ಹಿರಿಯ ಪತ್ರಕರ್ತೆ ಗೌರಿ ಲಂಕೇಶ್‌ ಮತ್ತು ಎಂ.ಎಂ. ಕಲ್ಬುರ್ಗಿ ಹತ್ಯೆ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದು, ಶೀಘ್ರದಲ್ಲೇ ಎಲ್ಲಾ ಆರೋಪಿಗಳ ಬಂಧನವಾಗಲಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಗೃಹಸಚಿವ ಡಾ. ಜಿ.ಪರಮೇಶ್ವರ್‌ ಹೇಳಿದ್ದಾರೆ.

ಬೆಂಗಳೂರು : ಹಿರಿಯ ಪತ್ರಕರ್ತೆ ಗೌರಿ ಲಂಕೇಶ್‌ ಮತ್ತು ಎಂ.ಎಂ. ಕಲ್ಬುರ್ಗಿ ಹತ್ಯೆ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದು, ಶೀಘ್ರದಲ್ಲೇ ಎಲ್ಲಾ ಆರೋಪಿಗಳ ಬಂಧನವಾಗಲಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಗೃಹಸಚಿವ ಡಾ. ಜಿ.ಪರಮೇಶ್ವರ್‌ ಹೇಳಿದ್ದಾರೆ. ಗೃಹ ಇಲಾಖೆ ವಹಿಸಿಕೊಂಡ ನಂತರ ವಿಧಾನಸೌಧದಲ್ಲಿ ಶನಿವಾರ ಹಿರಿಯ ಪೊಲೀಸ್‌ ಅಧಿಕಾರಿಗಳೊಂದಿಗೆ ಮೊದಲ ಸಭೆ ನಡೆಸಿದ ಅವರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

Add Asianetnews Kannada as a Preferred SourcegooglePreferred

ರಾಜ್ಯವನ್ನು ಬೆಚ್ಚಿ ಬೀಳಿಸಿದಂತಹ ಗೌರಿ ಲಂಕೇಶ್‌, ಎಂ.ಎಂ.ಕಲ್ಬುರ್ಗಿ ಹತ್ಯೆ ತನಿಖೆಯ ವಿವರ ಪಡೆದಿದ್ದೇನೆ. ಶಂಕಿತರನ್ನು ಬಂಧಿಸಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ಕೆಲವೊಂದು ವಿವರವನ್ನು ಅಧಿಕಾರಿಗಳು ನೀಡಿದ್ದಾರೆ. ಹೆಚ್ಚಿನ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ಒದಗಿಸುವುದಾಗಿ ಪೊಲೀಸರು ಹೇಳಿದ್ದಾರೆ. ಎರಡು ಪ್ರಕರಣಗಳನ್ನೂ ಶೀಘ್ರವಾಗಿ ಭೇದಿಸಬೇಕು. ಪ್ರಕರಣವನ್ನು ಸವಾಲಾಗಿ ಪರಿಣಮಿಸಿ ಕೆಲಸ ಮಾಡಿ. ಈ ವಿಷಯದಲ್ಲಿ ಅಧಿಕಾರಿಗಳಿಗೆ ಬೇಕಾದಂತಹ ಎಲ್ಲಾ ಸಹಕಾರವನ್ನೂ ನೀಡುತ್ತೇವೆ. ಹಂತಕರನ್ನು ಶೀಘ್ರವಾಗಿ ಬಂಧಿಸಿ ಎಂದು ಸೂಚನೆ ನೀಡಿದ್ದೇನೆ ಎಂದು ಮಾಹಿತಿ ನೀಡಿದರು.

ಕಾನೂನು- ಸುವ್ಯವಸ್ಥೆ ಸವಾಲು ಗೆಲ್ಲಿ: ಇದಕ್ಕೂ ಮೊದಲು ಸಭೆಯಲ್ಲಿ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರದ ಕಾರ್ಯವೈಖರಿಯನ್ನು ಇಡೀ ದೇಶ ಗಮನಿಸುತ್ತಿದೆ. ರಾಜಕೀಯ ಹಾಗೂ ಸಾಮಾಜಿಕ ಕಾರಣಗಳಿಗೆ ಸರ್ಕಾರಕ್ಕೆ ಕೆಟ್ಟಹೆಸರು ತರಲು ಸಮಾಜಘಾತುಕ ಶಕ್ತಿಗಳು ಪ್ರಯತ್ನಿಸಬಹುದು. ಅಂತಹ ಪಟ್ಟಭದ್ರ ಶಕ್ತಿಗಳು ಉಂಟುಮಾಡಬಹುದಾದ ಕೋಮುಗಲಭೆ, ಕಾನೂನು ಸುವ್ಯವಸ್ಥೆ ಕದಡುವ ಪ್ರಯತ್ನಗಳನ್ನು ಸಮರ್ಥವಾಗಿ ಎದುರಿಸಬೇಕಾಗಿದೆ. ಸಮ್ಮಿಶ್ರ ಸರ್ಕಾರದಲ್ಲಿ ಗೃಹ ಇಲಾಖೆಯಂತಹ ಪ್ರಮುಖ ಜವಾಬ್ದಾರಿ ತೆಗೆದುಕೊಂಡಿದ್ದೇನೆ. 18 ತಿಂಗಳ ಕಾಲ ನಾನು ಗೃಹ ಸಚಿವನಾಗಿದ್ದಾಗ ನೀವು ಸಮರ್ಥವಾಗಿ ಕಾರ್ಯನಿರ್ವಹಿಸಿದ್ದೀರಿ. ಈಗಲೂ ಕಾನೂನು ಸುವ್ಯವಸ್ಥೆ ಕಾಪಾಡುವುದನ್ನು ಸವಾಲಾಗಿ ಸ್ವೀಕರಿಸಿ ಕೆಲಸ ಮಾಡಬೇಕಿದೆ ಎಂದು ಕರೆ ನೀಡಿದರು.