ಸ್ವದೇಶಿ ಔಷಧಗಳ ಬಳಕೆಗೆ ಮೋಹನ್ ಭಾಗ್ವತ್ ಕರೆ
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥರಾದ ಮೋಹನ್ ಭಾಗ್ವತ್ ಸ್ವದೇಶಿ ಔಷಧಗಳನ್ನು ಬಳಕೆ ಮಾಡಬೇಕು ಎಂದು ಕರೆ ನೀಡಿದ್ದಾರೆ.
ಕೊಲ್ಲಾಪುರ್ : ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥರಾದ ಮೋಹನ್ ಭಾಗ್ವತ್ ಅವರು ಬೇರೆ ದೇಶಗಳಲ್ಲಿ ತಯಾರಾದ ಔಷಧಗಳನ್ನು ಕೊಳ್ಳುವುದನ್ನು ನಿಲ್ಲಿಸಿ, ಸ್ವದೇಶಗಳಲ್ಲಿ ತಯಾರಾಗುವ ಔಷಧಗಳನ್ನು ಕೊಳ್ಳಬೇಕೆಂದು ಕರೆ ನೀಡಿದ್ದಾರೆ.
ಮಹಾರಾಷ್ಟ್ರದ ಸಿದ್ದಾರ್ಥ್ ಆಸ್ಪತ್ರೆಯ ಸಂಶೋಧನಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು ಈ ವಿಚಾರ ತಿಳಿಸಿದ್ದಾರೆ. ಇಂದು ಜನರಿಗೆ ಆರೋಗ್ಯ ಮತ್ತು ಶಿಕ್ಷಣವು ಆಹಾರದಷ್ಟೇ ಅಗತ್ಯವಾದುದಾಗಿದೆ ಎಂದೂ ಕೂಡ ಅವರು ಹೇಳಿದ್ದಾರೆ.
ಗ್ರಾಮೀಣ ಪ್ರದೇಶದಲ್ಲಿ ಜನರಿಗೆ ಸೂಕ್ತ ಆರೋಗ್ಯ ಸೌಲಭ್ಯಗಳು ದೊರೆಯುತ್ತಿಲ್ಲ. ಗ್ರಾಮೀಣ ಪ್ರದೇಶಗಳಲ್ಲಿ ವೈದ್ಯಕೀಯ ಸೌಲಭ್ಯಗಳೂ ಸಿಗದೇ ಜನರು ಸಮಸ್ಯೆ ಎದುರಿಸುತ್ತಿದ್ದಾರೆ. ನಗರಗಳಲ್ಲಿ ಶಿಕ್ಷಣ ಪೂರೈಸಿದ ವೈದ್ಯರು ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸಲು ನಿರಾಕರಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ಹಲವು ರೀತಿಯ ವೈದ್ಯಕೀಯ ಸೌಲಭ್ಯ ಹಾಗೂ ಡಯಾಗ್ನೋಸಿಸ್ ಸೌಲಭ್ಯಗಳು ದೊರೆಯುತ್ತಿಲ್ಲ. ಆದರೆ ಎಲ್ಲಾ ರೀತಿಯ ಆರೋಗ್ಯ ಸೌಲಭ್ಯಗಳೂ ಕೂಡ ಒಂದೇ ಸೂರಿನಡಿಯಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ಆರೋಗ್ಯ ಸೌಲಭ್ಯ ಸಿಗುವಂತಾಗಬೇಕು ಎಂದು ಹೇಳಿದರು. ಸ್ವದೇಶಿ ಔಷಧಗಳ ಬಳಕೆಯಿಂದ ಆರೋಗ್ಯ ಕಾಪಾಡಿಕೊಳ್ಳಲು ಕರೆ ನೀಡಿದ್ದಾರೆ.