ರಾಜ್ಯದಲ್ಲಿ ಹಿಂದುಳಿದ ವರ್ಗಗಳು ಬಿಜೆಪಿಗೆ ಶಕ್ತಿ ತುಂಬಿವೆ. ಇದರಿಂದಲೇ ರಾಜ್ಯದಲ್ಲಿ ಬಿಜೆಪಿ ಆಡಳಿತ ನಡೆಸಲು ಸಾಧ್ಯವಾಗಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಅಭಿಪ್ರಾಯಪಟ್ಟರು.
ತುಮಕೂರು (ಅ.4) : ರಾಜ್ಯದಲ್ಲಿ ಹಿಂದುಳಿದ ವರ್ಗಗಳು ಬಿಜೆಪಿಗೆ ಶಕ್ತಿ ತುಂಬಿವೆ. ಇದರಿಂದಲೇ ರಾಜ್ಯದಲ್ಲಿ ಬಿಜೆಪಿ ಆಡಳಿತ ನಡೆಸಲು ಸಾಧ್ಯವಾಗಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಅಭಿಪ್ರಾಯಪಟ್ಟರು.
ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಸಮಾವೇಶದ ಸಂಬಂಧದ ಪೂರ್ವಭಾವಿ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಸರ್ಕಾರವೂ ಸಹ ಹಿಂದುಳಿದ ವರ್ಗದ ಸಮುದಾಯಕ್ಕೆ ಅನೇಕ ಯೋಜನೆಗಳ ಮೂಲಕ ಸೌಲಭ್ಯ ನೀಡುತ್ತಿದ್ದು, ರಾಜ್ಯದಲ್ಲಿ (Karnataka ) ಐವರು ಹಿಂದುಳಿದ ವರ್ಗಕ್ಕೆ ಸೇರಿದ ಶಾಸಕರನ್ನು ಮಂತ್ರಿಗಳನ್ನಾಗಿ ಮಾಡುವ ಮೂಲಕ ಬಿಜೆಪಿ ಹಿಂದುಳಿದ ವರ್ಗಕ್ಕೆ ಆದ್ಯತೆ ನೀಡಿದೆ ಎಂದರು.
ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ಬೃಹತ್ ಸಮಾವೇಶ ಕಲಬುರ್ಗಿಯಲ್ಲಿ ಇದೇ 30ರಂದು ನಡೆಯಲಿದ್ದು ತುಮಕೂರು ಸಂಘಟನಾತ್ಮಕ ಜಿಲ್ಲೆಯಿಂದ 30 ಸಾವಿರ ಮಂದಿ ಭಾಗವಹಿಸುತ್ತಿದ್ದು, ಪ್ರತಿಯೊಬ್ಬ ಕಾರ್ಯಕರ್ತರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕಾಗಿದೆ.
ಕಲ್ಬುರ್ಗಿಯಲ್ಲಿ ನಡೆಯುವ ಬೃಹತ್ ಸಮಾವೇಶಕ್ಕೆ ರಾಜ್ಯದ ಸುಮಾರು 7 ರಿಂದ 8 ಲಕ್ಷ ಕಾರ್ಯಕರ್ತರು ಸೇರುವ ನಿರೀಕ್ಷೆ ಇದೆ. ಸಮಾವೇಶದಲ್ಲಿ ಹಿಂದುಳಿದ ವರ್ಗಗಳ ಶಕ್ತಿ ಪ್ರದರ್ಶನ ನಡೆಯಲಿದ್ದು, ಮುಂಬರುವ ಚುನಾವಣೆಗೆ ಈ ಸಮಾವೇಶ ದಿಕ್ಸೂಚಿಯಾಗಲಿದೆ. ಪ್ರತಿಯೊಬ್ಬರೂ ಮನಸ್ತಾಪ, ಭಿನ್ನಾಭಿಪ್ರಾಯಗಳಿದ್ದರೂ ಅವುಗಳನ್ನೆಲ್ಲಾ ಬದಿಗೊತ್ತಿ ಒಗ್ಗಟ್ಟು ಪ್ರದರ್ಶಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಮತ್ತು ಕೇಂದ್ರ, ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಶಾಸಕರು, ಮುಖಂಡರು ಮತ್ತು ಕಾರ್ಯಕರ್ತರು ಕಾರ್ಯೋನ್ಮುಖರಾಗಬೇಕಿದೆ ಎಂದು ತಿಳಿಸಿದರು.
