಲ್ಲಿ ಮೈತ್ರಿ ಸಫಲವಾಗಬೇಕು ಹಾಗೂ ಎಲ್ಲಾ ಮೂರು ಲೋಕಸಭಾ ಕ್ಷೇತ್ರಗಳ ಉಪ ಚುನಾವಣೆಯನ್ನು ಈ ಮೈತ್ರಿಕೂಟ ಗೆಲ್ಲಬೇಕು. ಏಕೆಂದರೆ, ಈ ಉಪ ಚುನಾವಣೆ ಮುಂದಿನ ಲೋಕಸಭೆ ಚುನಾವಣೆಯನ್ನು ಪ್ರಭಾವಿಸಲಿದೆ.
ಹೀಗಾಗಿ ಏನೇ ಭಿನ್ನಾಭಿಪ್ರಾಯಗಳು ಇದ್ದರೂ ಅದನ್ನು ಲಕ್ಷಿಸದೆ ಉಪ ಚುನಾವಣೆ ಗೆಲುವಿಗೆ ಮೈತ್ರಿಕೂಟದ ನಾಯಕರು ಶ್ರಮಿಸಬೇಕು ಎಂದು ರಾಹುಲ್ ಹೇಳಿದರು ಎಂದು ಮೂಲಗಳು ತಿಳಿಸಿವೆ.