ಕೊನೆಗೂ ರಾಜ್ಯ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್
ಕೊನೆಗೂ ರಾಜ್ಯ ಕಾಂಗ್ರೆಸ್ ನಾಯಕರು ಹಾಗೂ ಸಚಿವ ಸಂಪುಟ ವಿಸ್ತರಣೆ ಮಾಡಲು ಮುಂದಾಗಿದ್ದಾರೆ. ಈ ಬಗ್ಗೆ ಸ್ವತಃ ಸಿಎಂ ಕುಮಾರಸ್ವಾಮಿ ಅವರೇ ಸಂಪುಟ ವಿಸ್ತರಣೆ ದಿನಾಂಕವನ್ನು ಪ್ರಕಟಿಸಿದ್ದಾರೆ.
ಬೆಂಗಳೂರು, (ಅ.1): ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ವಿಧಾನ ಪರಿಷತ್ ಚುನಾವಣೆ ಬೆನ್ನಲ್ಲೇ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ.
ಈ ಬಗ್ಗೆ ಸ್ವತಃ ಸಿಎಂ ಕುಮಾರಸ್ವಾಮಿ ಅವರೇ ಸಂಪುಟ ವಿಸ್ತರಣೆ ದಿನಾಂಕವನ್ನು ಪ್ರಕಟಿಸಿದ್ದಾರೆ. ಅಕ್ಟೋಬರ್ 12ರೊಳಗೆ ಕಾಂಗ್ರೆಸ್ - ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸೋಮವಾರ ಹೇಳಿದ್ದಾರೆ.
ಖಾಲಿ ಇರುವ ಏಳು ಸಚಿವ ಸ್ಥಾನಗಳನ್ನು ಅಕ್ಟೋಬರ್ 12ರೊಳಗೆ ಭರ್ತಿ ಮಾಡಲಾಗುವುದು. ಸಂಪುಟ ವಿಸ್ತರಣೆ ಕುರಿತು ಎಲ್ಲಾ ತಯಾರಿಗಳು ಹಾಗೂ ವಿವಿಧ ಹಂತದ ಚರ್ಚೆಗಳು ನಡೆಯುತ್ತಿವೆ ಎಂದರು.
"
ಖಾಲಿ ಇರುವ ಕಾಂಗ್ರೆಸ್ ನ ಆರು ಹಾಗೂ ಜೆಡಿಎಸ್ ಪಾಲಿನ ಒಂದು ಸಚಿವ ಸ್ಥಾನ ಸೇರಿದಂತೆ ಒಟ್ಟು ಏಳು ಸ್ಥಾನಗಳನ್ನು ಭರ್ತಿ ಮಾಡಲು ತೀರ್ಮಾನಿಸಲಾಗಿದ್ದು, ಈಗಾಗಲೇ ಹೈಕಮಾಂಡ್ ನಾಯಕರ ಜತೆ ಕಾಂಗ್ರೆಸ್ ಮುಖಂಡರು ಹಾಗೂ ನಾವು ಕೂಡ ಮಾತುಕತೆ ನಡೆಸಿದ್ದೇವೆ ಎಂದು ಸಿಎಂ ತಿಳಿಸಿದ್ದಾರೆ.
ಮತ್ತೊಂದೆಡೆ ಕಾಂಗ್ರೆಸ್ ನಲ್ಲಿ ಸಚಿವ ಸ್ಥಾನಕ್ಕೆ ತೀವ್ರ ಲಾಭಿ ನಡೆಯುತ್ತಿದೆ. ಹಾಗಾಗಿ ಯಾರಿಗೆ ಚಾನ್ಸ್ ನೀಡಬೇಕು ಎನ್ನುವುದು ಕಾಂಗ್ರೆಸ್ ನಾಯಕರಿಗೆ ದೊಡ್ಡ ತಲೆನೋವಾಗಿದೆ.