ರಾಜ್ಯದಲ್ಲಿ 2005ವರೆಗೆ ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿದ್ದ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸಿ ಭೂ ಮಂಜೂರು ಮಾಡಲು ಅವಕಾಶ ಕಲ್ಪಿಸುವ ‘ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕ’ಕ್ಕೆ ವಿಧಾನಸಭೆ ಅಂಗೀಕಾರ ನೀಡಿದೆ.

ಬೆಂಗಳೂರು : ರಾಜ್ಯದಲ್ಲಿ 2005ವರೆಗೆ ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿದ್ದ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸಿ ಭೂ ಮಂಜೂರು ಮಾಡಲು ಅವಕಾಶ ಕಲ್ಪಿಸುವ ‘ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕ’ಕ್ಕೆ ವಿಧಾನಸಭೆ ಅಂಗೀಕಾರ ನೀಡಿದೆ. ವಿಧಾನಪರಿಷತ್ತಿನಲ್ಲಿ ಕೂಡ ಇದು ಅಂಗೀಕಾರವಾದರೆ ಕಾನೂನಿನ ರೂಪ ದೊರಕಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕರ್ನಾಟಕ ಭೂ ಕಂದಾಯ ಅಧಿನಿಯಮ 1964ಕ್ಕೆ ತಿದ್ದುಪಡಿ ತರುವ ಸಂಬಂಧ ತಿದ್ದುಪಡಿ ವಿಧೇಯಕವನ್ನು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಮಂಡಿಸಿದರು. ತಿದ್ದುಪಡಿ ವಿಧೇಯಕದ ಅನ್ವಯ 14-04-1990ರಿಂದ 2005ರ ಅಂತ್ಯದವರೆಗಿನ ಸಾಗುವಳಿ ಮಾಡುತ್ತಿದ್ದವರು ಬಗರ್‌ಹುಕುಂ ಪ್ರಕರಣಗಳು ಸಕ್ರಮಗೊಳ್ಳಲಿವೆ, ಈ ಸಂಬಂಧ ಅರ್ಜಿ ಸಲ್ಲಿಸಲು ಒಂದು ವರ್ಷ ಕಾಲಾವಧಿ ನೀಡಲಾಗುವುದು ಎಂದರು.

ಈ ಹಿಂದೆ ಸರ್ಕಾರಿ ಜಮೀನನ್ನು ಸಾಗುವಳಿ ಮಾಡುತ್ತಿದ್ದ ಭೂ ಹೀನರಿಗೆ ಬಗರ್‌ಹುಕುಂ ಸಾಗುವಳಿ ಜಮೀನು ಸಕ್ರಮಗೊಳಿಸಿ ಮಂಜೂರು ಮಾಡಲಾಗಿತ್ತು. ಈ ವೇಳೆ ಸರ್ಕಾರಿ ಜಮೀನನ್ನು 14-04-1990ರವರೆಗೆ ಸಾಗುವಳಿ ಮಾಡುತ್ತಿದ್ದ ಸಾರ್ವಜನಿಕರು ಮಾತ್ರ ಅರ್ಜಿ ಸಲ್ಲಿಸಲು ಷರತ್ತು ವಿಧಿಸಲಾಗಿತ್ತು. ಇದರಿಂದ ಸಾಕಷ್ಟುಮಂದಿ ಅರ್ಜಿ ಸಲ್ಲಿಸಲು ಸಾಧ್ಯವಾಗಿರಲಿಲ್ಲ. ಜತೆಗೆ 1990ರ ನಂತರ ಸರ್ಕಾರಿ ಜಮೀನು ಸಾಗುವಳಿ ಮಾಡುತ್ತಿದ್ದ ಅನೇಕ ಭೂ ರಹಿತರಿಗೆ ಭೂ ಮಂಜೂರು ಆಗುತ್ತಿಲ್ಲ. ಹೀಗಾಗಿ ಕರ್ನಾಟಕ ಭೂ ಕಂದಾಯ ಕಾಯ್ದೆಗೆ ತಿದ್ದುಪಡಿ 2005ರವರೆಗೂ ವಿಸ್ತರಣೆ ಮಾಡಲಾಗಿದೆ.