ದುರಾಡಳಿತ ಎಲ್ಲೆ ಮೀರಿದೆ – ರಾಷ್ಟ್ರಪತಿ ಆಡಳಿತ ಜಾರಿ ಮಾಡಿ : ಬಿಎಸ್’ವೈ
ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಭ್ರಷ್ಟಾಚಾರ ಮಿತಿ ಮೀರಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದಾರೆ.
ಬೆಂಗಳೂರು: ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಭ್ರಷ್ಟಾಚಾರ ಮಿತಿ ಮೀರಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದಾರೆ.
ಶುಕ್ರವಾರ ಸಂಜೆ ಬಿಜೆಪಿ ಕಚೇರಿಯಲ್ಲಿ ಮೈಸೂರು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್. ಚಂದ್ರಶೇಖರ್ ಮತ್ತಿತರರನ್ನು ಪಕ್ಷಕ್ಕೆ ಬರಮಾಡಿಕೊಂಡ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.
ಕಾಂಗ್ರೆಸ್ ಅವಧಿಯಲ್ಲಿ ರಾಜ್ಯದಲ್ಲಿ 7748 ಕೊಲೆಯಾಗಿದ್ದು, 5542 ದರೋಡೆಗಳು ನಡೆದಿವೆ. ದಲಿತರ ಮೇಳೆ 9909 ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. 7781 ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ.
ಜನಸಾಮಾನ್ಯರಿಗೆ ನ್ಯಾಯ ಎನ್ನುವುದು ಮರೀಚಿಕೆಯಾಗಿದೆ. ಲೋಕಾಯುಕ್ತರಿಗೆ ರಕ್ಷಣೆ ಇಲ್ಲದಂತಾಗಿದೆ. ಕಾಂಗ್ರೆಸ್ ಸರ್ಕಾರವು ಆಡಳಿತದಲ್ಲಿರಲು ಯಾವುದೇ ನೈತಿಕತೆ ಇಲ್ಲ. ದುರಾಡಳಿತ ಎಲ್ಲೆ ಮೀರಿದೆ. ಹೀಗಾಗಿ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು ಎಂದು ಆಗ್ರಹಿಸಿದರು.
ಲೋಕಾಯುಕ್ತ ಮೇಲಿನ ದಾಳಿ ಮೂಲಕ ರಾಜ್ಯದ ಹೆಸರನ್ನು ಜಾಗತಿಕ ಮಟ್ಟದಲ್ಲಿ ಹಾಳು ಮಾಡಲಾಗಿದೆ. ನ್ಯಾಯಮೂರ್ತಿಗಳಿಗೆ ರಕ್ಷಣೆ ನೀಡಲಾಗದ ಸರ್ಕಾರವು ಅಧಿಕಾರದಲ್ಲಿ ಮುಂದುವರಿಯಬಾರದು ಎಂದರು.