ರಾಜ್ಯ ಸರ್ಕಾರ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ-ಯುಕೆಜಿ ತರಗತಿ ಪ್ರಾರಂಭಿಸುವ ಆದೇಶ ರದ್ದುಗೊಳಿಸಿ ಅಂಗನವಾಡಿಗಳಲ್ಲೇ ಎಲ್‌ಕೆಜಿ-ಯುಕೆಜಿ ತರಗತಿ ಪ್ರಾರಂಭಿಸಲು ಆದೇಶಿಸಬೇಕು ಎಂದು ರಾಜ್ಯ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಎಸ್‌.ವರಲಕ್ಷ್ಮಿ ಒತ್ತಾಯಿಸಿದ್ದಾರೆ.

ಬೆಂಗಳೂರು (ಮೇ. 21): ರಾಜ್ಯ ಸರ್ಕಾರ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ-ಯುಕೆಜಿ ತರಗತಿ ಪ್ರಾರಂಭಿಸುವ ಆದೇಶ ರದ್ದುಗೊಳಿಸಿ ಅಂಗನವಾಡಿಗಳಲ್ಲೇ ಎಲ್‌ಕೆಜಿ-ಯುಕೆಜಿ ತರಗತಿ ಪ್ರಾರಂಭಿಸಲು ಆದೇಶಿಸಬೇಕು ಎಂದು ರಾಜ್ಯ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಎಸ್‌.ವರಲಕ್ಷ್ಮಿ ಒತ್ತಾಯಿಸಿದ್ದಾರೆ.

Add Asianetnews Kannada as a Preferred SourcegooglePreferred

ರಾಜ್ಯ ಸರ್ಕಾರ ಹೊರಡಿಸಿರುವ ಅದೇಶ ಅವೈಜ್ಞಾನಿಕವಾಗಿದ್ದು, ಅಂಗನವಾಡಿ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ. ಒಂದು ಇಲಾಖೆಯನ್ನು ಬಲಪಡಿಸಲು ಮತ್ತೊಂದು ಇಲಾಖೆಯ ಯೋಜನೆಯನ್ನು ದುರ್ಬಲಗೊಳಿಸಿದಂತಾಗುತ್ತದೆ.

ಒಂದು ವೇಳೆ ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ-ಯುಕೆಜಿ ತರಗತಿ ಪ್ರಾರಂಭಿಸಿದರೆ ಕಾಲಕ್ರಮೇಣ ಅಂಗನವಾಡಿಗಳು ಮುಚ್ಚುವುದು ನಿಶ್ಚಿತ. ಹಾಗಾಗಿ ಸರ್ಕಾರ ಕೂಡಲೇ ಈ ಆದೇಶ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ 65911 ಅಂಗನವಾಡಿ ಕೇಂದ್ರಗಳಿವೆ. ಈ ಪೈಕಿ 3331 ಮಿನಿ ಅಂಗನವಾಡಿಗಳಿವೆ. ಪ್ರಸ್ತುತ ರಾಜ್ಯದಲ್ಲಿ 3ರಿಂದ 6 ವರ್ಷದೊಳಗಿನ 16 ಲಕ್ಷ ಮಕ್ಕಳು ಅಂಗನವಾಡಿಗಳಿಗೆ ಬರುತ್ತಿದ್ದಾರೆ. ಸರ್ಕಾರದ ಆದೇಶದಂತೆ ಪ್ರಾಥಮಿಕ ಶಾಲೆಗಳ ಎಲ್‌ಕೆಜಿ-ಯುಕೆಜಿ ತರಗತಿಗಳಿಗೆ ದಾಖಲಾದರೆ ಅಂಗನವಾಡಿಗಳ ಅಸ್ತಿತ್ವಕ್ಕೆ ಧಕ್ಕೆ ಬರುತ್ತದೆ.

ಅಲ್ಲದೆ, ಮಕ್ಕಳ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗಳ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಹಾಗಾಗಿ ಅಂಗನವಾಡಿ ಕೇಂದ್ರಗಳನ್ನೇ ಶಿಶುಪಾಲನಾ ಕೇಂದ್ರಗಳಾಗಿ ಪರಿವರ್ತಿಸಿ, ಎಲ್‌ಕೆಜಿ-ಯುಕೆಜಿ ಪ್ರಾರಂಭಿಸಬೇಕು. ಅಂಗನವಾಡಿ ಕಾರ್ಯಕರ್ತೆಯರಿಗೆ ಸೂಕ್ತ ವೇತನ ಹಾಗೂ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿದರು.