ನಾಳೆ ಕರ್ನಾಟಕ ಬಂದ್ : ಬಿಜೆಪಿಯಲ್ಲೇ ಮೂಡಿದೆ ಗೊಂದಲ
ನೂತನ ಮುಖ್ಯಮಂತ್ರಿ ಕುಮಾರಸ್ವಾಮಿ ಯವರು ತಕ್ಷಣ ರೈತರ ಸಾಲ ಮನ್ನಾ ಘೋಷಣೆ ಮಾಡದಿದ್ದರೆ ಸೋಮವಾರ ಕರ್ನಾಟಕ ಬಂದ್ ಆಚರಿಸ ಲಾಗುವುದು ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಹೇಳಿಕೆ ಸ್ವತಃ ಬಿಜೆಪಿಯಲ್ಲೇ ಗೊಂದಲ ಮೂಡಿಸಿದ್ದು, ಸೋಮವಾರ ಬಂದ್ ನಡೆಯುವುದೇ ಎಂಬ ಕುತೂಹಲ ಮೂಡಿಸಿದೆ.
ಬೆಂಗಳೂರು: ನೂತನ ಮುಖ್ಯಮಂತ್ರಿ ಕುಮಾರಸ್ವಾಮಿ ಯವರು ತಕ್ಷಣ ರೈತರ ಸಾಲ ಮನ್ನಾ ಘೋಷಣೆ ಮಾಡದಿದ್ದರೆ ಸೋಮವಾರ ಕರ್ನಾಟಕ ಬಂದ್ ಆಚರಿಸ ಲಾಗುವುದು ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಹೇಳಿಕೆ ಸ್ವತಃ ಬಿಜೆಪಿಯಲ್ಲೇ ಗೊಂದಲ ಮೂಡಿಸಿದ್ದು, ಸೋಮವಾರ ಬಂದ್ ನಡೆಯುವುದೇ ಎಂಬ ಕುತೂಹಲ ಮೂಡಿಸಿದೆ.
ಈ ನಡುವೆ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು, ಬಿಜೆಪಿ ಬಂದ್ಗೆ ಕರೆ ನೀಡಿದೆ ಎನ್ನುವುದಕ್ಕಿಂತ ರೈತರೇ ಬಂದ್ ಮಾಡಲು ನಿರ್ಧರಿಸಿದ್ದಾರೆ. ರೈತರು ಸ್ವಯಂಪ್ರೇರಿತರಾಗಿ ಬಂದ್ ಆಚರಿಸಲಿದ್ದಾರೆ ಎಂದು ಹೇಳಿದರು. ಆದರೆ, ಯಾವುದೇ ರೈತ ಸಂಘಟನೆಗಳು ಅಥವಾ ಇತರ ಸಂಘಟನೆಗಳು ಇದುವರೆಗೆ ತಾವು ಬಂದ್ ಆಚರಿಸುವುದಾಗಿ ಬಹಿರಂಗವಾಗಿ ಹೇಳಿಕೆ ನೀಡಿಲ್ಲ.
ಹೀಗಾಗಿ, ಬಂದ್ ನಡೆಯುವುದರ ಬಗ್ಗೆ ಅನುಮಾನಗಳೂ ವ್ಯಕ್ತವಾಗಿವೆ. ಶುಕ್ರವಾರ ಯಡಿಯೂರಪ್ಪ ಅವರು ಬಂದ್ ಆಚರಿಸುವ ಬಗ್ಗೆ
ಪ್ರಕಟಣೆ ನೀಡಿದ ಬೆನ್ನಲ್ಲೇ ಬೆಂಗಳೂರು ಹೊರತುಪಡಿಸಿ ರಾಜ್ಯದ ಇತರ ಎಲ್ಲ ಜಿಲ್ಲೆಗಳ ಪಕ್ಷದ ಘಟಕಗಳಿಗೆ ಸಂದೇಶ ರವಾನಿಸಲಾಗಿದೆ. ಆದರೆ, ಯಾವ ಸಂಘಟನೆಗಳ ಜತೆಗೆ ಬಂದ್ ಆಚರಿಸಬೇಕು? ಹೇಗೆ ಎಂಬಿತ್ಯಾದಿ ವಿವರಗಳಿಲ್ಲ ಎನ್ನಲಾಗಿದೆ.
ವಾಸ್ತವವಾಗಿ ಕರ್ನಾಟಕ ಬಂದ್ಗೆ ಕರೆ ನೀಡುವ ಬಗ್ಗೆ ಯಡಿಯೂರಪ್ಪ ಅವರು ಪಕ್ಷದಲ್ಲಿ ಗಂಭೀರವಾಗಿ ಚರ್ಚೆಯನ್ನೂ ನಡೆಸಿರಲಿಲ್ಲ. ಶಾಸಕಾಂಗ ಪಕ್ಷದ ಸಭೆಯಲ್ಲಿ ಅನೌಪಚಾರಿಕವಾಗಿ ಪ್ರಸ್ತಾಪ ಮಾಡಿದ್ದರು. ಆ ವೇಳೆ ಕುಮಾರಸ್ವಾಮಿ ಸರ್ಕಾರಕ್ಕೆ ಇನ್ನೂ ಕೆಲವು ದಿನಗಳವರೆಗೆ ಕಾಲಾವಕಾಶ ನೀಡಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಆದರೂ ಯಡಿಯೂರಪ್ಪ ಅವರು ಶುಕ್ರವಾರ ವಿಧಾನ ಸಭೆಯಲ್ಲಿ ಘೋಷಣೆ ಮಾಡಿಬಿಟ್ಟರು ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಮಾಹಿತಿ ನೀಡಿದರು.