ಕೊಡಗು ಜಿಲ್ಲೆಯಲ್ಲಿ ಉಂಟಾಗಿರುವ ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿರುವ ಜನರ ನೆರವಿಗಾಗಿ ಬೆಂಗಳೂರು ನಗರದ ಶಾಸಕರು, ವಿಧಾನ ಪರಿಷತ್‌ ಸದಸ್ಯರು ಹಾಗೂ ಪಾಲಿಕೆ ಸದಸ್ಯರ ಎರಡು ತಿಂಗಳ ವೇತನ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲು ನಿರ್ಧರಿಸಿದ್ದಾರೆ.

 ಬೆಂಗಳೂರು (ಆ. 20): ಕೊಡಗು ಜಿಲ್ಲೆಯಲ್ಲಿ ಉಂಟಾಗಿರುವ ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿರುವ ಜನರ ನೆರವಿಗಾಗಿ ಬೆಂಗಳೂರು ನಗರದ ಶಾಸಕರು, ವಿಧಾನ ಪರಿಷತ್‌ ಸದಸ್ಯರು ಹಾಗೂ ಪಾಲಿಕೆ ಸದಸ್ಯರ ಎರಡು ತಿಂಗಳ ವೇತನ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲು ನಿರ್ಧರಿಸಿದ್ದಾರೆ.

Add Asianetnews Kannada as a Preferred SourcegooglePreferred

ನಗರದ ಬಿಜೆಪಿ ಕಚೇರಿಯಲ್ಲಿ ಬೆಂಗಳೂರು ನಗರ ಶಾಸಕರು ಮತ್ತು ಪಾಲಿಕೆ ಸದಸ್ಯರ ನೇತೃತ್ವದಲ್ಲಿ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪಕ್ಷದ ಹಿರಿಯ ಮುಖಂಡ ಆರ್‌.ಅಶೋಕ್‌ ಈ ವಿಷಯ ತಿಳಿಸಿದರು.

ದೇಶದ ರಕ್ಷಣೆಗೆ ಅತಿ ಹೆಚ್ಚು ಸೈನಿಕರನ್ನು ನೀಡಿರುವ ಹಾಗೂ ಬೆಂಗಳೂರು ನಗರಕ್ಕೆ ಕುಡಿಯುವ ನೀರು ಒದಗಿಸುತ್ತಿರುವ ಕಾವೇರಿ ನದಿಯ ಉಗಮ ಸ್ಥಾನ ಕೊಡಗು ಜಿಲ್ಲೆ ಪ್ರಸ್ತುತ ಸಂಕಷ್ಟಕ್ಕೆ ಸಿಲುಕಿದೆ. ಅವರಿಗೆ ನಮ್ಮ ನೆರವು ಅತ್ಯಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲಿನ ಜನತೆಗೆ ಪುನರ್ವಸತಿ ಕಲ್ಪಿಸುವುದಕ್ಕಾಗಿ ಇಲ್ಲಿಯ ಜನಪ್ರತಿನಿಧಿಗಳು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಹಣ ಸಹಾಯ ಮಾಡಲು ನಿರ್ಧರಿಸಿರುವುದಾಗಿ ವಿವರಿಸಿದರು.

ನಮ್ಮ ಕಣ್ಣ ಮುಂದೆಯೇ ವೀರಭೂಮಿ ತನ್ನ ಸ್ವರೂಪ ಕಳೆದುಕೊಂಡಿದೆ. ಕೊಡಗು ಜಿಲ್ಲೆಯ ಜನ ಪರಿತಪಿಸುತ್ತಿದ್ದಾರೆ. ಈ ಪ್ರದೇಶ ಸಾಮಾನ್ಯ ಸ್ಥಿತಿಗೆ ಬರಲು ಕನಿಷ್ಠ ಐದು ವರ್ಷವಾದರೂ ಬೇಕು. ಇಂತಹ ಸಂದರ್ಭದಲ್ಲಿ ಬೆಂಗಳೂರಿನ ಜನ ಸಹಾಯ ಹಸ್ತ ಚಾಚಬೇಕು. ಈ ಅಭಿಯಾನದಲ್ಲಿ ಇಡೀ ಬೆಂಗಳೂರಿನ ಜನ ಭಾಗಿಯಾಗಬೇಕು ಎಂದು ಮನವಿ ಮಾಡಿದರು.

ಒಂದೇ ದಿನ 11 ಲಕ್ಷ ರು. ಸಂಗ್ರಹ:

ಶಾಸಕರು ಹಾಗೂ ಜನ ಪ್ರತಿನಿಧಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ 11.05 ಲಕ್ಷ ರು. ಸಂಗ್ರಹವಾಗಿದೆ. ಮುಂದಿನ ಮೂರು ನಾಲ್ಕು ದಿನಗಳಲ್ಲಿ ಎಲ್ಲಾ ವಸ್ತುಗಳನ್ನು ಸಂತ್ರಸ್ತರಿಗೆ ತಲುಪಿಸುವ ಕಾರ್ಯ ಮಾಡಲಾಗುವುದು. ಸಹಾಯ ಮಾಡುವವರು ಹಣ ಮತ್ತು ಸೇವಾಭಾರತಿ ಹೆಸರಿನಲ್ಲಿ ಚೆಕ್‌ಗಳನ್ನು ನೀಡಬಹುದು. ಈ ವಸ್ತುಗಳನ್ನು ಖುದ್ದು ನಾನೇ ಅಲ್ಲಿಗೆ ಹೋಗಿ ಸಂತ್ರಸ್ತರಿಗೆ ತಲುಪಿಸುತ್ತೇನೆ ಎಂದರು.