ಕರ್ನಾಟಕ ರಾಜಕಾರಣದಲ್ಲಿ ಶೀಘ್ರವೇ ಬದಲಾವಣೆಯೊಂದು ಆಗಬಹುದು.  ಕಾದು ನೋಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಮಹತ್ವದ ಸುಳಿವೊಂದನ್ನು ನೀಡಿದ್ದಾರೆ. 

ಬಳ್ಳಾರಿ :  ‘ರಾಜ್ಯ ರಾಜಕೀಯದಲ್ಲಿ ಏನಾದರೂ ಏರುಪೇರಾಗಬಹುದು ಕಾದು ನೋಡಿ’ ಎನ್ನುವ ಮೂಲಕ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರು ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೇರುವ ಸುಳಿವು ನೀಡಿದ್ದಾರೆ.

Add Asianetnews Kannada as a Preferred SourcegooglePreferred

ಇಲ್ಲಿನ ಬಸವ ಭವನದಲ್ಲಿ ಪಕ್ಷದ ಕಾರ್ಯಕರ್ತರ ಬಹಿರಂಗ ಸಭೆಯಲ್ಲಿ ಶನಿವಾರ ಮಾತನಾಡಿದ ಅವರು, ರಾಜ್ಯದ ಜೆಡಿಎಸ್‌- ಕಾಂಗ್ರೆಸ್‌ ಮೈತ್ರಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಜೆಡಿಎಸ್‌ ನೇತೃತ್ವದ ರಾಜ್ಯ ಸರ್ಕಾರ ವೈಫಲ್ಯಗಳ ವಿರುದ್ಧ ಚಳವಳಿ ರೂಪಿಸುವ ಮೂಲಕ ಆಡಳಿತಾರೂಢ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿ. ಮುಖ್ಯಮಂತ್ರಿಯೇ ಅಧಿಕಾರ ಬಿಟ್ಟು ತೊಲಗುವಂತೆ ಸರ್ಕಾರದ ಪ್ರತಿಹೆಜ್ಜೆಯ ಮೇಲೆ ಕಣ್ಣಿಟ್ಟು ಕೆಲಸ ಮಾಡಿ. ಇಲ್ಲದಿದ್ದರೆ ರಾಜ್ಯದ ಜನತೆಗೆ ನಾವು ಅನ್ಯಾಯ ಮಾಡಿದಂತಾಗುತ್ತದೆ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಜೆಡಿಎಸ್‌ ಬರೀ 37 ಸ್ಥಾನಗಳನ್ನು ಗೆದ್ದು ಕಾಂಗ್ರೆಸ್‌ ಜತೆ ಅಪವಿತ್ರ ಮೈತ್ರಿ ಮಾಡಿಕೊಂಡು ಅಧಿಕಾರಕ್ಕೆ ಬಂದಿದೆ. ಅತಿ ಹೆಚ್ಚು ಸ್ಥಾನಗಳನ್ನು ಪಡೆದ ಬಿಜೆಪಿ ಪ್ರತಿಪಕ್ಷವಾಗಿ ಕಾರ್ಯನಿರ್ವಹಿಸುವಂತಾಗಿದೆ. ಚುನಾವಣೆ ಮುನ್ನ 3 ತಿಂಗಳು ಹಾಗೂ ಸರ್ಕಾರ ರಚನೆಯಾದ 3 ತಿಂಗಳಲ್ಲಿ ರಾಜ್ಯದಲ್ಲಿ ಒಂದೇ ಒಂದು ಅಭಿವೃದ್ಧಿ ಕೆಲಸಗಳಾಗಿಲ್ಲ. ಈ ಅನಿಷ್ಟಸರ್ಕಾರ ಯಾವಾಗ ತೊಲಗುತ್ತದೆ ಎಂದು ಜನರು ಬೇಸರಗೊಂಡಿದ್ದಾರೆ. ಅಷ್ಟರ ಮಟ್ಟಿಗೆ ರಾಜ್ಯದಲ್ಲಿರುವ ಮೈತ್ರಿ ಸರ್ಕಾರ ಜನವಿರೋಧಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.