ಕರಾವಳಿಯಲ್ಲಿ ಇಂದು ಶಾಂತಿ ಸಭೆ: ಸಚಿವ ರಮಾನಾಥ್ ರೈ ನೇತೃತ್ವದ ಶಾಂತಿ ಸಭೆಗೆ ಬಿಜೆಪಿ ಬಹಿಷ್ಕಾರ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತ ಸ್ಥಿತಿ ರಾಜಕೀಯ ಸಂಘರ್ಷ ಮಾತ್ರ ಇನ್ನೂ ನಿಂತಿಲ್ಲ. ಸಂಸದ ನಳೀನ್ ಕುಮಾರ್ ಕಟೀಲ್ ಸರ್ಕಾರದ ವಿರುದ್ದ ಮತ್ತೆ ಹರಿಹಾಯ್ದಿದ್ದು, ಮತ್ತೊಂದೆಡೆ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಮಂಗಳೂರಿನಲ್ಲಿ ಪೊಲೀಸ್ ಅಧಿಕಾರಿಗಳ ಸರಣಿ ಸಭೆ ನಡೆಸಿದ್ದಾರೆ. ಈ ಮಧ್ಯೆ ನಿನ್ನೆ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಶರತ್ ಮಡಿವಾಳ ಮನೆಗೆ ಭೇಟಿ ನೀಡಿದ್ದಾರೆ.
ಬೆಂಗಳೂರು(ಜು.13): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತ ಸ್ಥಿತಿ ರಾಜಕೀಯ ಸಂಘರ್ಷ ಮಾತ್ರ ಇನ್ನೂ ನಿಂತಿಲ್ಲ. ಸಂಸದ ನಳೀನ್ ಕುಮಾರ್ ಕಟೀಲ್ ಸರ್ಕಾರದ ವಿರುದ್ದ ಮತ್ತೆ ಹರಿಹಾಯ್ದಿದ್ದು, ಮತ್ತೊಂದೆಡೆ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಮಂಗಳೂರಿನಲ್ಲಿ ಪೊಲೀಸ್ ಅಧಿಕಾರಿಗಳ ಸರಣಿ ಸಭೆ ನಡೆಸಿದ್ದಾರೆ. ಈ ಮಧ್ಯೆ ನಿನ್ನೆ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಶರತ್ ಮಡಿವಾಳ ಮನೆಗೆ ಭೇಟಿ ನೀಡಿದ್ದಾರೆ.
ಸಿಎಂ ನಿರ್ದೇಶನ ನೀಡಿದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿರುವ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಆಲೋಕ್ ಮೋಹನ್ ನಿನ್ನೆ ಮಂಗಳೂರಿನಲ್ಲಿ ಪೊಲೀಸ್ ಅಧಿಕಾರಿಗಳ ಸರಣಿ ಸಭೆ ನಡೆಸಿದ್ದಾರೆ. ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಎಡಿಜಿಪಿ ಪರಿಸ್ಥಿತಿ ನಿರ್ವಹಣೆ ಬಗ್ಗೆ ಮಾಹಿತಿ ಪಡೆದಿದ್ದಾರೆ. ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸಿದ ಐಪಿಎಸ್ ಅಧಿಕಾರಿಗಳನ್ನು ಕೂಡಾ ಮಂಗಳೂರಿಗೆ ಕರೆಸಿಕೊಂಡು ಕಾನೂನು ಮತ್ತು ಸುವ್ಯವಸ್ಥೆ ನಿರ್ವಹಣೆ ಬಗ್ಗೆ ಎಡಿಜಿಪಿ ಚರ್ಚೆ ನಡೆಸಿದ್ದಾರೆ. ಬಳಿಕ ಎಸಿಪಿ ಮತ್ತು ಇನ್ಸ್ಪೆಕ್ಟರ್ ಹಂತದ ಪೊಲೀಸ್ ಅಧಿಕಾರಿಗಳ ಸಭೆಯನ್ನೂ ನಡೆಸಿ ಗಲಭೆ ನಡೆದ ಬಳಿಕದ ಮಾಹಿತಿ ಪಡೆದಿದ್ದಾರೆ. ಸಂಜೆ ಬಿ.ಸಿ. ರೋಡ್'ನಲ್ಲಿರುವ ಮೃತ ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ನಡೆಸುತ್ತಿದ್ದ ಉದಯ ಲಾಂಡ್ರಿಗೂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನು ನಿನ್ನೆ ಬೆಳಗ್ಗೆ ಬಿ.ಸಿ. ರೋಡ್'ನಲ್ಲಿರುವ ಮೃತ ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ನಿವಾಸಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ್ ರೈ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ರು.
ಇದೇ ವೇಳೆ, ರಷ್ಯಾದಿಂದ ವಾಪಸಾಗಿರುವ ಮಂಗಳೂರು ಸಂಸದ ನಳೀನ್ ಕುಮಾರ್ ಕಟೀಲ್ ಮತ್ತೆ ರಾಜ್ಯ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ದ ಹರಿ ಹಾಯ್ದಿದ್ದಾರೆ. ಇಂದು ನಡೆಯುವ ಶಾಂತಿ ಸಭೆಯಲ್ಲಿ ಬಿಜೆಪಿ ನಾಯಕರು ಪಾಲ್ಗೊಳ್ಳುವುದಿಲ್ಲ ಎಂದು ಹೇಳಿರುವ ಸಂಸದ ಕಟೀಲ್, ಹಿಂದೂ ಮುಖಂಡರನ್ನು ಬಂಧಿಸಿದರೆ ಮುಂದಾಗುವ ಘಟನೆಗಳಿಗೆ ಸರ್ಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಈ ಮಧ್ಯೆ ಇಂದು ಮಂಗಳೂರಿನಲ್ಲಿ ಜಿಲ್ಲಾಡಳಿತ ಶಾಂತಿ ಸಭೆ ಆಯೋಜಿಸಿದ್ದು, ಬಿಜೆಪಿ ಮಹಿಳಾ ಘಟಕದಿಂದ ಬೃಹತ್ ಪ್ರತಿಭಟನೆಗೆ ಕೂಡಾ ಸಿದ್ದತೆ ನಡೆಯುತ್ತಿದೆ. ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಆರ್. ಕೆ. ದತ್ತಾ ಕೂಡಾ ನಾಳೆ ಮಂಗಳೂರಿಗೆ ಭೇಟಿ ನೀಡಲಿದ್ದು, ಜಿಲ್ಲೆಯ ಸ್ಥಿತಿಗತಿ ಅವಲೋಕಿಸಲಿದ್ದಾರೆ.
ವರದಿ: ಕಿರಣ್ ಹನಿಯಡ್ಕ, ಸುವರ್ಣ ನ್ಯೂಸ್