ಸಚಿವ ಡಿ.ಕೆ. ಶಿವಕುಮಾರ್ ಹಾಗೂ ತಮ್ಮನ್ನು ಬಿಜೆಪಿಯಿಂದ ಸೆಳೆಯುವ ಯತ್ನ ಮಾಡಲಾಗುತ್ತಿದೆ ಎಂದು ಡಿಕೆಶಿ ಅವರ ಸಹೋದರ ಡಿ.ಕೆ. ಸುರೇಶ್ ಅವರು ಹೇಳಿದ್ದಾರೆ. 

ರಾಮನಗರ: ಬಿಜೆಪಿಯವರು ನಾನು ಹಾಗೂ ನನ್ನ ಸಹೋದರ ಡಿ.ಕೆ. ಶಿವಕುಮಾರ್ ಅವರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದೆ. ಅದಕ್ಕೆ ಒಪ್ಪದ ಕಾರಣದಿಂದಾಗಿಯೇ ಆದಾಯ ತೆರಿಗೆ, ಜಾರಿ ನಿರ್ದೇಶನಾಲಾಯದಂಥ ಸಂಸ್ಥೆಗಳ ಮೂಲಕ ದಾಳಿಗಳನ್ನು ನಡೆಸುತ್ತಿದೆ ಎಂದು ಸಂಸದ ಡಿ.ಕೆ.ಸುರೇಶ್ ಆರೋಪಿಸಿದರು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಗರದಲ್ಲಿ ಭಾನುವಾರ ಜೆಡಿಎಸ್ -ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಪರ ಪ್ರಚಾರದ ವೇಳೆ ಮಾತನಾಡಿ, ರಾಜ್ಯದಲ್ಲಿ ಸರ್ಕಾರ ರಚಿಸಲು ಬಿಜೆಪಿ ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಪ್ರಯತ್ನಿಸುತ್ತಿದೆ. ಜೆಡಿಎಸ್ -ಕಾಂಗ್ರೆಸ್ ಸರ್ಕಾರಕ್ಕೆ ಬಿಜೆಪಿ ತೊಂದರೆ ನೀಡುತ್ತಲೇ ಇದೆ. ಪ್ರತಿ ದಿನ ಹಣದ ಆಮಿಷ ಅಥವಾ ಐಟಿ ದಾಳಿಯಂಥ ಒಂದಲ್ಲಾ ಒಂದು ಮಾರ್ಗದಲ್ಲಿ ಶಾಸಕರನ್ನು ಸೆಳೆಯಲು ವಿಫಲ ಪ್ರಯತ್ನ ಮಾಡುತ್ತಿದೆ ಎಂದರು.

ಕಳೆದ ವರ್ಷ ಗುಜರಾತ್ ಶಾಸಕರನ್ನು ರಾಮನಗರದ ಈಗಲ್‌ಟನ್ ರೆಸಾರ್ಟ್‌ಗೆ ಕರೆ ತಂದಿದ್ದಾಗ ದಾಳಿ ನಡೆಸಿದ ಐಟಿ ಅಧಿಕಾರಿಗಳು ಬೇರೇನೂ ಕೇಳಿರಲಿಲ್ಲ. ಮೂವರು ಕಾಂಗ್ರೆಸ್ ಶಾಸಕರನ್ನು ಜತೆಯಲ್ಲಿ ಕಳುಹಿಸಿಕೊಡಿ ಎಂದು ಬೇಡಿಕೆ ಮುಂದಿಟ್ಟಿದ್ದರು. ಆ ಶಾಸಕರನ್ನು ರಕ್ಷಣೆ ಮಾಡುವ ಜವಾಬ್ದಾರಿಯನ್ನು ಕಾಂಗ್ರೆಸ್ ನಾಯಕ ಅಹಮದ್ ಪಟೇಲ್ ಅವರು ಸಚಿವ ಡಿ.ಕೆ. ಶಿವಕುಮಾರ್ ಹೆಗಲಿಗೆ ವಹಿಸಿದ್ದರು.

ಹಾಗೊಂದು ವೇಳೆ ಶಾಸಕರನ್ನು ಕಳುಹಿಸಿಕೊಟ್ಟಿದ್ದರೆ ನಮಗೆ ಯಾವುದೇ ನಷ್ಟ ಆಗುತ್ತಿರಲಿಲ್ಲ. ಆದರೆ, ನಾಯಕತ್ವ ವಹಿಸಿಕೊಂಡವರಿಗೆ ವಂಚಿಸಿದರೆ ನಮ್ಮ ತಾಯಿಗೆ ವಂಚನೆ ಮಾಡಿದಂತಾಗುತ್ತದೆ ಎಂಬ ಕಾರಣಕ್ಕೆ ನಾವು ಅದಕ್ಕೆ ಒಪ್ಪಲಿಲ್ಲ ಎಂದರು.