ವಿಧಾನಸಭಾ ಚುನಾವಣೆ ನಂತರ ಇದೇ ಮೊದಲ ಬಾರಿಗೆ ರಾಜ್ಯ ಬಿಜೆಪಿ ನಾಯಕರು ಸಂಘ ಪರಿವಾರದ  ಮುಖಂಡರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. 

ಬೆಂಗಳೂರು : ವಿಧಾನಸಭಾ ಚುನಾವಣೆ ನಂತರ ಇದೇ ಮೊದಲ ಬಾರಿಗೆ ರಾಜ್ಯ ಬಿಜೆಪಿ ನಾಯಕರು ಸಂಘ ಪರಿವಾರದ ಮುಖಂಡರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಶುಕ್ರವಾರ ನಗರದ ಚಾಮರಾಜಪೇಟೆಯಲ್ಲಿನ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್ ಎಸ್) ಕಚೇರಿಗೆ ತೆರಳಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್, ರಾಜ್ಯ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಅವರು ಸುದೀರ್ಘ ಮಾತುಕತೆ ನಡೆಸಿದರು. 

Add Asianetnews Kannada as a Preferred SourcegooglePreferred

ಇದೊಂದು ಸೌಜನ್ಯದ ಭೇಟಿ ಎಂದು ಮೇಲ್ನೋಟಕ್ಕೆ ಹೇಳಿದರೂ ಮುಂಬರುವ ಲೋಕಸಭಾ ಚುನಾವಣೆಯ ಸಿದ್ಧತೆ ಹಿನ್ನೆಲೆಯಲ್ಲಿ ಸಮಾಲೋಚನೆ ನಡೆಸಲಾಯಿತು ಎಂದು ತಿಳಿದು ಬಂದಿದೆ. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಾಲ್ಕು ವರ್ಷಗಳನ್ನು ಪೂರೈಸಿದ್ದರಿಂದ ಸರ್ಕಾರದ ಸಾಧನೆಗಳನ್ನು ಜನರ ಬಳಿ ತಲುಪಿಸುವ ಕೆಲಸ ಆಗಬೇಕಾಗಿದೆ. 

ಇಲ್ಲದಿದ್ದರೆ ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷಿಸಿದಷ್ಟು ಸ್ಥಾನಗಳನ್ನು ಗೆಲ್ಲುವುದು ಕಷ್ಟವಾಗುತ್ತದೆ. ಮೇಲಾಗಿ, ರಾಜ್ಯದಲ್ಲಿ ಈಗ ಜೆಡಿಎಸ್ ಮತ್ತು ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಅಸ್ತಿತ್ವದಲ್ಲಿದೆ. ಈ ಎರಡೂ ಪಕ್ಷಗಳು ಒಟ್ಟಾಗಿ ಚುನಾವಣೆ ಎದುರಿಸು ವುದರಿಂದ ಅದು ಬಿಜೆಪಿಗೆ ಸವಾಲು ಒಡ್ಡಿದಂತಾಗುತ್ತದೆ. 

ಈ ನಿಟ್ಟಿನಲ್ಲಿ ಈಗಿನಿಂದಲೇ ಚುನಾವಣೆಯ ರಣತಂತ್ರ ರೂಪಿಸಬೇಕು ಎಂಬ ನಿಲುವಿಗೆ ಬಿಜೆಪಿ ನಾಯಕರು ಬಂದರು ಎನ್ನಲಾಗಿದೆ.