ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಅಹ್ಮದ್ ಪಟೇಲ್ ಅವರು ರಾಜ್ಯಸಭೆಗೆ ಆಯ್ಕೆಯಾಗುವುದಿಲ್ಲ. ಅವರ ಸೋಲು ಖಚಿತ. ನಾನು ಭವಿಷ್ಯ ಹೇಳುತ್ತಿಲ್ಲ. ಬಿಜೆಪಿಯ ಮೂರನೇ ಅಭ್ಯರ್ಥಿಗೆ ಚುನಾವಣೆಯಲ್ಲಿ ಗೆಲುವು ನೂರಕ್ಕೆ ನೂರರಷ್ಟು ಖಚಿತ

ಬೆಂಗಳೂರು(ಜು.29): ಕಾಂಗ್ರೆಸ್‌ನ ಅಧಿನಾಯಕಿ ಸೋನಿಯಾ ಗಾಂಧಿ ಅವರ ರಾಜಕೀಯ ಕಾರ್ಯದರ್ಶಿ ಅಹಮದ್ ಪಟೇಲ್ ಅವರು ಗುಜರಾತ್‌ನಿಂದ ರಾಜ್ಯಸಭೆಗೆ ಆಯ್ಕೆಯಾಗುವುದಿಲ್ಲ ಮತ್ತು ರೆಸಾರ್ಟ್‌ನಲ್ಲಿ ಶಾಸಕರನ್ನು ಮುಚ್ಚಿಟ್ಟರೂ ಮತ್ತಷ್ಟು ಶಾಸಕರು ಪಕ್ಷ ತೊರೆಯುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜ್ಞಾನಜ್ಯೋತಿ ಸಭಾಗಂಣದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸಾಂವಿಧಾನಿಕ ಸ್ಥಾನಮಾನ ನೀಡುವ ಕುರಿತ ವಿಚಾರ ಸಂಕಿರಣ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಅಹ್ಮದ್ ಪಟೇಲ್ ಅವರು ರಾಜ್ಯಸಭೆಗೆ ಆಯ್ಕೆಯಾಗುವುದಿಲ್ಲ. ಅವರ ಸೋಲು ಖಚಿತ. ನಾನು ಭವಿಷ್ಯ ಹೇಳುತ್ತಿಲ್ಲ. ಬಿಜೆಪಿಯ ಮೂರನೇ ಅಭ್ಯರ್ಥಿಗೆ ಚುನಾವಣೆಯಲ್ಲಿ ಗೆಲುವು ನೂರಕ್ಕೆ ನೂರರಷ್ಟು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಗುಜರಾತ್‌ನಿಂದ ರೆಸಾರ್ಟ್‌ಗೆ ಶಾಸಕರನ್ನು ಕರೆತರಲಾಗಿದೆ. ರೆಸಾರ್ಟ್‌ನಲ್ಲಿ ಶಾಸಕರನ್ನು ಮುಚ್ಚಿಟ್ಟರೂ ಮತ್ತಷ್ಟು ಶಾಸಕರು ಪಕ್ಷ ತೊರೆಯುವುದನ್ನು ತಪ್ಪಿಸಲು ಸಾಧ್ಯವಿಲ್ಲ. ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿ ಸೇರ್ಪಡೆಗೆ ಗುಜರಾತಿನಲ್ಲಿ ಕಾಂಗ್ರೆಸ್ ಶಾಸಕರು ತುದಿಗಾಲಲ್ಲಿ ನಿಂತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆ ನೋಡಿ ಕಾಂಗ್ರೆಸ್ ಶಾಸಕರು ಸ್ವಯಂಪ್ರೇರಿತರಾಗಿ ಬಿಜೆಪಿಗೆ ಬರುತ್ತಿದ್ದಾರೆ. ಈ ಬೆಳವಣಿಗೆಯನ್ನು ಕಂಡ ಕಾಂಗ್ರೆಸ್ ಭಯಪಟ್ಟಿದೆ. ಅದಕ್ಕಾಗಿ ಶಾಸಕರನ್ನು ರಕ್ಷಣೆ ಮಾಡಲು ರೆಸಾರ್ಟ್‌ಗೆ ಕರೆತರಲಾಗಿದೆ. ಬಿಜೆಪಿಯು ಕುದುರೆ ವ್ಯಾಪಾರ ಮಾಡುವ ಪ್ರಶ್ನೆಯೇ ಇಲ್ಲ. ಆದರೆ, ಎಷ್ಟೇ ರಕ್ಷಣೆ ನೀಡಿದರೂ ಕಾಂಗ್ರೆಸ್ ಶಾಸಕರು ಬಿಜೆಪಿ ಸೇರ್ಪಡೆಯಾಗುವುದು ಖಚಿತ ಎಂದು ನುಡಿದರು.

