ಬೋಪಣ್ಣ ಅವರಿಗೆ ಗುವಾಹಟಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಪದೋನ್ನತಿ ನೀಡಿ ಕೇಂದ್ರ ಕಾನೂನು ಸಚಿವಾಲಯ ಆದೇಶ ಹೊರಡಿಸಿದೆ.

ಬೆಂಗಳೂರು : ಕರ್ನಾಟಕ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಎ.ಎಸ್‌.ಬೋಪಣ್ಣ ಅವರಿಗೆ ಗುವಾಹಟಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಪದೋನ್ನತಿ ನೀಡಿ ಕೇಂದ್ರ ಕಾನೂನು ಸಚಿವಾಲಯ ಆದೇಶ ಹೊರಡಿಸಿದೆ.

ನ್ಯಾಯಮೂರ್ತಿ ಎ.ಎಸ್‌.ಬೋಪಣ್ಣ ಅವರನ್ನು ಗುವಾಹಟಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ನೇಮಕ ಮಾಡಲು ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯ್‌ ನೇತೃತ್ವದ ಕೊಲಿಜಿಯಂ ಅ.9ರಂದು ನಿರ್ಧಾರ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಕೇಂದ್ರ ಸರ್ಕಾರವು ಆ ಶಿಫಾರಸಿಗೆ ಒಪ್ಪಿಗೆ ಸೂಚಿಸಿ ಅಧಿಸೂಚನೆ ಹೊರಡಿಸಿದೆ.

ಎ.ಎಸ್‌.ಬೋಪಣ್ಣ ಅವರು 1959ರ ಮೇ 20ರಂದು ಜನಿಸಿದ್ದು, 1984ರಲ್ಲಿ ವಕೀಲಿಕೆ ಆರಂಭಿಸಿದ್ದರು. ಸಿವಿಲ್‌, ಸಾಂವಿಧಾನಿಕ ಮತ್ತು ಕಂಪನಿ ವ್ಯಾಜ್ಯ ಮತ್ತು ಸೇವಾ ವಿಷಯಗಳಲ್ಲಿ ಪರಿಣತಿ ಹೊಂದಿದ್ದಾರೆ. ಅವರ ಸೇವಾ ಅನುಭವ ಪರಿಗಣಿಸಿ 2006ರಲ್ಲಿ ಅವರನ್ನು ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಿಸಲಾಗಿತ್ತು. 2007ರಲ್ಲಿ ಅವರ ಸೇವೆ ಕಾಯಂ ಮಾಡಲಾಗಿತ್ತು.