ರಮೇಶ್ ಎಲ್ಲಿದ್ದಾರೆ : ಬಿಎಸ್ವೈಗೆ ಗೊತ್ತು..?
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸದ್ಯ ನಾಪತ್ತೆಯಾಗಿದ್ದು, ಈ ಬಗ್ಗೆ ಬಿಜೆಪಿ ಮುಖಂಡ ಬಿ.ಎಸ್.ಯಡಿಯೂರಪ್ಪ ಅವರಿಗೆ ತಿಳಿದಿದೆ ಎಂದು ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರು : ‘ಮಾಜಿ ಸಚಿವ ಹಾಗೂ ಶಾಸಕ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕರ ಸಂಪರ್ಕಕ್ಕೆ ಸಿಕ್ಕಿಲ್ಲ. ಅವರು ಎಲ್ಲಿದ್ದಾರೆ ಎನ್ನುವುದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ಗೊತ್ತಿದೆ’ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಆಪಾದಿಸಿದ್ದಾರೆ.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿಯವರು ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಯತ್ನಿಸುತ್ತಿರುವುದು ನಮಗೆ ತಿಳಿದಿದೆ. ದೆಹಲಿಯಲ್ಲಿ ಏನು ಸಭೆ ಆಗಿದೆ, ಮುಂಬೈಯಲ್ಲಿ ಏನು ಚರ್ಚೆ ಆಗಿದೆ ಎಂಬೆಲ್ಲಾ ಮಾಹಿತಿ ಸರ್ಕಾರಕ್ಕೆ ಗೊತ್ತಿದೆ. ಆದರೆ, ಅವರು ನಮಗೆ ಏನೂ ಗೊತ್ತಿಲ್ಲ ಎಂದುಕೊಂಡಿದ್ದಾರೆ. ಅಲ್ಲಿ ನಡೆಯುತ್ತಿರುವ ಹಣಕಾಸು ವಹಿವಾಟು ಬಗ್ಗೆ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.
ಸರ್ಕಾರ ರಚಿಸುವ ಬಗ್ಗೆ ಯಡಿಯೂರಪ್ಪ ಆಸೆ ಪಟ್ಟುಕೊಂಡಿರುವ ಬಗ್ಗೆ ನಮ್ಮದೇನೂ ತಕಾರರಿಲ್ಲ. ಸರ್ಕಾರ ರಚನೆ ಮಾಡಲು ದುಡ್ಡು ಕೊಡುವವರು ಯಾರು ಎಂಬುದರ ಬಗ್ಗೆ ಈಗಾಗಲೇ ಸಾರ್ವಜನಿಕರಿಗೆ ಗೊತ್ತಾಗಿದೆ. ಸಿದ್ದರಾಮಯ್ಯ ಅವರೂ ಸಹ ಶಾಸಕರಿಗೆ ಹಣದ ಆಮಿಷ ಒಡ್ಡಿರುವ ಬಗ್ಗೆ ಹೇಳಿದ್ದಾರೆ. ಅಲ್ಲಿ ನಡೆಯುತ್ತಿರುವ ಹಣಕಾಸಿನ ವಹಿವಾಟಿನ ಬಗ್ಗೆ ತನಿಖೆಯಾಗಬೇಕು ಎಂದರು.