ಮಾಜಿ ಮುಖ್ಯಮಂತ್ರಿ ಎಸ್.ಸಿದ್ದರಾಮಯ್ಯರವರು ಮತ್ತು ಕಾಂಗ್ರೆಸ್ ಮುಖಂಡರು ದಿನನಿತ್ಯವು ಇಲ್ಲಸಲ್ಲದ ಆರೋಪ ಮಾಡುತ್ತಿರುವುದನ್ನು ಖಂಡಿಸಿ, ನಮಗೆ ಯಾರನ್ನು ಕಂಡರೂ ಭಯವಿಲ್ಲ. ನಮ್ಮಲ್ಲಿಯೂ ಸಹ ಸಿದ್ದರಾಮಯ್ಯ ಅವರಿಗೆ ಸರಿಸಮಾನರಾದ ನಾಯಕರು ಇದ್ದಾರೆ. ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿರವರ ಮೇಲೆ 40% ಮುಖ್ಯಮಂತ್ರಿ ಎಂಬ ಆರೋಪ ಮಾಡುತ್ತಿದ್ದಾರೆ ಎಂದು ಕೆಂಡಾಮಂಡಲರಾಗಿ, ಯಾವುದೇ ರೀತಿಯಾದ ಪುರಾವೆಗಳಿಲ್ಲ ಸುಳ್ಳು ದಾಖಲೆ, ಪುರಾವೆಗಳ ಮೇಲೆ ಆರೋಪ ಮಾಡುವುದು ಅವರ ಜಾ¿åಮಾನ ಎಂದು ಛೇಡಿಸಿದರು.
ಓಬಿಸಿ ಜಿಲ್ಲಾಧ್ಯಕ್ಷ ಆಯರಹಳ್ಳಿ ಶಂಕರಪ್ಪ ಮಾತನಾಡಿದರು. ಕಾರ್ಯಕ್ರಮದಲ್ಲಿ ಬಿಜೆಪಿ ಒಬಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುರೇಶ್ ಬಾಬು, ಮಾಜಿ ಎಂಎಲ್ಸಿಗಳಾದ ಎಂ.ಡಿ.ಲಕ್ಷೀನಾರಾಯಣ ಮತ್ತು ಡಾ. ಎಂ.ಆರ್.ಹುಲಿನಾಯ್ಕರ್, ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ, ಒಬಿಸಿ ಜಿಲ್ಲಾ ಪ್ರಭಾರಿ ಪ್ರೇಮಾನಾಗಯ್ಯ, ರಾಜ್ಯ ರೈತ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಶಿವಪ್ರಸಾದ್, ಜಿಲ್ಲಾ ಕಾರ್ಯದರ್ಶಿ ಆ.ನ.ಲಿಂಗಪ್ಪ, ಓಬಿಸಿ ಮುಖಂಡ ಬೆಟ್ಟಸ್ವಾಮಿ, ರಾಜ್ಯ ಕಾರ್ಯಕಾರಿಣಿ ಸದಸ್ಯ ಎಂ.ವೈ.ರುದ್ರೇಶ್, ಜಿಲ್ಲಾ ಸಂಯೋಜಕ ಚಂದನ್ ಕುಮಾರ್, ಜಿಲ್ಲಾ ಮಾಧ್ಯಮ ಸಂಚಾಲಕ ನಾಗೇಶ್ ವಿ.ಬಿ.ತೇಲ್ಕರ್ ಸೇರಿ ಓಬಿಸಿ ಜಿಲ್ಲೆಯ ವಿವಿಧ ಭಾಗದ ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಕಾರ್ಯಕಾರಿಣಿ ಮಂಡಳಿ ಸದಸ್ಯರು, ತಾಲೂಕು ಅಧ್ಯಕ್ಷರು, ಮಂಡಲ ಅಧ್ಯಕ್ಷರು, ಬೂತ್ ಅಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.
ಭಾರತ್ ಜೋಡೋದಿಂದ ಬಿಜೆಪಿಗೆ ಲಾಭ
ಸಂಸದ ಜಿ.ಎಸ್. ಬಸವರಾಜು ಮಾತನಾಡಿ, ರಾಜ್ಯದಲ್ಲಿ ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ಕೈಗೊಂಡಿದ್ದಾರೆ. ಇದರಿಂದ ಬಿಜೆಪಿಗೆ ಲಾಭವೇ ಹೊರತು ಕಾಂಗ್ರೆಸ್ಗೆ ಏನು ಲಾಭವಾಗುವುದಿಲ್ಲ. ಏಕೆಂದರೆ, ಈ ಹಿಂದೆಯೂ ಸಹ ಕಾಂಗ್ರೆಸ್ ಹಲವಾರು ಕಡೆಗಳಲ್ಲಿ ರಾರಯಲಿ ಮತ್ತು ಸಮಾವೇಶಗಳನ್ನು ಹಮ್ಮಿಕೊಂಡು ಬರುತ್ತಿದೆ. ಆದರೆ, ಎಲ್ಲ ಕಡೆಗಳಲ್ಲಿಯೂ ಇದು ಬಿಜೆಪಿಗೆ ವರದಾನವಾಗಿದೆ. ರಾಹುಲ್ ಗಾಂಧೀ ಈ ಹಿಂದೆ ಚುನಾವಣೆ ಪ್ರಚಾರ ಮಾಡಿದ ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಸೋತಿದೆ. ಈಗಲೂ ಸಹ ಭಾರತ್ ಜೋಡೋ ಯಾತ್ರೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಬದಲಾಗಿ ಬಿಜೆಪಿಗೆ ವರದಾನ-ಅನುಕೂಲವಾಗಲಿದೆ ಎಂದರು.
