ದೇವರಾಜ ಅರಸು ಅವರು ಹಾಕಿಕೊಟ್ಟಿರುವ ದಾರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಯುತ್ತಿದ್ದಾರೆ. ಸಿದ್ದರಾಮಯ್ಯ ಅವರು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ನಡೆಸುವ ಮೂಲಕ ಉತ್ತಮ ಮುಖ್ಯಮಂತ್ರಿಯಾಗಿ ಗುರುತಿಸಿಕೊಂಡಿದ್ದಾರೆ.

ಹೊಸಪೇಟೆ(ಜ.31): ಐದು ವರ್ಷಗಳ ಅಧಿಕಾರಾವಧಿಯಲ್ಲಿ ಹಲವು ಭಾಗ್ಯಗಳನ್ನು ಕರುಣಿಸಿರುವ ಕಾಂಗ್ರೆಸ್ ಮತ್ತೆ ಅಧಿಕಾರ ಸಿಕ್ಕರೆ ಇನ್ನೊಂದು ಭಾಗ್ಯ ನೀಡುವುದಾಗಿ ಚುನಾವಣೆಗೂ ಮುನ್ನವೇ ಘೋಷಣೆ ಮಾಡಿದೆ.

Add Asianetnews Kannada as a Preferred SourcegooglePreferred

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ, ಬಿಪಿಎಲ್ ಪಡಿತರ ಕಾರ್ಡು ಹೊಂದಿದವರಿಗೆ ಮುಂದಿನ ದಿನಗಳಲ್ಲಿ ಸರ್ಕಾರದಿಂದ ಕಂಬಳಿ ವಿತರಿಸುವ ಚಿಂತನೆ ಇದೆ ಎಂದು ಸಾರಿಗೆ ಸಚಿವ ಎಚ್.ಎಂ. ರೇವಣ್ಣ ತಿಳಿಸಿದ್ದಾರೆ.

ಬಳ್ಳಾರಿ ಜಿಲ್ಲೆ ಹೊಸಪೇಟೆ ತಾಲೂಕಿನ ಹಂಪಿ ಕನ್ನಡ ವಿಶ್ವವಿದ್ಯಾಲಯದ ಮಂಟಪ ಸಭಾಂಗಣದಲ್ಲಿ ಮಂಗಳವಾರ ನಡೆದ ಹಾಲುಮತ ಅಧ್ಯಯನ ಪೀಠದ ದಶಮಾನೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ದೇವರಾಜ ಅರಸು ಅವರು ಹಾಕಿಕೊಟ್ಟಿರುವ ದಾರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಯುತ್ತಿದ್ದಾರೆ. ಸಿದ್ದರಾಮಯ್ಯ ಅವರು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ನಡೆಸುವ ಮೂಲಕ ಉತ್ತಮ ಮುಖ್ಯಮಂತ್ರಿಯಾಗಿ ಗುರುತಿಸಿಕೊಂಡಿದ್ದಾರೆ. ಮುಂದೆಯೂ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತದೆ.

ಅಧಿಕಾರಕ್ಕೆ ಬಂದರೆ ಬಿಪಿಎಲ್ ಪಡಿತರ ಕಾರ್ಡ್ ಹೊಂದಿದವರಿಗೆ ಕಂಬಳಿಯನ್ನು ನೀಡುವ ಚಿಂತನೆ ನಮ್ಮ ಸರ್ಕಾರದ ಮುಂದಿದೆ ಎಂದು ಹೇಳಿದರು. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಅನ್ನಭಾಗ್ಯ, ಕ್ಷೀರ ಭಾಗ್ಯ, ಸಾಲ ಮನ್ನಾ ಭಾಗ್ಯ, ಲ್ಯಾಪ್‌ಟಾಪ್ ಭಾಗ್ಯ , ಶಾದಿ ಭಾಗ್ಯದಂತಹ ಹಲವಾರು ಯೋಜನೆಗಳು ಜಾರಿಗೆ ಬಂದಿವೆ.