ಕೇಜ್ರಿವಾಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಲೆಫ್ಟಿನೆಂಟ್ ಗವರ್ನರ್’ಗೆ ಬಿಜೆಪಿ ಒತ್ತಾಯ
ಬಿಜೆಪಿ ನಿಯೋಗವು ದೆಹಲಿ ಲೆಫ್ಟಿನೆಂಟ್ ಗವರ್ನರನ್ನು ಭೇಟಿ ಮಾಡಿ, ಅರವಿಂದ್ ಕೇಜ್ರಿವಾಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.
ನವದೆಹಲಿ (ಮೇ.08): ಬಿಜೆಪಿ ನಿಯೋಗವು ದೆಹಲಿ ಲೆಫ್ಟಿನೆಂಟ್ ಗವರ್ನರನ್ನು ಭೇಟಿ ಮಾಡಿ, ಅರವಿಂದ್ ಕೇಜ್ರಿವಾಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.
400 ಕೋಟಿ ನೀರಿನ ಟ್ಯಾಂಕರ್ ಹಗರಣಕ್ಕೆ ಸಂಬಂಧಿಸಿದಂತೆ ಲೆಫ್ಟಿನೆಂಟ್ ಗವರ್ನರ್ ಗೆ ದಾಖಲೆಗಳನ್ನು ನೀಡಿದ್ದೇವೆ. ಅದೇ ರೀತಿ ದೆಹಲಿ ಸರ್ಕಾರ ನಡೆಸಿದ ಭ್ರಷ್ಟಾಚಾರದ ಬಗ್ಗೆಯೂ ಮಾತುಕತೆ ನಡೆಸಿದ್ದೇವೆ ಎಂದು ಬಿಜೆಪಿ ನಾಯಕ ವಿಜೇಂದರ್ ಗುಪ್ತಾ ಹೇಳಿದ್ದಾರೆ.
ಶೀಲಾ ದೀಕ್ಷಿತ್ ಅವಧಿಯಲ್ಲಿ 400 ಕೋಟಿ ನೀರಿನ ಟ್ಯಾಂಕರ್ ಹಗರಣ ನಡೆದಿದೆ. ಅರವಿಂದ್ ಕೇಜ್ರಿವಾಲ್ ಹಾಗೂ ಶೀಲಾ ದೀಕ್ಷಿತ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನಿಯೋಗ ಒತ್ತಾಯಿಸಿದೆ.
ಸರ್ಕಾರದ ಜೊತೆ ಮಾತುಕತೆ ನಡೆಸುವುದಾಗಿ ಲೆಫ್ಟಿನೆಂಟ್ ಗವರ್ನರ್ ಭರವಸೆ ನೀಡಿರುವುದಾಗಿ ಗುಪ್ತಾ ಹೇಳಿದ್ದಾರೆ.
ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಹವಾಲಾ ಹಣದಲ್ಲಿ ಕೃಷಿಭೂಮಿಯನ್ನು ಖರೀದಿಸಿದ್ದಾರೆ. ಇವೆಲ್ಲಾ ಕೇಜ್ರಿವಾಲ್ ಗೆ ಗೊತ್ತಿದ್ದರೂ ಸುಮ್ಮನಿದ್ದಾರೆ. ನಗರಾಭಿವೃದ್ದಿ ಸಚಿವರಾಗಿ ಅವರನ್ನೇ ಮುಂದುವರೆಸಿದ್ದಾರೆ. ಕೇಜ್ರಿವಾಲ್ ಜೈನ್ ರವರನ್ನು ಉಳಿಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಗುಪ್ತಾ ಆರೋಪಿಸಿದ್ದಾರೆ.