ಮಾ.31 ರವರೆಗೂ ಅಕ್ರಮ-ಸಕ್ರಮ, ಬಗರ್ಹುಕುಂ ಅರ್ಜಿ
ರಾಜ್ಯದ ಗ್ರಾಮಾಂತರ ಮತ್ತು ನಗರ ಪ್ರದೇಶದ ಸರ್ಕಾರಿ ಜಮೀನುಗಳಲ್ಲಿ ಅಕ್ರಮವಾಗಿ ನಿರ್ಮಿಸಿರುವ ವಾಸದ ಮನೆಗಳನ್ನು ಸಕ್ರಮಗೊಳಿಸಿಕೊಳ್ಳಲು ಹಾಗೂ ಬಗರ್ಹುಕುಂ ಯೋಜನೆ ಅಡಿ ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ಜಮೀನುಗಳನ್ನು ಸಕ್ರಮಗೊಳಿಸಿಕೊಳ್ಳಲು ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.
ಬೆಂಗಳೂರು (ಫೆ.21): ರಾಜ್ಯದ ಗ್ರಾಮಾಂತರ ಮತ್ತು ನಗರ ಪ್ರದೇಶದ ಸರ್ಕಾರಿ ಜಮೀನುಗಳಲ್ಲಿ ಅಕ್ರಮವಾಗಿ ನಿರ್ಮಿಸಿರುವ ವಾಸದ ಮನೆಗಳನ್ನು ಸಕ್ರಮಗೊಳಿಸಿಕೊಳ್ಳಲು ಹಾಗೂ ಬಗರ್ಹುಕುಂ ಯೋಜನೆ ಅಡಿ ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ಜಮೀನುಗಳನ್ನು ಸಕ್ರಮಗೊಳಿಸಿಕೊಳ್ಳಲು ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.
ಬುಧವಾರ ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕಂದಾಯ ಸಚಿವ ಆರ್.ವಿ. ದೇಶಪಾಂಡೆ, ಅಕ್ರಮ ವಾಸದ ಮನೆಗಳನ್ನು (94 ಸಿ, 94ಸಿಸಿ ಅಡಿ) ಸಕ್ರಮಗೊಳಿಸಲು ಅರ್ಜಿ ಸಲ್ಲಿಸುವ ಅವಧಿ 2018 ಸೆಪ್ಟೆಂಬರ್ 16ಕ್ಕೆ ಕೊನೆಗೊಂಡಿತ್ತು.
ಸದರಿ ಅವಧಿಯನ್ನು ವಿಸ್ತರಿಸುವಂತೆ ಸಾರ್ವಜನಿಕರು, ಜನಪ್ರತಿನಿಧಿಗಳಿಂದ ಮನವಿಗಳು ಬಂದ ಹಿನ್ನೆಲೆಯಲ್ಲಿ ನಿಯಮಗಳಿಗೆ ತಿದ್ದುಪಡಿ ತಂದು 31.3.2019ರವರೆಗೆ ವಿಸ್ತರಿಸಲಾಗಿದೆ. ಈ ಹಿಂದೆ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇದ್ದವರು ನಿಗದಿತ ಅವಧಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದರು.
ಅದೇ ರೀತಿ ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವವರ ಜಮೀನುಗಳನ್ನು ಸಕ್ರಮಗೊಳಿಸಲು ಅರ್ಜಿ ಸಲ್ಲಿಸುವ ಅವಧಿಯನ್ನು 16.3.2019ರವರೆಗೆ ವಿಸ್ತರಿಸಲಾಗಿದೆ. ನಮೂನೆ 53ರಲ್ಲಿ ಅರ್ಜಿ ಸಲ್ಲಿಸಲು ಈ ಹಿಂದೆ 30.4.1999ರವರೆಗೆ ಅವಕಾಶ ಕಲ್ಪಿಸಲಾಗಿತ್ತು. ಅಲ್ಲದೇ ಅನಧಿಕೃತ ಸಾಗುವಳಿಗೆ ಇದ್ದ ಕಾಲಮಿತಿ 14.4.1990 ಆಗಿತ್ತು. ಈ ಅವಧಿಯಲ್ಲಿ ನಮೂನೆ 50 ಮತ್ತು 53 ಅರ್ಜಿಗಳನ್ನು ಸಲ್ಲಿಸದೇ ಇರುವಂತಹವರು 1.1.2005ಕ್ಕಿಂತ ಮುನ್ನ ಕನಿಷ್ಠ ಮೂರು ವರ್ಷಗಳ ಅನಧಿಕೃತ ಸಾಗುವಳಿಯಲ್ಲಿದ್ದರೆ ನಮೂನೆ 57ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಇಂತಹ ಅರ್ಜಿಗಳನ್ನು ಬರುವ ಮಾಚ್ರ್ 16ರೊಳಗೆ ಸಲ್ಲಿಸಬೇಕಾಗುತ್ತದೆ ಎಂದು ಸಚಿವರು ತಿಳಿಸಿದರು.
ಅರ್ಜಿ ವಿಲೇವಾರಿಗೆ ದಿನಾಂಕ ವಿಸ್ತರಣೆ:
ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿ ಮಾಡುತ್ತಿರುವ ಅಧಿಭೋಗದಾರರ ಹಕ್ಕನ್ನು ಕಾಯಂಗೊಳಿಸುವ ಸಂಬಂಧ ಅರ್ಜಿದಾರರಿಂದ ನಮೂನೆ 50 ಹಾಗೂ 53 ಅಡಿ ಸಲ್ಲಿಸಿರುವ ಅರ್ಜಿಗಳನ್ನು 26.4.2020ರೊಳಗೆ ವಿಲೇವಾರಿ ಮಾಡುವಂತೆ ಸಂಬಂಧಪಟ್ಟಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಸಚಿವ ದೇಶಪಾಂಡೆ ಇದೇ ಸಂದರ್ಭದಲ್ಲಿ ತಿಳಿಸಿದರು.