ಪಕ್ಷದ ಹಿರಿಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಬೀದರ್‌ ದಕ್ಷಿಣ ಕ್ಷೇತ್ರದ ಶಾಸಕ ಹಾಗೂ ನೈಸ್‌ ಕಂಪನಿ ಮಾಲೀಕ ಅಶೋಕ್‌ ಖೇಣಿ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಟಿಕೆಟ್‌ ಭರವಸೆ ನೀಡಿರುವ ಬಗ್ಗೆ ಲೋಕಸಭೆ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು :ಪಕ್ಷದ ಹಿರಿಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಬೀದರ್‌ ದಕ್ಷಿಣ ಕ್ಷೇತ್ರದ ಶಾಸಕ ಹಾಗೂ ನೈಸ್‌ ಕಂಪನಿ ಮಾಲೀಕ ಅಶೋಕ್‌ ಖೇಣಿ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಟಿಕೆಟ್‌ ಭರವಸೆ ನೀಡಿರುವ ಬಗ್ಗೆ ಲೋಕಸಭೆ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸೋಮವಾರ ನಡೆದ ಚುನಾವಣಾ ಸಮಿತಿ ಸಭೆಯಲ್ಲಿ ಕರ್ನಾಟಕ ಮಕ್ಕಳ ಪಕ್ಷದ ಶಾಸಕ ಅಶೋಕ್‌ ಖೇಣಿಗೆ ಟಿಕೆಟ್‌ ನೀಡಬಾರದು. ಪಕ್ಷಕ್ಕೆ ಸೇರ್ಪಡೆಯಾದ ಕೂಡಲೇ ಟಿಕೆಟ್‌ ನೀಡಬೇಕು ಎಂಬ ನಿಯಮವಿಲ್ಲ. ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಒಪ್ಪಿಗೆ ನೀಡಿರುವುದು ಪಕ್ಷ ಸೇರ್ಪಡೆಗೇ ಹೊರತು ಟಿಕೆಟ್‌ ನೀಡಲು ಅಲ್ಲ. ಹೀಗಾಗಿ ಈ ಅವಧಿಗೆ ಟಿಕೆಟ್‌ ನೀಡಬಾರದು ಎಂದು ಅಸಮಾಧಾನ ವ್ಯಕ್ತಪಡಿಸಿದರು ಎಂದು ತಿಳಿದು ಬಂದಿದೆ.

ಈ ಹಿಂದೆಯೂ ಅಶೋಕ್‌ ಖೇಣಿ ಪಕ್ಷ ಸೇರ್ಪಡೆ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದ ಖರ್ಗೆ, ಚುನಾವಣಾ ಸಮಿತಿ ಸಭೆಯಲ್ಲೂ ಅಶೋಕ್‌ ಖೇಣಿಗೆ ಟಿಕೆಟ್‌ ನೀಡುವ ಬಗ್ಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. ಹೀಗಿದ್ದರೂ ಸಭೆಯಲ್ಲಿ ಅಶೋಕ್‌ ಖೇಣಿ ಹೆಸರು ಹೈಕಮಾಂಡ್‌ಗೆ ಶಿಫಾರಸು ಮಾಡಲು ನಿರ್ಧರಿಸಲಾಯಿತು. ಈ ಮೂಲಕ ಖೇಣಿಗೆ ಟಿಕೆಟ್‌ ನಿರ್ಧರಿಸುವ ಜವಾಬ್ದಾರಿಯನ್ನು ಹೈಕಮಾಂಡ್‌ಗೆ ವಹಿಸಿ ರಾಜ್ಯ ಕಾಂಗ್ರೆಸ್‌ ಕೈತೊಳೆದುಕೊಂಡಿತು ಎಂದು ಮೂಲಗಳು ತಿಳಿಸಿವೆ.