ಕೇಂದ್ರ ಸಚಿವ ಅನಂತ್‌ಕುಮಾರ್ ಮಾತನಾಡಿ, ಗುಜರಾತ್‌ನಲ್ಲಿ ಪ್ರಸ್ತುತ ತೀವ್ರ ನೆರೆ ಪರಿಸ್ಥಿತಿ ಇದೆ. ಇಂತಹ ಪರಿಸ್ಥಿತಿಯಲ್ಲಿ ಗುಜರಾತ್ ಕಾಂಗ್ರೆಸ್ ಶಾಸಕರು ರಾಜ್ಯದಲ್ಲಿ ರೆಸಾರ್ಟ್‌ನಲ್ಲಿ ಮೋಜು ಮಾಡುತ್ತಿದ್ದಾರೆ. ಇದನ್ನು ಗಮನಿಸಿದರೆ ಕಾಂಗ್ರೆಸ್ ಪರಿಸ್ಥಿತಿ ಎಲ್ಲಿಗೆ ಬಂದಿದೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಕಾಂಗ್ರೆಸ್‌ನ ಅಂತರಿಕ ಜಗಳದಿಂದ ಅದು ಅವಸಾನದ ಅಂಚು ತಲುಪಿದೆ. ಕಾಂಗ್ರೆಸ್ ಯಾವಾಗ ಬೇಕಾದರೂ ಕುಸಿಯುವ ಸ್ಥಿತಿಯಲ್ಲಿದ್ದು, ದೇಶದಲ್ಲಿ ಕಾಂಗ್ರೆಸ್ ಕೊನೆಗಣನೆ ಆರಂಭವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಬಿಹಾರದಲ್ಲಿ ಈಗಾಗಲೇ ಬಿಜೆಪಿ ಮೈತ್ರಿ ಸರ್ಕಾರ ರಚನೆಯಾಗಿದೆ. ಬೇರೆ ರಾಜ್ಯಗಳಲ್ಲೂ ಕಾಂಗೆಸ್ ನೆಲೆ ಕಳೆದುಕೊಳ್ಳುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಬರದ ಬಗ್ಗೆ ಗಮನ ಕೊಡುವ ಬದಲು ರೆಸಾರ್ಟ್ ರಾಜಕಾರಣ ಪ್ರಾರಂಭಿಸಿ ಆ ಕಡೆ ಗಮನಹರಿಸಿದ್ದಾರೆ. ಗುಜರಾತ್ ಕಾಂಗ್ರೆಸ್ ಶಾಸಕರಿಗೆ ಜವಾಬ್ದಾರಿ ಇದ್ದರೆ ತಮ್ಮ ರಾಜ್ಯಕ್ಕೆ ತೆರಳಿ ನೆರೆ ಸಂತ್ರಸ್ತರಿಗೆ ನೆರವಾಗಬೇಕು. ಅದನ್ನು ಬಿಟ್ಟು ರೆಸಾರ್ಟ್ ರಾಜಕಾರಣ ಮಾಡುವುದು ಸರಿಯಲ್ಲ ಎಂದು ಹೇಳಿದರು.

(ಕನ್ನಡಪ್ರಭ ವಾರ್ತೆ)