ಹಾಸನ ಬಿಜೆಪಿ ಪರಾಜಿತ ಅಭ್ಯರ್ಥಿ ಎ.ಮಂಜು ಮತ್ತೆ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದಾರೆ.
ಬೆಂಗಳೂರು [ಜೂ.28] : ಲೋಕಸಭೆ ಚುನಾವಣೆ ವೇಳೆ ಸುಳ್ಳು ಪ್ರಮಾಣಪತ್ರ ಸಲ್ಲಿಸಿದ ಆರೋಪದ ಮೇಲೆ ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ಸಂಸತ್ ಸದಸ್ಯತ್ವನ್ನು ಅಸಿಂಧುಗೊಳಿಸುವಂತೆ ಕೋರಿ ಮಾಜಿ ಸಚಿವ ಹಾಗೂ ಬಿಜೆಪಿ ಪರಾಜಿತ ಅಭ್ಯರ್ಥಿ ಎ.ಮಂಜು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಈ ಕುರಿತು ಎ.ಮಂಜು ಅವರು ಹೈಕೋರ್ಟ್ನಲ್ಲಿ ಚುನಾವಣಾ ತಕರಾರು ಅರ್ಜಿ ದಾಖಲಿಸಿ, ಪ್ರಜ್ವಲ್ ರೇವಣ್ಣ ಹಾಸನ ಲೋಕಸಭೆ ಕ್ಷೇತ್ರಕ್ಕೆ ಸ್ಪರ್ಧಿಸಿ ಜಯಗಳಿಸಿದ್ದಾರೆ. ಅವರು ಮಾಚ್ರ್ 22ರಂದು ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿ, ತಮ್ಮ ಬ್ಯಾಂಕ್ ಬ್ಯಾಲೆನ್ಸ್, ಸ್ಥಿರಾಸ್ತಿ ಹಾಗೂ ಚರಾಸ್ತಿಯ ವಿವರಗಳನ್ನು ಘೋಷಣೆ ಮಾಡಿದ್ದಾರೆ. ಆದರೆ, ಬ್ಯಾಂಕ್ ಬ್ಯಾಲೆನ್ಸ್, ಉದ್ದಿಮೆಗಳಲ್ಲಿ ಪಾಲುದಾರಿಕೆ ಹೊಂದಿರುವ, ಸ್ಥಿರಾಸ್ತಿ ಹಾಗೂ ಚರಾಸ್ತಿಯ ಕುರಿತು ಅನೇಕ ಮಾಹಿತಿಯನ್ನು ಮರೆಮಾಚಿದ್ದಾರೆ ಎಂದು ದೂರಿದ್ದಾರೆ.
ಪ್ರಜ್ವಲ್ ರೇವಣ್ಣ ಮೆಸರ್ಸ್ ಅಧಿಕಾರ ವೆಂಚರ್ಸ್ ಕಂಪನಿಯಲ್ಲಿ ಶೇ.20ರಷ್ಟುಹಾಗೂ ಡ್ರೋನ್ ವರ್ಕ್ಫೋರ್ಸ್ ಕಂಪನಿಯಲ್ಲಿ ಶೇ.25ರಷ್ಟುಪಾಲುದಾರಿಕೆ ಹೊಂದಿದ್ದಾರೆ. ತುಮಕೂರು ಹಾಗೂ ಮೈಸೂರು ಜಿಲ್ಲೆಯಲ್ಲಿ ಹೊಂದಿರುವ ಜಮೀನಿನ ಬಗ್ಗೆ ಮಾಹಿತಿ ನೀಡಿಲ್ಲ. 2012ನೇ ಸಾಲಿನಿಂದ 2017ರವರೆಗೆ ಆದಾಯ ತೆರಿಗೆ ರಿಟರ್ನ್ಸ್ ಘೋಷಣೆ ಮಾಡಿಲ್ಲ. ಅವರು ತಮ್ಮ ಮಾಲಿಕತ್ವದಲ್ಲಿ ಹೊಂದಿರುವ ಅನೇಕ ಸ್ವತ್ತುಗಳು ಸರ್ಕಾರದ ಸ್ವತ್ತಾಗಿವೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಂದ ಪಡೆದ 26 ಲಕ್ಷ ರು. ಸಾಲದ ಬಗ್ಗೆ ಮಾಹಿತಿ ನೀಡಿಲ್ಲ. ಎಸ್ಬಿಐ ಬ್ಯಾಂಕ್ ಖಾತೆಯಲ್ಲಿ ಸುಮಾರು 49 ಲಕ್ಷ ರು. ಹಣ ಠೇವಣಿಯಿದ್ದರೂ ಕೇವಲ 5.78 ಲಕ್ಷ ರು. ಮೊತ್ತವಿದೆ ಎಂದು ತಿಳಿಸಿದ್ದಾರೆ. ಪ್ರಮಾಣಪತ್ರದಲ್ಲಿ ಇಂತಹ ಸುಳ್ಳು ಮಾಹಿತಿ ನೀಡಲಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
