ಬಡ್ತಿ ಮೀಸಲಾತಿ ರದ್ದುಗೊಳಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದ್ದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.

ಬೆಂಗಳೂರು (ಆ.07): ಬಡ್ತಿ ಮೀಸಲಾತಿ ರದ್ದುಗೊಳಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದ್ದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.

ವಿಧಾನಸೌಧದಲ್ಲಿಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬಡ್ತಿ ಮೀಸಲಾತಿ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಹಿನ್ನಲೆಯಲ್ಲಿ ಸುಧೀರ್ಘ ಚರ್ಚೆ ನಡೆಯಿತು. ಈ ಚರ್ಚೆಯ ವೇಳೆ ಇದೇ 9ರಂದು ರಾಜ್ಯ ಸರ್ಕಾರ ಅಫಿಡವಿಟ್ ಸಲ್ಲಿಸಬೇಕಿರುವ ಹಿನ್ನಲೆಯಲ್ಲಿ ಸುಗ್ರೀವಾಜ್ಞೆ ಹೊರಡಿಸಲು ತೀರ್ಮಾನಿಸಿ ನಾಳೆಯೇ ರಾಜ್ಯಪಾಲರಿಗೆ ಕಳುಹಿಸಲು ನಿರ್ಧರಿಸಲಾಗಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭ ನೇತೃತ್ವದ ಸಮಿತಿ ಕರ್ನಾಟಕ ಕಾನೂನು ಆಯೋಗಕ್ಕೆ ನೀಡಿದ್ದ ವರದಿ ಆಧರಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಆ ಪ್ರಕಾರ 1978ರ ಕಾಯ್ದೆಯ ಸೆಕ್ಷನ್ 3 ಹಾಗೂ 4 ಕ್ಕೆ ತಿದ್ದುಪಡಿ ಮಾಡಿ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ಯಾವುದೇ ಅಧಿಕಾರಿ ಹಿಂಬಡ್ತಿ ಹೊಂದದಂತೆ ತಡೆಯಲು ಉದ್ದೇಶಿಸಲಾಗಿದೆ. ಇಂಧನ, ನೀರಾವರಿ ಹಾಗೂ ಲೋಕೋಪಯೋಗಿ ಇಲಾಖೆಯ ಸುಮಾರು 100ಕ್ಕೂ ಹೆಚ್ಚು ಅಧಿಕಾರಿಗಳು ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ತೀರ್ಮಾನದಿಂದ ನಿಟ್ಟುಸಿರು ಬಿಡುವಂತಾಗಿದೆ.

ಇದನ್ನು ಹೊರತುಪಡಿಸಿ ಸಚಿವ ಸಂಪುಟ ಸಭೆಯ ಪ್ರಮುಖ ತೀರ್ಮಾನಗಳ ವಿವರ ಹೀಗಿದೆ.


* ಭದ್ರಾವತಿ ವಿಐಎಸ್​ಎಲ್​ಗೆ 150 ಹೆಕ್ಟೇರ್​ ಗಣಿಭೂಮಿ ಮಂಜೂರು ಮಾಡಲು ಸಚಿವ ಸಂಪುಟ ಸಭೆ ತೀರ್ಮಾನ
* ನಷ್ಟದಲ್ಲಿರುವ ಭದ್ರಾವತಿ ವಿಐಎಸ್ಎಲ್​ಗೆ ಪುನಶ್ಚೇತನ ನೀಡುವ ಉದ್ದೇಶದಿಂದ ಗಣಿಭೂಮಿ ಮಂಜೂರು
* ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ರಮಣದುರ್ಗ ಬ್ಲಾಕ್ ವ್ಯಾಪ್ತಿಯ 150 ಹೆಕ್ಟೇರ್ ಗಣಿ ಪ್ರದೇಶ ಭದ್ರಾವತಿ ವಿಐಎಸ್​ಎಲ್​ಗೆ ಮೀಸಲು
* ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ಆಧುನಿಕ ಕಸಾಯಿಖಾನೆ ಸ್ಥಾಪಿಸಲು ತೀರ್ಮಾನ
* ರಾಜ್ಯ ಸರ್ಕಾರವೇ ಖಾಸಗಿ ಸಂಸ್ಥೆಯ ಮೂಲಕ ಕಾಲುಬಾಯಿ ಜ್ವರಕ್ಕೆ ಲಸಿಕೆ ತಯಾರಿಸಲು ತೀರ್ಮಾನ
* ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮವು ಹಿಂದುಳಿದ ವರ್ಗಗಳ ಆಯೋಗದಿಂದ 30 ಕೋಟಿ ಸಾಲ ಪಡೆಯಲು ಖಾತರಿ ನೀಡಲು ತೀರ್ಮಾನ
* ಸಂಗೊಳ್ಳಿ ರಾಯಣ್ಣ ಶೌರ್ಯ ಅಕಾಡೆಮಿ ಸ್ಥಾಪಿಸಲು ರಾಯಣ್ಣ ಅಭಿವೃದ್ಧಿ ಪ್ರಾಧಿಕಾರಕ್ಕೆ 100 ಎಕರೆ ಉಚಿತ ಭೂಮಿ ನೀಡಲು ತೀರ್ಮಾನ
* ನೂತನ ಸಾಂಸ್ಕೃತಿಕ ನೀತಿ ಜಾರಿಗೆ ಸಚಿವ ಸಂಪುಟ ಒಪ್ಪಿಗೆ